ಬೆಂಗಳೂರು: ಟೊಯೋಟಾ ಕಂಪನಿಯು 40 ಕಾರ್ಮಿಕರನ್ನು ಏಕಾಏಕಿ ವಜಾ ಮಾಡಿದ್ದನ್ನು ವಿರೋಧಿಸಿ ಕಂಪೆನಿಯ ಎದುರು ಅಹೋರಾತ್ರಿ ಧರಣಿ ನಡೆಸಲಾಗಿತ್ತು. ಇದಾದ ಬೆನ್ನಲ್ಲೇ ಸಮಸ್ಯೆ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿ ಯಡಿಯೂಪ್ಪ ನೀಡಿದ್ದರು. ಅಂತೆಯೇ ಇಂದು ಸಂಧಾನ ಸಭೆ ನಡೆಸಿದ ಬಿಎಸ್ವೈ ಮಹತ್ವದ ಚರ್ಚೆ ನಡೆಸಿದ್ದಾರೆ.
ಕಾರ್ಖಾನೆಯಲ್ಲಿ ಕೆಲಸದ ಅವಧಿಯಲ್ಲಿ ತೀರಾ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತಿದೆ. ಎರಡು ಗಂಟೆ ನಿರಂತರವಾಗಿ ಕೆಲಸ ಮಾಡಿದ ನಮಗೆ ಕೇವಲ 10 ನಿಮಿಷ ಅಷ್ಟೇ ಬ್ರೇಕ್ ನೀಡುತ್ತಿದ್ದಾರೆ. ಶೌಚಾಲಯಕ್ಕೆ ತೆರಳೋಕೂ ಸಮಯವಿಲ್ಲ. ಹೆಚ್ಚಿನ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ಕಾರ್ಮಿಕರ ಮೇಲೆ ಒತ್ತಡ ಹೇರಲಾಗುತ್ತಿದೆ. ಇದನ್ನು ಪ್ರಶ್ನಿಸಿದ್ದಕ್ಕೆ ಕಾರ್ಮಿಕ ಸಂಘದ ಪ್ರತಿನಿಧಿಗೆ ಅಮಾನತು ಶಿಕ್ಷೆ ನೀಡಲಾಗಿದೆ. ಜೊತೆಗೆ ಊಟದ ಸಮಯ, ಶೌಚಾಲಯಕ್ಕೆ ಹೋದ ಸಮಯವನ್ನು ಲೆಕ್ಕ ಹಾಕಿ ಸಂಬಳಕ್ಕೆ ಕತ್ತರಿ ಹಾಕುತ್ತಿದ್ದಾರೆ. ಕಾರ್ಮಿಕರನ್ನು ಕೀಳಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ನೌಕರರು ಆರೋಪಿಸಿದ್ದರು.
ಈ ಎಲ್ಲ ವಿಚಾರವನ್ನು ಬಗೆಹರಿಸುವ ನಿಟ್ಟಿನಲ್ಲಿ ಸಿಎಂ ಬಿಎಸ್ವೈ ಟೊಯೋಟಾ ಅಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ಹಾಗೂ ಇತರ ಅಧಿಕಾರಿಗಳನ್ನು ಸಿಎಂ ಭೇಟಿ ಮಾಡಿ ಮಾತುಕತೆ ನಡೆಸಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್, ಸಚಿವರಾದ ಜಗದೀಶ್ ಶೆಟ್ಟರ್, ಶಿವರಾಮ್ ಹೆಬ್ಬಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.