AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ

ಚಾಮರಾಜನಗರದ ಹನೂರು ಬಳಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಆಗಸ್ಟ್ 14ರಂದು ನಡೆದ ಈ ಘಟನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮೃತರ ವಿರುದ್ಧ ಕಳ್ಳಬೇಟೆಯ ಆರೋಪವಿದ್ದು, ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರಲಿದೆ. ಈ ಆದೇಶದಿಂದ ಪ್ರಕರಣದ ಮಹತ್ವ ಹೆಚ್ಚಿದೆ.

ಚಾಮರಾಜನಗರ: ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಹನೂರು ಶೂಟೌಟ್ ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆImage Credit source: tv9
ವಿಕಾಸ್​ ಬಿಎಂ
| Edited By: |

Updated on:Aug 25, 2026 | 10:41 AM

Share

ಚಾಮರಾಜನಗರ, ಆಗಸ್ಟ್ 25: ಚಾಮರಾಜನಗರ (Chamarajanagar) ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಯನ್ನು ಸಿಐಡಿಗೆ (CID) ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾನಿರೀಕ್ಷಕ (DG&IGP) ಸಲೀಂ ಅವರು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಆದೇಶಿಸಿದ್ದಾರೆ. ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ನಾಲ್ಕೂ ಎಫ್‌ಐಆರ್‌ಗಳನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಈ ಸಂಬಂಧ ಚಾಮರಾಜನಗರ ಎಸ್‌ಪಿಗೆ ಸೂಚನೆ ನೀಡಲಾಗಿದ್ದು, ಸಿಐಡಿಯ ವಿಶೇಷ ಘಟಕದಿಂದ ಮುಂದಿನ ತನಿಖೆ ನಡೆಸುವಂತೆ ಆದೇಶಿಸಲಾಗಿದೆ.

ನಾಲ್ಕು ಪ್ರತ್ಯೇಕ ಪ್ರಕರಣ ದಾಖಲು

ಅರಣ್ಯ ಇಲಾಖೆ ಸಿಬ್ಬಂದಿಯ ಫೈರಿಂಗ್‌ಗೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಚಾಮರಾಜನಗರದ ರಾಮಪುರಂ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದ್ದರೆ, ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ಮತ್ತೊಂದು ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಇದೀಗ ಈ ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಸಿಐಡಿ ವಿಶೇಷ ಘಟಕ ನಡೆಸಲಿದೆ. ಗುಂಡಿನ ದಾಳಿ ನಡೆದ ಸಂದರ್ಭ, ಫೈರಿಂಗ್‌ಗೆ ಕಾರಣ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆಯ ಬಗ್ಗೆ ಸಿಐಡಿ ತನಿಖೆ ನಡೆಸುವ ಸಾಧ್ಯತೆಯಿದೆ. ಸರ್ಕಾರದ ಈ ನಿರ್ಧಾರದಿಂದ ಪ್ರಕರಣದ ತನಿಖೆ ಮತ್ತಷ್ಟು ಮಹತ್ವ ಪಡೆದುಕೊಂಡಿದ್ದು, ಸಿಐಡಿ ತನಿಖೆಯಲ್ಲಿ ಯಾವೆಲ್ಲ ಅಂಶಗಳು ಹೊರಬರಲಿವೆ ಎಂಬುದು ಕುತೂಹಲ ಮೂಡಿಸಿದೆ.

ಹನೂರು ಶೂಟೌಟ್ ಪ್ರಕರಣದ ಹಿನ್ನೆಲೆ

ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಆಗಸ್ಟ್ 14 ರಂದು ನಡೆಸಿದ್ದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. ಮೃತರನ್ನು ಹನೂರು ತಾಲೂಕಿನ ತೋಮಿಯರ್​ಪಾಳ್ಯದ ನಿವಾಸಿಗಳಾದ ಕುಮಾರ್, ಆಂಥೋಣಿಸ್ವಾಮಿ ಹಾಗೂ ಪೀಟರ್ ಎಂದು ಗುರುತಿಸಲಾಗಿತ್ತು. ಇವರೆಲ್ಲ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು ಎಂಬ ಆರೋಪವಿದ್ದು, ಆ ಸಂದರ್ಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜತೆ ಸಂಭವಿಸಿದ ಸಂಘರ್ಷದಲ್ಲಿ ಗುಂಡಿನ ದಾಳಿಯಲ್ಲಿ ಹತರಾಗಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ ಅರಣ್ಯದಲ್ಲಿ ಎನ್‌ಕೌಂಟರ್: ಮೂವರು ಬಲಿ, DRFO ಕಚೇರಿ ಧ್ವಂಸ

ನಂತರ ಪ್ರಕರಣ ದೇಶ ಮಟ್ಟದಲ್ಲಿ ಭಾರಿ ಸದ್ದು ಮಾಡಿತ್ತು. ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಸಹ ಘಟನೆಯನ್ನು ಖಂಡಿಸಿದ್ದರು. ಮೃತರು ಕಳ್ಳಬೇಟೆಗೆ ಬಂದಿದ್ದರು ಎಂಬ ಬಗ್ಗೆ ಅರಣ್ಯ ಇಲಾಖೆ ಬಿಡುಗಡೆ ಮಾಡಿದ್ದ ಸಾಕ್ಷ್ಯದ ಬಗ್ಗೆಯೂ ಅನುಮಾನಗಳು ಹುಟ್ಟಿಕೊಂಡಿದ್ದವು. ವಿಧಾನಸಭೆ ಅಧಿವೇಶನದಲ್ಲಿಯೂ ಸರ್ಕಾರವು ವಿಪಕ್ಷಗಳಿಂದ ತೀವ್ರ ವಿರೋಧ ಎದುರಿಸಬೇಕಾಗಿ ಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:41 am, Tue, 25 August 26

Follow Us