ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ

ಕೇಂದ್ರ ಸರ್ಕಾರವು ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದೆ. ಸಚಿವ ಕುಮಾರಸ್ವಾಮಿ ಅವರ ಮನವಿ ಮೇರೆಗೆ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಸ್ಪಂದಿಸಿದ್ದಾರೆ. ಸೋಮವಾರದಿಂದಲೇ ತಂಬಾಕು ಖರೀದಿ ಆರಂಭವಾಗಲಿದ್ದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು ವಿಸ್ತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬೆಳೆಗಾರರು ಎದುರಿಸುತ್ತಿರುವ ಬಿಕ್ಕಟ್ಟನ್ನು ಶಮನಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ತಂಬಾಕು ಬೆಳೆಗಾರರ ನೆರವಿಗೆ ನಿಂತ ಕೇಂದ್ರ ಸರ್ಕಾರ: ಸೋಮವಾರದಿಂದಲೇ ಖರೀದಿ ಆರಂಭದ ಭರವಸೆ
ಪಿಯೂಷ್ ಗೋಯಲ್ ಜೊತೆ ಮಾತುಕತೆ
Image Credit source: Google

Updated on: Mar 13, 2026 | 4:35 PM

ದೆಹಲಿ, ಮಾರ್ಚ್​​ 13: ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದ್ದು, ಸಚಿವ ಗೋಯಲ್ ಅವರಿಗೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಮನವರಿಕೆ ಮಾಡಿ ಕೊಡಲಾಗಿದೆ.  ಆ ಬೆನ್ನಲ್ಲೇ  ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದೆ.

ಸೋಮವಾರದಿಂದಲೇ ತಂಬಾಕು ಖರೀದಿ, ವಿದೇಶ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರ ಬೇಡಿಕೆಗಳಿಗೆ ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವ ಗೋಯಲ್ ಅವರು ತಮ್ಮ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಬರುವಂತೆ ಸೂಚಿಸಿರೋದಾಗಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕುರ್ಚಿ ಕಿತ್ತಾಟದ ನಡುವೆ ಮುಂದಿನ ರಾಜಕೀಯ ಜೀವನದ ಬಗ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಮಾತು!

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರ ಉಪಸ್ಥಿತಿಯಲ್ಲಿ ನಡೆದ ಈ ಸಭೆಯಲ್ಲಿ ಮಾಜಿ ಸಚಿವರಾದ ಸಾ.ರಾ. ಮಹೇಶ್, ಮೈಸೂರು-ಕೊಡಗು ಸಂಸದರಾದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ. ಮಂಜು, ಜಿ.ಡಿ. ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್ , ಜೆಡಿಎಸ್ ಹಿರಿಯ ಮುಖಂಡ ಕೃಷ್ಣನಾಯಕ, ಕೋಲಾರ ಸಂಸದ ಮಲ್ಲೇಶ್ ಬಾಬು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

ಸಭೆ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್, ಸೋಮವಾರದಿಂದ ತಂಬಾಕು ಖರೀದಿಗೆ ಸಚಿವ ಪಿಯೂಷ್ ಗೋಯಲ್ ಸೂಚನೆ ನೀಡಿರೋದಾಗಿ ತಿಳಿಸಿದ್ದಾರೆ. ಅಲ್ಲದೆ, 190 ದೇಶಗಳ ರಾಯಭಾರಿಗಳಿಗೆ ಪತ್ರ ಬರೆದು ಮುಕ್ತ ಮಾರುಕಟ್ಟೆಯಲ್ಲಿ ತಂಬಾಕು ಖರೀದಿಗೆ ಕೋರಿಕೆ ಸಲ್ಲಿಸಲಾಗುವುದು. ಈವರೆಗೆ ರಪ್ತು ಮಾಡದಿರುವ ದೇಶಗಳಿಗೂ ತಂಬಾಕು ರಪ್ತು ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವರು ಭರವಸೆ ನೀಡಿರೋದಾಗಿ ಸಾ.ರಾ.ಮಹೇಶ್​​ ಹೇಳಿದ್ದಾರೆ.

ಶಾಸಕ ಎ. ಮಂಜು ಮಾತನಾಡಿ, ಕರ್ನಾಟಕದಲ್ಲಿ 100 ದಶಲಕ್ಷ ಟನ್ ತಂಬಾಕು ಬೆಳೆಯಲು ತಂಬಾಕು ಮಂಡಳಿ ಅವಕಾಶ ನೀಡಿದೆ. ಈ ವರ್ಷ 80 ದಶಲಕ್ಷ ಟನ್ ತಂಬಾಕು ಬೆಳೆಯಲಾಗಿದೆ. ನಾವು ಬೆಳೆದ ಸೊಪ್ಪನ್ನು ಸರ್ಕಾರ ನಿರ್ಧಾರ ಮಾಡಿದ ಬೆಲೆಯಲ್ಲಿ ಖರೀದಿ ಮಾಡಬೇಕಿದೆ. ಈ ಹಿಂದೆ ಖರೀದಿ ಭರವಸೆ ನೀಡಿದ ಕಂಪನಿಗಳು ಖರೀದಿ ಮಾಡಿಲ್ಲ. ಹೀಗಾಗಿ ಈಗ ಬೆಳೆದ ಸೊಪ್ಪನ್ನು ಕೂಡಲೇ ಖರೀದಿ ಮಾಡಬೇಕು. ಕೇಂದ್ರ ಸರ್ಕಾರ ಇದರಲ್ಲಿ ಮಧ್ಯ ಪ್ರವೇಶ ಮಾಡಬೇಕು ಎಂದು ಮನವಿ ಮಾಡಿರೋದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us