ಚಾಮರಾಜನಗರ ಕ್ಷೇತ್ರದ ಸಂಸದ ಶ್ರೀನಿವಾಸ್ ಪ್ರಸಾದ್ಗೆ ಅನಾರೋಗ್ಯ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
BJP MP V Srinivasa Prasad: ಅನಾರೋಗ್ಯದ ಕಾರಣ ಚಾಮರಾಜನಗರ ಬಿಜೆಪಿ ಸಂಸದ ವಿ ಶ್ರೀನಿವಾಸಪ್ರಸಾದ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಐಸಿಯುವಿನಲ್ಲಿ ವೆಂಟಿಲೇಟರ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು, ಏಪ್ರಿಲ್ 23: ಚಾಮರಾಜನಗರ ಕ್ಷೇತ್ರದ ಬಿಜೆಪಿ (BJP) ಸಂಸದ ವಿ ಶ್ರೀನಿವಾಸ್ ಪ್ರಸಾದ್ (V Srinivasa Prasad) ಅನಾರೋಗ್ಯಕ್ಕೀಡಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲಾಗಿದ್ದಾರೆ. ಸದ್ಯ ಐಸಿಯು ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ರಾತ್ರಿಯೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾಲಿನಲ್ಲಿ ಗಾಯ ಉಲ್ಬಣಗೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶ್ರೀನಿವಾಸಪ್ರಸಾದ್ಗೆ ಡಾ. ಸುದರ್ಶನ್ ಬಲ್ಲಾಳ್ ಚಿಕಿತ್ಸೆ ನೀಡುತ್ತಿದ್ದಾರೆ.
ಇನ್ನೆರಡು ದಿನಗಳು ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ. ನಂತರ ವಾರ್ಡ್ಗೆ ಶಿಫ್ಟ್ ಮಾಡಲಾಗುವುದು ಎಂದು ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದ್ದಾರೆ.
ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಿರುವ ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್ ಇತ್ತೀಚೆಗಷ್ಟೇ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮಧ್ಯೆ, ಶ್ರೀನಿವಾಸ್ ಪ್ರಸಾದ್ ಅಳಿಯ ಧೀರಜ್ ಪ್ರಸಾದ್ ಮತ್ತು ಸಹೋದರ ಕಾಂಗ್ರೆಸ್ ಸೇರಿದ್ದರು. ಇದು ಚಾಮರಾಜನಗರ ರಾಜಕೀಯದಲ್ಲಿ ಬಹಳ ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಸಿದ್ದರಾಮಯ್ಯ ಸಹ ತವರು ಕ್ಷೇತ್ರ ವರುಣಾ ಇರುವ ಲೋಕಸಭಾ ಕ್ಷೇತ್ರವಾದ ಚಾಮರಾಜನಗರ ಗೆಲ್ಲಿಸಲೇಬೇಕೆಂದು ಪಣ ತೊಟ್ಟಿದ್ದು, ಶ್ರೀನಿವಾಸ್ ಪ್ರಸಾದ್ರನ್ನು ಇತ್ತೀಚೆಗೆ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇದು ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಕಡೆ ವಾಲಿದ್ದಾರೆಯೇ ಎಂಬ ಅನುಮಾನಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ: ಸಿಎಂ ಬೆನ್ನಲ್ಲೇ ಯಡಿಯೂರಪ್ಪ ಭೇಟಿ: ನಯವಾಗಿ ಬಿಎಸ್ವೈ ಆಹ್ವಾನ ತಿರಸ್ಕರಿಸಿದ ಶ್ರೀನಿವಾಸ್ ಪ್ರಸಾದ್
ಈ ಎಲ್ಲ ಬೆಳವಣಿಗೆಗಳ ಮಧ್ಯೆ, ಮೈಸೂರಿನಲ್ಲಿ ಪ್ರಧಾನಿ ಮೋದಿ ಸಮಾವೇಶದ ಸಂದರ್ಭದಲ್ಲಿ ಶ್ರೀನಿವಾಸ್ ನಿವಾಸಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿದ್ದರು. ಮನವೊಲಿಸುವ ಪ್ರಯತ್ನ ಮಾಡಿದ್ದರು. ಮೈಸೂರಿನಲ್ಲಿ ನಡೆಯಲಿರುವ ಮೋದಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನ ನೀಡಿದ್ದರು. ಆದರೆ, ಯಡಿಯೂರಪ್ಪ ಆಹ್ವಾನವನ್ನು ಶ್ರೀನಿವಾಸ್ ಪ್ರಸಾದ್ ನಯವಾಗಿ ತಿರಸ್ಕರಿಸಿದ್ದರು.
ಕರ್ನಾಟಕದ ಹಿರಿಯ ಒಬ್ಬರಾಗಿರುವ ಶ್ರೀನಿವಾಸದ ಪ್ರಸಾದ್, ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಗ್ರಾಹಕ ಸೇವೆಗಳ ಸಚಿವರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2013 ರಿಂದ 2016 ರವರೆಗೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಖಾತೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಈವರೆಗೆ 6 ಬಾರಿ ಲೋಕಸಭಾ ಚುನಾವಣೆ ಸೇರಿದಂತೆ ಒಟ್ಟು 14 ಚುನಾವಣೆಗಳಲ್ಲಿ ಸ್ಪರ್ಧಿಸಿ 11 ಬಾರಿ ಜಯಗಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:29 pm, Tue, 23 April 24



