ಅಯ್ಯೋ ವಿಧಿಯೇ! ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ಕ್ಲಾಸ್ ವಿದ್ಯಾರ್ಥಿನಿ ಸಾವು

ಈ ಹೃದಯಾಘಾತ (Heart Attack) ಎಲ್ಲ ವಯೋಮಾನದವರನ್ನೂ ಕಾಡಲು ಶುರು ಮಾಡಿದೆ. ಅದರಲ್ಲೂ ಈ ಕೊರೋನಾ ಬಂದು ಹೋಗಿದ್ದಾಗಿನಿಂದ ಚಿಕ್ಕವರಿಂದ ದೊಡ್ಡವರು ಏಕಾಏಕಿ ಕುಸಿದುಬಿದ್ದು ಪ್ರಾಣ ಬಿಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಮೂರನೇ ತರಗತಿಯಲ್ಲಿ ಓದುತ್ತಿದ್ದ ಮಗುವೊಂದು ಶಾಲೆಯಲ್ಲಿ ಕುಸಿದುಬಿದ್ದು ಹೃದಯಾಘಾತವಾಗಿ ಸಾವನ್ನಪ್ಪಿರುವುದು ವರದಿಯಾಗಿದೆ.

ಅಯ್ಯೋ ವಿಧಿಯೇ! ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದು 3ನೇ ಕ್ಲಾಸ್ ವಿದ್ಯಾರ್ಥಿನಿ ಸಾವು
Tejaswini
Edited By:

Updated on: Jan 06, 2025 | 4:02 PM

ಚಾಮರಾಜನಗರ, (ಜನವರಿ 06): ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಏಕಾಏಕಿ ಕುಸಿದುಬಿದ್ದು ಮೂರನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟಿರುವ ಆಘಾತಕಾರಿ ಘಟನೆ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಇಂದು (ಜನವರಿ 06) ಎಂದಿನಂತೆ ಶಾಲೆಗೆ ಹೋಗಿದ್ದು, ಕ್ಲಾಸ್​ನಲ್ಲಿ ಶಿಕ್ಷಕಿಗೆ ನೋಟ್ಸ್​ ತೋರಿಸಲು ನಿಂತಾಗ ಏಕಾಏಕಿ ಕುಸಿದುಬಿದ್ದು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದಳು. ಇಂದು ಎಂದಿನಂತೆ ಶಾಲೆಗೆ ತೆರಳಿದ್ದಾಳೆ. ಆದ್ರೆ, ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವಾಗ ಕುಸಿದುಬಿದ್ದಿದ್ದಾಳೆ. ಆಗ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾಳೆ. ಕೂಡಲೇ ತೇಜಸ್ವಿನಿಯನ್ನು ಶಾಲಾ ಸಿಬ್ಬಂದಿ ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ, ದುರದೃಷ್ಟವಶಾತ್ ಅಷ್ಟರಾಗಲೇ ತೇಜಸ್ವಿನಿ ಉಸಿರು ನಿಂತಿದೆ. ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಹೃದಯಾಘಾತದ ಪ್ರಕರಣಗಳು ವಯಸ್ಕರಲ್ಲಿ ಕಂಡುಬಂದರೂ, ಈಗ ಮಕ್ಕಳು ಮತ್ತು ಯುವಕರು ಸಹ ಇದಕ್ಕೆ ಗುರಿಯಾಗುತ್ತಿದ್ದಾರೆ. ಇಂತಹದೊಂದು ಪ್ರಕರಣ ಈಗ ಕರ್ನಾಟಕದಲ್ಲಿ ನಡೆದಿದ್ದು,  ಶಾಲೆಗೆ ಹೋಗಿದ್ದ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಇದ್ದ ಏಕೈಕ ಪುತ್ರಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ನೋಡುಗರ ದುಃಖ ಮಡುಗಟ್ಟಿದ್ದು, ಶಾಲೆಯಲ್ಲಿ ಶೋಕ ಆವರಿಸಿದೆ.

ಶಾಲೆಯ ಮುಖ್ಯೋಪಾಧ್ಯಾಯ ಹೇಳಿದ್ದೇನು?

ಇನ್ನು ಘಟನೆ ಸಂಬಂಧ ಶಾಲೆಯ ಮುಖ್ಯೋಪಾಧ್ಯಾಯ ಪ್ರಭಾಕರ್ ಟಿವಿ9ಗೆ ಪ್ರತಿಕ್ರಿಯಿಸಿದ್ದು, ಎಂದಿನಂತೆ ಇಂದು ವಿದ್ಯಾರ್ಥಿನಿ ತೇಜಸ್ವಿನಿ ಬಂದಿದ್ದಾರೆ. ಎರೆಡು ಪಿರಿಯಡ್ ಆದ ಬಳಿಕ ಶಾರ್ಟ್ ಬ್ರೇಕ್ ಇತ್ತು. ಈ ಸಮಯದಲ್ಲಿ ಕೈಯಲ್ಲಿ ನೋಟ್ ಬುಕ್ ಹಿಡಿದು ತೇಜಸ್ವಿನಿ ಆಚೆ ಬಂದಿದ್ದಾಳೆ. ಆ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆಸ್ಪತ್ರೆಯಲ್ಲಿ ಚೆಸ್ಟ್ ಮಸಾಜ್ ಇಸಿಜಿ ಮಾಡಿಸಿದ್ದೇವೆ. ಆದ್ರೆ, ಹೃದಯಾಘಾತದಿಂದ ತೇಜಸ್ವಿನಿ ಸಾವನ್ನಪ್ಪಿರುವುದಾಗಿ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಪೋಷಕರಿಗೆ ಮಾಹಿತಿ ನೀಡಿದ್ದೇವೆ . ಪೋಷಕರು ಪೋಸ್ಟ್ ಮಾರ್ಟಂಗೆ ಒಪ್ಪಲಿಲ್ಲ. ಸದ್ಯ ಬದನಗುಪ್ಪೆಯ ನಿವಾಸಕ್ಕೆ ಮೃತದೇಹ ಕಳುಹಿಸಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದ್ದ ಒಂದೇ ಒಂದು ಮಗುವನ್ನು ಕಳೆದುಕೊಂಡ ದಂಪತಿ ಬಿದ್ದು ಬಿದ್ದು ಅಳುತ್ತಿದ್ದಾರೆ. ಈ ಮನಕಲಕುವ ದೃಶ್ಯ ನೋಡಗರ ಕಣ್ಣಂಚಿನಲ್ಲಿ ನೀರು ತರಿಸಿತು. ಇನ್ನು ಏನು ತಿಳಿಯದ ಕೂಸಿಗೆ ಹೃದಯಾಘಾತವಾಗಿದೆ ಎನ್ನುವುದು ಎಲ್ಲರನ್ನೂ ಬೆಚ್ಚಿಬೀಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:36 pm, Mon, 6 January 25

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us