ಜೆಪಿ ನಡ್ಡಾ ಜೊತೆ ಏನೇನು ಚರ್ಚೆ? ಭೇಟಿ ಬಳಿಕ ಬಿವೈ ವಿಜಯೇಂದ್ರ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 09, 2024 | 4:20 PM

ನವದೆಹಲಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದವರು ರಾಜ್ಯಕ್ಕೆ ಯಾವುದೇ ಅನ್ಯಾಯ ಆಗಿಲ್ಲ. ದೇಶದ ಎಲ್ಲಾ ರಾಜ್ಯಗಳಿಗೂ ವಿಶೇಷ ಅನುದಾನ ಬಂದ್ ಮಾಡಿದೆ. ಜನರಿಗೆ ಕೊಟ್ಟ ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಲೋಪದೋಷ ಮುಚ್ಚಿ ಹಾಕಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿ, ಫೆಬ್ರವರಿ 9: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ರಾಜ್ಯದ ಬೆಳವಣಿಗೆ ಬಗ್ಗೆ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದವರು, ರಾಜ್ಯದ ಬೆಳವಣಿಗೆ ಬಗ್ಗೆ ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡಿದೆ. ವಿಧಾನ ಪರಿಷತ್, ರಾಜ್ಯಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಿದೆ. ಜೆ.ಪಿ.ನಡ್ಡಾ ನನ್ನ ಕಾರ್ಯವೈಖರಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಹೊಸ ದಾಖಲೆ ಬರೆಯಲಿದ್ದೇವೆ ಎಂದು ಭರವಸೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಮಾಜಿ ಸಚಿವ ಸೋಮಣ್ಣಗೆ ರಾಜ್ಯಸಭೆ ಟಿಕೆಟ್​ ನೀಡುವ ವಿಚಾರವಾಗಿ ಮಾತನಾಡಿದ ಅವರು, ಎಲ್ಲವೂ ಚರ್ಚೆಯಾಗಿದೆ, ನಮ್ಮ ವರಿಷ್ಠರು ತಿರ್ಮಾನ ಮಾಡುತ್ತಾರೆ. ನಾಡಿದ್ದು ಅಮಿತ್ ಶಾ ಮೈಸೂರಿಗೆ ಬಂದಾಗ ಚರ್ಚೆಯಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ ವೇಳೆ ಶಾಸಕ ಯತ್ನಾಳ್ ಭೇಟಿಯಾಗಿದೆ. ಇದಕ್ಕೆ ವಿಶೇಷ ಒತ್ತು ಕೊಡುವ ಅಗತ್ಯ ಇಲ್ಲ. ಸುಮಲತಾ ಪ್ರಧಾನಿ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ನಾಡಿದ್ದು ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಚರ್ಚೆಯಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ಯಾವುದೇ ಅನ್ಯಾಯ ಆಗಿಲ್ಲ

ಜನರಿಗೆ ಕೊಟ್ಟ ಭರವಸೆ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಲೋಪದೋಷ ಮುಚ್ಚಿ ಹಾಕಿಕೊಳ್ಳಲು ಕೇಂದ್ರದ ಮೇಲೆ ಆರೋಪ ಮಾಡಲಾಗಿದೆ. ಇದು ಸಿಎಂ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ರಾಜ್ಯದ ಮರ್ಯಾದೆ ತೆಗೆಯುವ ಪ್ರಯತ್ರ ಮಾಡಿದರು. ವಿತ್ತ ಸಚಿವರು ಕಾಂಗ್ರೆಸ್​ನವರ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ರಾಜ್ಯಕ್ಕೆ ಯಾವುದೇ ಅನ್ಯಾಯ ಆಗಿಲ್ಲ.

ಇದನ್ನೂ ಓದಿ: BY Vijayendra: ದೆಹಲಿಯಲ್ಲಿ ಜೆಪಿ ನಡ್ಡಾ, ಜೋಶಿ ಭೇಟಿಯಾದ ವಿಜಯೇಂದ್ರ, ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ

ದೇಶದ ಎಲ್ಲಾ ರಾಜ್ಯಗಳಿಗೂ ವಿಶೇಷ ಅನುದಾನ ಬಂದ್ ಮಾಡಿದೆ. ವಿಶೇಷ ಅನುದಾನ ಐದು ವರ್ಷಕ್ಕೆ ಸೀಮಿತವಾಗಿತ್ತು. ಕಾಂಗ್ರೆಸ್ಸಿಗರು ಕೇಂದ್ರದ ಜೊತೆಗಿನ ಸಂಬಂಧ ಹಾಳು ಮಾಡುತ್ತಿದ್ದಾರೆ. ಸಿಎಂ ಆರೂವರೆ ಕೋಟಿ ಜನರ ಪ್ರತಿನಿಧಿ, ಇದನ್ನು ಮರೆಯಬಾರದು. ಕಳೆದ ಬಾರಿ ಅಪಪ್ರಚಾರದಿಂದ ನಾವು ಸೋತಿದ್ದೇವೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ

ಕೆಎಸ್​ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಬಿವೈ ವಿಜಯೇಂದ್ರ, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇನೆ, ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ ಇದೆ. ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಎನ್ನುವುದು ಜನರ ಅಭಿಪ್ರಾಯ. ಸರ್ವೆಗಳು ಪೂರ್ಣ ಪ್ರಮಾಣದಲ್ಲಿ ಸತ್ಯ ಇಲ್ಲ. ನಾವು 28 ಸ್ಥಾನಗಳನ್ನು ಗೆಲ್ಲಲಿದೆ. ಹೊಸ ದಾಖಲೆ ನಿರ್ಮಾಣ ಮಾಡಲಿದ್ದೇವೆ. ಉತ್ಪೇಕ್ಷೆ ಎನಿಸಬಹುದು ಆದರೂ ಅದು ಸತ್ಯ ಎಂದಿದ್ದಾರೆ.

ಶನಿವಾರ ಮೈಸೂರಿಗೆ ಅಮಿತ್ ಶಾ

ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಫೆಬ್ರವರಿ 10ರಂದು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಆದರೆ, ಅವರ ಪೂರ್ವನಿಗದಿತ ಭೇಟಿಯಲ್ಲಿ ತುಸು ಬದಲಾವಣೆ ಆಗಿದೆ. ಬೆಂಗಳೂರಿನಲ್ಲಿ ನಡೆಸಬೇಕಿದ್ದ ಸಭೆ ರದ್ದಾಗಿದ್ದು, ಮೈಸೂರಿಗಷ್ಟೇ ಭೇಟಿ ನೀಡಲಿದ್ದಾರೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಮೋದಿ ಭೇಟಿಯಾದ ಸುಮಲತಾ ಅಂಬರೀಶ್, ಪ್ರಧಾನಿ ಮಾತಿಗೆ ಸಂಸದೆ ಫುಲ್ ಖುಷ್

ಶನಿವಾರ ರಾತ್ರಿ ಮೈಸೂರಿಗೆ ತಲುಪಲಿರುವ ಶಾ ಅಲ್ಲಿ ವಾಸ್ತವ್ಯ ಹೂಡಿ 11ರಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ನಂತರ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.