ತಮಿಳುನಾಡಿನ ಒತ್ತಡಕ್ಕೆ ಮಣಿಯಿತೇ ಕರ್ನಾಟಕ? 10 ಟಿಎಂಸಿ ನೀರು ಬಿಡಲಾಗುವುದು ಎಂದ ಡಿಸಿಎಂ ಡಿಕೆ ಶಿವಕುಮಾರ್

Cauvery water Dispute; ರೈತರ ವಿರೋಧದ ನಡುವೆಯೂ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ‌ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ಸೋಮವಾರ ಬಿಡುಗಡೆ ಮಾಡಲಾಗಿತ್ತು. ಕೆಆರ್​ಎಸ್​​ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಸದ್ಯ ಜಲಾಶಯದಲ್ಲಿ ನೀರಿನ ಮಟ್ಟ 112.07 ಅಡಿ ಇದ್ದು, 33.853 ಟಿಎಂಸಿ ನೀರು ಸಂಗ್ರಹವಿದೆ.

ತಮಿಳುನಾಡಿನ ಒತ್ತಡಕ್ಕೆ ಮಣಿಯಿತೇ ಕರ್ನಾಟಕ? 10 ಟಿಎಂಸಿ ನೀರು ಬಿಡಲಾಗುವುದು ಎಂದ ಡಿಸಿಎಂ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

Updated on: Aug 15, 2023 | 4:51 PM

ಬೆಂಗಳೂರು, ಆಗಸ್ಟ್ 15: ಕಾವೇರಿ ನೀರು (Cauvery water) ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ಕೋರಿ ತಮಿಳುನಾಡು ಸುಪ್ರೀಂ ಕೋರ್ಟ್‌ಗೆ ಮೊರೆ ಹೋದ ಒಂದು ದಿನದ ನಂತರ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡಿನವರು ಸುಪ್ರೀಂ ಕೋರ್ಟ್​ಗೆ ಹೋಗುವ ಅಗತ್ಯವಿರಲಿಲ್ಲ ಮತ್ತು ನೆರೆಯ ರಾಜ್ಯಕ್ಕೆ 10 ಟಿಎಂಸಿ ನೀರು ಬಿಡಲಾಗುವುದು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ವಾತಂತ್ರ್ಯೋತ್ಸವ ಪ್ರಯುಕ್ತ ಬೆಂಗಳೂರಿನಲ್ಲಿ ಧ್ವಜಾರೋಹಣ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ನೀರಿಲ್ಲ ಎಂಬುದು ನಿಜ. ಆದರೆ ತಮಿಳುನಾಡಿಗೆ 10 ಟಿಎಂಸಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡುವ ಮುನ್ನ ಜನರು ಮತ್ತು ರೈತರ ಕುಡಿಯುವ ನೀರಿನ ಹಿತವನ್ನು ಸರ್ಕಾರ ಪರಿಗಣಿಸಲಿದೆ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಹೇಳಿದ್ದಾರೆ.

ಈ ಮಧ್ಯೆ, ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಕಠಿಣ ನಿಲುವು ತೆಗೆದುಕೊಳ್ಳುವಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸೋಮವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಾವೇರಿ ಜಲಾನಯನ ಪ್ರದೇಶದ ನಾಲ್ಕು ಅಣೆಕಟ್ಟೆಗಳಲ್ಲಿ ಪ್ರಸ್ತುತ ಇರುವ ನೀರಿನ ಸಾಮರ್ಥ್ಯವು ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಸಾಕಾಗುವುದಿಲ್ಲ ಎಂದು ಬೊಮ್ಮಾಯಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಿಗದಿಗಿಂತ ಕಡಿಮೆ ನೀರು ಬಿಡಲು ಕರ್ನಾಟಕ ಸಮ್ಮತಿಸಿದೆ ಎಂದು ಶುಕ್ರವಾರ ಆರೋಪಿಸಿದ್ದ ತಮಿಳುನಾಡು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ರೈತರ ವಿರೋಧದ ನಡುವೆಯೂ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ‌ಕೆಆರ್​ಎಸ್ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ಸೋಮವಾರ ಬಿಡುಗಡೆ ಮಾಡಲಾಗಿತ್ತು. ಕೆಆರ್​ಎಸ್​​ ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿ ಆಗಿದ್ದು, ಸದ್ಯ ಜಲಾಶಯದಲ್ಲಿ ನೀರಿನ ಮಟ್ಟ 112.07 ಅಡಿ ಇದ್ದು, 33.853 ಟಿಎಂಸಿ ನೀರು ಸಂಗ್ರಹವಿದೆ.

ತಮಿಳುನಾಡಿಗೆ ನೀರು ಬಿಡುಗಡೆ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ


ಕಾವೇರಿ ನೀರು ಹಂಚಿಕೆ ವಿಚಾರವಾಗಿ ತಮಿಳುನಾಡು ಸರ್ಕಾರ ಇಷ್ಟು ಬೇಗ ಸುಪ್ರೀಂ ಕೋರ್ಟ್​​ ಮೊರೆ ಹೋಗುವ ಅಗತ್ಯ ಇರಲಿಲ್ಲ. ಪರಿಸ್ಥಿತಿ ನೋಡಿಕೊಂಡು ನಾವೇ ನೀರು ಕೊಡುತ್ತಿದ್ದೆವು. ಅಷ್ಟಕ್ಕೂ ನೀರು ಕೊಡುವುದು, ಬಿಡುವುದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಕೈಯಲ್ಲಿದೆ ಎಂದು ಡಿಕೆ ಶಿವಕುಮಾರ್ ಸೋಮವಾರ ಪ್ರತಿಕ್ರಿಯಿಸಿದ್ದರು. ಒಟ್ಟಿನಲ್ಲಿ ಈ ವಿಚಾರವಾಗಿ (ಕಾವೇರಿ ನೀರು ಬಿಡುಗಡೆ) ವಿವಾದ ಹೆಚ್ಚಿಸುವುದು ನಮಗೆ ಬೇಕಿಲ್ಲ. ಇತಿಮಿತಿಯೊಳಗೆ ಬಗೆಹರಿಸಿಕೊಂಡು ಎರಡೂ ರಾಜ್ಯಗಳ ರೈತರ ಹಿತ ಕಾಯಬೇಕಿದೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಕೆಆರ್​ಎಸ್​ ಜಲಾಶಯದಿಂದ ಕಾವೇರಿ ನದಿಗೆ ಹೆಚ್ಚುವರಿ ನೀರು ಬಿಡುಗಡೆ, ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದ ಕರ್ನಾಟಕ ಸರ್ಕಾರ?

ಈ ಮಧ್ಯೆ, ತಮಿಳುನಾಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ಕುರಿತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುವುದಾಗಿಯೂ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದರು. ನಾವೆಲ್ಲರೂ ಸಹೋದರರಂತೆ ಇರುವುದರಿಂದ ವಿವಾದ ಹೆಚ್ಚಿಸದೆ ಪರಿಹರಿಸಬೇಕು. ರಾಜ್ಯವು ಸಂಕಷ್ಟ ಸೂತ್ರವನ್ನು ಅನುಸರಿಸಲು ಬದ್ಧವಾಗಿದೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us