ಬಿಜೆಪಿ ಅವಧಿಯ ಕೋವಿಡ್ ಹಗರಣದ ವಿಸ್ತೃತ ಮಾಹಿತಿಗೆ ರಚನೆಯಾಗಲಿದೆ ಮತ್ತೊಂದು ಸಮಿತಿ: ಅಧಿಕಾರಿಗಳಗೆ ಢವಢವ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿತ್ತು ಎನ್ನಲಾದ ಕೋವಿಡ್ ಹಗರಣದ ಆರೋಪ ಕುರಿತು ಬುಧವಾರ ಸಂಪುಟ ಉಪಸಮಿತಿ ಸಭೆ ನಡೆಸಿತು. ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಪುಟ ಉಪಸಮಿತಿ ಸಭೆಯಲ್ಲಿ, ನ್ಯಾ. ಮೈಕೆಲ್ ಡಿ ಕುನ್ಹಾ ಸಲ್ಲಿಸಿದ ಮಧ್ಯಂತರ ವರದಿಯ ಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ಈ ವರದಿ ಪರಿಶೀಲನೆಗೆ ಮತ್ತೊಂದು ಸಮಿತಿ ರಚಿಸಲು ನಿರ್ಧರಿಸಲಾಯಿತು.

ಬೆಂಗಳೂರು, ಮಾರ್ಚ್ 27: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮದ (Covid Scam) ಕುರಿತು ಈಗಾಗಲೇ ನ್ಯಾ. ಮೈಕಲ್ ಡಿ ಕುನ್ಹಾ ಸಮಿತಿ ಮಧ್ಯಂತರ ವರದಿ ಸಲ್ಲಿಕೆ ಮಾಡಿದೆ. ಈ ವರದಿಯ ಆಧಾರದ ಮೇಲೆ ಬುಧವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಂಪುಟ ಉಪಸಮಿತಿ (Cabinet Subcommittee Meeting) ಸಭೆ ನಡೆಯಿತು. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು. ಸುದೀರ್ಘ ಎರಡು ತಾಸುಗಳ ಕಾಲ ನಡೆದ ಸಭೆಯಲ್ಲಿ ಉಪಸಮಿತಿಯು ಹಲವು ತೀರ್ಮಾನಗಳನ್ನು ಕೈಗೊಂಡಿದೆ.
ಸಂಪುಟ ಉಪ ಸಮಿತಿ ತೀರ್ಮಾನಗಳೇನು?
ಪ್ರತಿ 15 ದಿನಕ್ಕೊಮ್ಮೆ ಸಭೆ ಸೇರಲು ನಿರ್ಧಾರ ಮಾಡಲಾಗಿದೆ. ಕೋವಿಡ್ ವೇಳೆ ಚಾಮರಾಜನಗರ ಆಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಪ್ರಕರಣ ಸಂಬಂಧ, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿ ತಿರಸ್ಕಾರ ಮಾಡಿ, ನ್ಯಾ.ಕುನ್ಹಾ ಅವರಿಗೆ ಸಂಪುಟ ಉಪಸಮಿತಿ ಸಭೆ ಮರು ತನಿಖೆಯ ಜವಾಬ್ದಾರಿ ನೀಡಲಾಗಿದೆ.
ಡಿಕೆ ಶಿವಕುಮಾರ್ ಹೇಳಿದ್ದೇನು?
ಕೋವಿಡ್ ಅಕ್ರಮಗಳ ಬಗ್ಗೆ ಮೈಕೆಲ್ ಕುನ್ಹಾ ಅವರು ಅತ್ಯಂತ ಸಮಗ್ರವಾಗಿ ವರದಿಯನ್ನು ನೀಡಿದ್ದಾರೆ. ಅದನ್ನು ಕೂಲಂಕುಷವಾಗಿ ಅಧ್ಯಯನ ಮಾಡಬೇಕಾಗುತ್ತದೆ. ಇದರಲ್ಲಿ ಕಾನೂನು ಸಂಬಂಧಿತ, ಕ್ರಿಮಿನಲ್ ಸಂಬಂಧಿತ ವಿಚಾರಗಳನ್ನು ಗಮನಿಸಲು ಸಹಾಯ ತೆಗೆದುಕೊಳ್ಳಲಾಗುತ್ತಿದೆ. ಸುಮಾರು 29 ಜನ ಅಧಿಕಾರಿಗಳು ಸಮಿತಿ ನೀಡಿರುವ ನೋಟಿಸ್ ಗೆ ಉತ್ತರ ನೀಡಿಲ್ಲ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಕುನ್ಹಾ ಅವರು ವರದಿಯಲ್ಲಿ ಅನೇಕ ರಾಜಕಾರಣಿಗಳ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಇದರ ಬಗ್ಗೆ ನಮಗೂ ಅರಿವಿದೆ, ಸೂಕ್ತ ಕಾಲದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
15 ದಿನಗಳಿಗೊಮ್ಮೆ ಸಭೆ, ಸಮಿತಿಗೆ ಹಿರಿಯ ಅಧಿಕಾರಿಗಳ ನೇಮಕ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಧಿಕಾರಿಗಳ ಕೊರತೆ ಇರುವ ಕಾರಣಕ್ಕೆ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಸಮಿತಿಗೆ ನೇಮಕ ಮಾಡಿ ಅವರಿಗೂ ಕೆಲವು ಜವಾಬ್ದಾರಿಗಳನ್ನು ನೀಡಬೇಕು ಎಂದು ಸಭೆಯಲ್ಲಿ ಚರ್ಚಿಸಲಾಗಿದೆ. ಆರೋಗ್ಯ ಇಲಾಖೆ ನಡೆಸುವುದು ಪ್ರತಿ ದಿನವೂ ಸವಾಲಿನಿಂದ ಕೂಡಿರುವ ಕೆಲಸ. ಇಲಾಖೆ ಅಡಿಯಲ್ಲಿ 70 ಮೆಡಿಕಲ್ ಕಾಲೇಜುಗಳು ಬರುತ್ತವೆ. ದಿನವು ಹೊಸ ಸವಾಲುಗಳು ಎದುರಾಗುತ್ತವೆ. ಆದ ಕಾರಣ ಒಂದಷ್ಟು ಜವಾಬ್ದಾರಿಗಳನ್ನು ಹಿರಿಯ ಅಧಿಕಾರಿಗಳಿಗೆ ನೀಡಲಾಗುವುದು. ಸಂಪುಟ ಉಪ ಸಮಿತಿಯಿಂದ ಜಿಲ್ಲಾ ಆಸ್ಪತ್ರೆಗಳಿಗೆ ಭೇಟಿ, ಕೋವಿಡ್ ಸಮಯದಲ್ಲಿ ಖರೀದಿ ಮಾಡಿದ ಅನೇಕ ವೈದ್ಯಕೀಯ ಉಪಕರಣಗಳು ಕೆಲಸ ಮಾಡುತ್ತಿಲ್ಲ. ಇಡೀ ಸಮಿತಿಯ ಸದಸ್ಯರು ಔಷಧಿಗಳು, ಉಪಕರಣಗಳನ್ನು ವೀಕ್ಷಣೆ ಮಾಡುತ್ತಾರೆ. ಅನೇಕ ಕಡೆ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿಲ್ಲ ಎಂದು ಹೇಳಲಾಗಿದೆ. ಹಾಗಾದರೆ ಅದು ಏನಾಗಿದೆ ಎಂದು ಪರಿಶೀಲನೆ ಮಾಡುತ್ತೇವೆ. ಒಂದಷ್ಟನ್ನು ಉಗ್ರಾಣಗಳಿಗೆ, ಜಿಲ್ಲಾ ಕೇಂದ್ರಗಳಿಗೆ ಕಳಿಸಲಾಗಿದೆ ಎನ್ನುವ ಮಾಹಿತಿಯಿದೆ. ಅದಕ್ಕೆ ಸಮಿತಿಯವರು ಜಿಲ್ಲಾ ಕೇಂದ್ರಗಳ ಆಸ್ಪತ್ರೆಗಳಲ್ಲಿ, ಬೆಂಗಳೂರಿನಲ್ಲೂ ಪರಿಶೀಲನೆ ನಡೆಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಕುನ್ಹಾ ವರದಿ ದೊಡ್ಡದಾಗಿದ್ದು, ವಿಸ್ತೃತ ವರದಿಯ ಅಧ್ಯಯನಕ್ಕೆ ಹೆಚ್ಚುವರಿ ಅಧಿಕಾರಿಗಳು ಬೇಕಾಗಿದ್ದಾಗಿರೆ. ಹೀಗಾಗಿ ಎರಡು ಅಥವಾ ಮೂರು ಸದಸ್ಯರನ್ನೊಳಗೊಂಡ ಪ್ರತ್ಯೇಕ ತಂಡ ರಚಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಾನೂನು ಸಚಿವ ಹೆಚ್ಕೆ ಪಾಟೀಲ್ ಹೇಳಿದ್ದೇನು?
ಕೋವಿಡ್ ವೇಳೆ ಹೆಚ್ಚುವರಿಯಾಗಿ 77 ಕೋಟಿ ರೂ. ಹಣ ಪಾವತಿ ಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 111 ಜನರಿಗೆ ನೋಟಿಸ್ ನೀಡಲಾಗಿದೆ. ಈ ಪೈಕಿ 52 ಜನ ಸಮಯ ಕೇಳಿದ್ರೆ, 29 ಜನ ಉತ್ತರ ಕೊಡಲಿಲ್ಲ, 31 ಜನ ಉತ್ತರ ಕೊಟ್ಟಿದ್ದಾರೆ. ಪ್ರತಿಕ್ರಿಯೆ ನೀಡದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದ್ದು, ಕಾನೂನಾತ್ಮಕವಾಗಿ ಶಿಸ್ತಿನ ಕ್ರಮ ಕೈಗೊಳ್ಳಲು ಶಿಫಾರಸ್ಸು ಮಾಡಲಾಗಿದೆ. ವೆಂಡರ್ಸ್ ಹೆಚ್ಚುವರಿ ಹಣ ಪಡೆದುಕೊಂಡು ಮೆಟಿರಿಯಲ್ ತೆಗೆದುಕೊಂಡಿದ್ರೆ ವಸೂಲಾತಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅವಧಿ ಮೀರಿದ ಔಷಧಿಗಳಿಗೆ 57.51 ಲಕ್ಷ ಕೋಟಿ ರೂ. ಖರ್ಚು ಮಾಡಲಾಗಿದೆ. ಇದರಲ್ಲಿ 8.44 ಲಕ್ಷ ಕೋಟಿ ರೂ. ವಸೂಲಾಗಿದ್ದು, ಹೆಚ್ಚುವರಿ ಹಣ ಸ್ವೀಕಾರ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಂಸದೀಯ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಇದನ್ನೂ ಓದಿ: ಅಕ್ರಮವಾಗಿ ಮರ ಕಡಿದರೇ ಬೀಳುತ್ತೆ ಭಾರಿ ದಂಡ! ಶಿಕ್ಷೆ ಪ್ರಮಾಣ ಹೆಚ್ಚಳಕ್ಕೆ ಈಶ್ವರ ಖಂಡ್ರೆ ಸೂಚನೆ
ಸದ್ಯ ಕುನ್ಹಾ ವರದಿಯ ಪರಿಶೀಲನೆಗೆ ಮತ್ತೊಂದು ಸಮಿತಿ ರಚಿಸಲು ಸಂಪುಟ ಉಪಸಮಿತಿ ಸಭೆ ತೀರ್ಮಾನ ಕೈಗೊಂಡಿದೆ. ತನಿಖೆಯಲ್ಲಿ ಮತ್ತಷ್ಟು ಸತ್ಯಾಂಶ ಹೊರಬೀಳಲಿದ್ದು, ಜನಪ್ರತಿನಿಧಿಗಳಿಗೆ ಮಾತ್ರವಲ್ಲದೆ,ಅಧಿಕಾರಿಗಳಿಗೂ ಢವಢವ ಶುರುವಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:32 am, Thu, 27 March 25