ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಬಂಡೀಪುರ ಅರಣ್ಯದ ಕಳ್ಳಬೇಟೆ ತಡೆ ಶಿಬಿರದ ಮುಂದೆ ರೌಡಿಶೀಟರ್ ಸತೀಶ್ ಮದ್ಯದ ಪಾರ್ಟಿ ಮಾಡಿದ್ದ ಪ್ರಕರಣದಲ್ಲಿ ಕರ್ತವ್ಯ ಲೋಪದ ಆರೋಪದಡಿ ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ. ಬಡ ರೈತರ ಮೇಲೆ ಕೇಸ್ ಹಾಕುವ ಅಧಿಕಾರಿಗಳು ಕ್ರಿಮಿನಲ್‌ಗಳಿಗೆ ಸಾಥ್ ನೀಡಿದ್ದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿಶೀಟರ್ ಎಣ್ಣೆ ಪಾರ್ಟಿ ಪ್ರಕರಣ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು
ರೌಡಿಶೀಟರ್ ಎಣ್ಣೆ ಪಾರ್ಟಿ (ಎಡ ಚಿತ್ರ) ಹಾಗೂ ಮದ್ದೂರು ವಲಯ ಅರಣ್ಯಾಧಿಕಾರಿ ಡಿ. ಪುನೀತ್ ಕುಮಾರ್
Image Credit source: tv9
Edited By:

Updated on: Jun 09, 2026 | 9:52 AM

ಚಾಮರಾಜನಗರ, ಜೂನ್ 9: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪ್ರಮುಖ ಪ್ರದೇಶದಲ್ಲಿ ರೌಡಿಶೀಟರ್ ಮತ್ತು ಆತನ ಪಟಾಲಂ ನಡೆಸಿದ್ದ ಬಿಂದಾಸ್ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಹಾಗೂ ಬೇಜವಾಬ್ದಾರಿತನದ ಹಿನ್ನೆಲೆಯಲ್ಲಿ ಬಂಡೀಪುರದ ಮದ್ದೂರು ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ (RFO) ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (PCCF) ಆದೇಶ ಹೊರಡಿಸಿದ್ದಾರೆ.

ಮುಖ್ಯಾಂಶಗಳು

  • ಕರ್ತವ್ಯ ಲೋಪಕ್ಕೆ ಆರ್‌ಎಫ್‌ಒ ಪುನೀತ್ ಅಮಾನತು.
  • ರೌಡಿಶೀಟರ್ ಪಾರ್ಟಿಗೆ ಮೌನ ಸಮ್ಮತಿ ಆರೋಪ.
  • ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗೆ ಶೋಧ.

ಸೌರ ಫಲಕವನ್ನೇ ಟೇಬಲ್ ಮಾಡಿಕೊಂಡಿದ್ದ ಕಿಡಿಗೇಡಿಗಳು

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ಮದ್ದೂರು ವಲಯದ ‘ಹುಲಿ ಕಟ್ಟೆ’ ಎಂಬಲ್ಲಿರುವ ಕಳ್ಳಬೇಟೆ ತಡೆ ಶಿಬಿರದ (Anti-Poaching Camp) ಮುಂಭಾಗದಲ್ಲೇ ಕುಖ್ಯಾತ ರೌಡಿಶೀಟರ್ ಸತೀಶ್ ಯಾನೆ ಮಹದೇವಪ್ರಸಾದ್ ಹಾಗೂ ಆತನ ಸ್ನೇಹಿತರಾದ ಗಂಗಾಧರ್ ಮತ್ತು ಚೇತನ್ ಅಕ್ರಮವಾಗಿ ಪ್ರವೇಶಿಸಿ ಮದ್ಯದ ಪಾರ್ಟಿ ಮಾಡಿದ್ದರು. ಶಿಬಿರದ ಸೌರ ಫಲಕವನ್ನೇ ಟೇಬಲ್ ಮಾಡಿಕೊಂಡು, ಅದರ ಮೇಲೆ ಮದ್ಯದ ಬಾಟಲಿಗಳು, ಪ್ಲಾಸ್ಟಿಕ್ ಲೋಟ ಹಾಗೂ ತಿಂಡಿಯ ಪ್ಯಾಕೆಟ್‌ಗಳನ್ನು ಇಟ್ಟು ಮೋಜು ಮಾಡಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದವು. ಅತ್ಯಂತ ಸಂರಕ್ಷಿತ ಹಾಗೂ ವನ್ಯಜೀವಿಗಳ ಓಡಾಟವಿರುವ ಪ್ರಮುಖ ವಲಯದೊಳಗೆ ಇಂತಹ ಕೃತ್ಯ ನಡೆದಿದ್ದಕ್ಕೆ ಪರಿಸರವಾದಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಮೇಲಧಿಕಾರಿಗಳಿಗೆ ಮಾಹಿತಿ ನೀಡದೆ ಮುಚ್ಚಿಟ್ಟಿದ್ದ ಅಧಿಕಾರಿ

ಈ ಅಕ್ರಮ ಪಾರ್ಟಿಯ ಹಿಂದೆ ಸ್ಥಳೀಯ ಅರಣ್ಯ ಸಿಬ್ಬಂದಿಯ ಕೈವಾಡವಿರುವ ಶಂಕೆ ವ್ಯಕ್ತವಾದ ಬೆನ್ನಲ್ಲೇ, ಬಂಡೀಪುರ ಹುಲಿ ಯೋಜನೆ ನಿರ್ದೇಶಕ ನಂದೀಶ್ ಅವರು ಎಸಿಎಫ್ ಸುರೇಶ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದರು. ಎಸಿಎಫ್ ನೀಡಿದ ತನಿಖಾ ವರದಿಯಲ್ಲಿ, ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅವರು ತಮಗಿಂತ ಮೇಲಧಿಕಾರಿಗಳಿಗೆ ಈ ಗಂಭೀರ ವಿಷಯದ ಬಗ್ಗೆ ಯಾವುದೇ ಮಾಹಿತಿ ನೀಡದೆ ಮುಚ್ಚಿಟ್ಟಿರುವುದು ಹಾಗೂ ಫೋಟೋಗಳಲ್ಲಿ ಗುರುತಿಸಲಾದ ಶಂಕಿತರ ಹೆಸರನ್ನು ಅಧಿಕೃತವಾಗಿ ದಾಖಲಿಸದೆ ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಶಿಸ್ತು ಕ್ರಮಕ್ಕೆ ಬಾಕಿ ಇರುವಂತೆ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ವನ್ಯಜೀವಿ ಕಾಯ್ದೆಯಡಿ ಕೇಸ್: ಆರೋಪಿಗಳಿಗಾಗಿ ಪೊಲೀಸರ ಬಲೆ

ಪ್ರಸ್ತುತ ಅರಣ್ಯ ಇಲಾಖೆಯು ಈ ಮೂವರು ಕಿಡಿಗೇಡಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿದೆ. ಸದ್ಯ ತಲೆಮರೆಸಿಕೊಂಡಿರುವ ರೌಡಿಶೀಟರ್ ಸತೀಶ್ ಮತ್ತು ಆತನ ಪಟಾಲಂಗಾಗಿ ಅರಣ್ಯ ಇಲಾಖೆ ಹಾಗೂ ಗುಂಡ್ಲುಪೇಟೆ ಪೊಲೀಸರು ಜಂಟಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!

ಸಾಮಾನ್ಯ ಜನರಿಗೆ ಕಾಡಿನ ರಸ್ತೆಯಲ್ಲಿ ವಾಹನ ನಿಲ್ಲಿಸಿ ಫೋಟೋ ತೆಗೆಯಲೂ ದಂಡ ವಿಧಿಸುವ ಇಲಾಖೆ, ರೌಡಿಶೀಟರ್‌ಗಳಿಗೆ ಪಾರ್ಟಿ ಮಾಡಲು ಬಿಟ್ಟಿದ್ದಕ್ಕೆ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಪರಿಸರ ಹೋರಾಟಗಾರರು ಆಗ್ರಹಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us