
ಮಂಡ್ಯ, ಜುಲೈ 31: ತಮಿಳುನಾಡಿಗೆ (Tamil Nadu) ಕಾವೇರಿ ನೀರು (Cauvery Water) ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆ ತೀವ್ರಗೊಂಡಿದೆ. ಮಂಡ್ಯದಲ್ಲಿ ಗುರುವಾರ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಟೈರ್ಗೆ ಬೆಂಕಿ ಹಚ್ಚಲು ಯತ್ನ, ಉರುಳು ಸೇವೆ ಹಾಗೂ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ನೀರು ಬಿಡುಗಡೆಗೆ ವಿರೋಧಿಸಿ ಮಂಡ್ಯದಲ್ಲಿ ರೈತರು ಹಾಗೂ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದ ಹೋರಾಟಗಾರರು, ಹೆದ್ದಾರಿಯಲ್ಲೇ ಉರುಳು ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರೆ, ಟೈರ್ಗೆ ಬೆಂಕಿ ಹಚ್ಚಲು ಕೂಡ ಯತ್ನಿಸಿದರು. ತಮಿಳುನಾಡಿಗೆ ನೀರು ಬಿಡದಂತೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಮಂಡ್ಯ ಕಾಂಗ್ರೆಸ್ ಶಾಸಕ ರವಿ ಗಣಿಗ ಕೂಡ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿದರೆ ರೈತರೊಂದಿಗೆ ಸೇರಿಕೊಂಡು ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನೀರು ಹಂಚಿಕೆ ವಿಚಾರವಾಗಿ ಬಿಜೆಪಿ ನಾಯಕರು ಇಂದು ಕೆಆರ್ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಆರ್ಎಸ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ 1,500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಕಾವೇರಿ ವಿವಾದದ ಬಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅಭಿನಯದ ‘ಜನನಾಯಗನ್’ ಸಿನಿಮಾಗೂ ತಟ್ಟಿದೆ. ತಮಿಳುನಾಡು ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ವಿಜಯ್ ನಟನೆಯ ಸಿನಿಮಾ ಪ್ರದರ್ಶನಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.
ಮಂಡ್ಯದ ಗುರುಶ್ರೀ ಚಿತ್ರಮಂದಿರಕ್ಕೆ ತೆರಳಿದ ಪ್ರತಿಭಟನಾಕಾರರು ಸಿನಿಮಾ ಪ್ರದರ್ಶನವನ್ನು ವಿರೋಧಿಸಿ ಪೋಸ್ಟರ್ ಹರಿದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಚಿತ್ರಮಂದಿರದಲ್ಲಿ ‘ಜನನಾಯಗನ್’ ಪ್ರದರ್ಶನ ಸ್ಥಗಿತಗೊಂಡಿತು.
ಕಾವೇರಿ ನೀರು ವಿವಾದದ ಕಿಚ್ಚು ಮಂಡ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು.
ಹುಬ್ಬಳ್ಳಿಯಲ್ಲೂ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿದರು. ಕಾರವಾರದಲ್ಲೂ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗದ ಬೆಂಬಲವೂ ವ್ಯಕ್ತವಾಗಿದೆ. ನೆಲ, ಜಲ ಹಾಗೂ ಭಾಷೆಯ ವಿಚಾರದಲ್ಲಿ ಧಕ್ಕೆಯಾದರೆ ಫಿಲಂ ಚೇಂಬರ್ ಹೋರಾಟದೊಂದಿಗೆ ನಿಲ್ಲಲಿದೆ ಎಂದು ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲಾ ತಿಳಿಸಿದ್ದಾರೆ.
ಇದನ್ನೂ ಓದಿ: ಕಾವೇರಿ ನೀರು ಮಧ್ಯೆ ಕರ್ನಾಟಕಕ್ಕೆ ಮತ್ತೊಂದು ಶಾಕ್, ಮೇಕೆದಾಟು ಡಿಪಿಆರ್ ವಾಪಸ್
ಒಟ್ಟಿನಲ್ಲಿ, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವ ಆದೇಶದ ವಿರುದ್ಧ ಮಂಡ್ಯ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ಮತ್ತಷ್ಟು ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಕಂಡುಬರುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ