ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!

ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎರಡು ವರ್ಷಗಳಲ್ಲಿ ಬರೋಬ್ಬರಿ 24 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳತ್ತ ಮುಖ ಮಾಡುತ್ತಿಲ್ಲ. ನಿಜಕ್ಕೂ ಚಾಮರಾಜನಗರ ಜಿಲ್ಲೆಯಲ್ಲಿ ಎದುರಾಗುತ್ತಿರುವ ಸಮಸ್ಯೆ ಏನು? 24 ಶಾಲೆಗಳು ಬಂದ್ ಆಗಿದ್ದು ಯಾಕೆ? ವಿವರಗಳಿಗೆ ಮುಂದಿದೆ ಓದಿ.

ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!
ಶಿಥಿಲಾವಸ್ಥೆಯಲ್ಲಿ ಕುರುಬರಹುಂಡಿ ಸರ್ಕಾರಿ ಶಾಲೆಯ ಕಟ್ಟಡ
Edited By:

Updated on: Jan 09, 2025 | 7:27 AM

ಚಾಮರಾಜನಗರ, ಜನವರಿ 9: ವಿಧ್ಯಾರ್ಥಿಗಳಿಲ್ಲದೇ ಪಾಳು ಬಿದ್ದಿರುವ ಕಟ್ಟಡ, ಮೂಲಭೂತ ಸೌಕರ್ಯದ ಕೊರತೆ. ಹೀಗೆ ಕೋಮಾ ಸ್ಥಿತಿಯಲ್ಲಿರುವ ಕಟ್ಟಡ ಮತ್ಯಾವುದೂ ಅಲ್ಲ, ಸರ್ಕಾರಿ ಶಾಲೆಯದ್ದು. ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಎರಡು ವರ್ಷಗಳ ಅವಧಿಯಲ್ಲಿ ಬರೋಬ್ಬರಿ 24 ಸರ್ಕಾರಿ ಶಾಲೆಗಳಿಗೆ ಬೀಗ ಬಿದ್ದಿದೆ. ಶೂನ್ಯ ದಾಖಲಾತಿ, ಮಕ್ಕಳ ಕೊರತೆ ಹಿನ್ನಲೆ 24 ಶಾಲೆಗಳನ್ನು ಬಂದ್ ಮಾಡಲಾಗಿದೆ. ಮೂಲಭೂತ ಸೌಕರ್ಯ ಕೊರತೆಯ ಕಾರಣ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳ ಕಡೆ ಮುಖ ಮಾಡುತ್ತಿಲ್ಲ. ಇದುವೇ ಶಾಲೆ ಮುಚ್ಚಲು ಕಾರಣವಾಗಿದೆ.

ಬಂದ್ ಆಗಿರುವ 24 ಶಾಲೆಗಳಲ್ಲಿ 4 ಉರ್ದು ಶಾಲೆಗಳು ಕೂಡ ಸೇರಿವೆ. ಅವುಗಳಿಗೆ ಕಾಯಕಲ್ಪ ಕೊಡಲು ತಯಾರಿ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಏತನ್ಮಧ್ಯೆ, ಚಾಮರಾಜನಗರ ತಾಲೂಕಿನ 8, ಗುಂಡ್ಲುಪೇಟೆ ತಾಲೂಕಿನ 8, ಹನೂರು ತಾಲೂಕಿನ 2, ಯಳಂದೂರು ತಾಲೂಕಿನ 1 ಹಾಗೂ 4 ಉರ್ದು ಶಾಲೆಗಳಿಗೆ ಬೀಗ ಬಿದ್ದಿದೆ. ಸದ್ಯ 24 ರ ಪೈಕಿ 4 ಶಾಲೆಗಳನ್ನು ಪುನರ್ ಆರಂಭಿಸಲಾಗಿದೆ.

ಮೂಲಸೌಕರ್ಯ ಕೊರತೆ, ದಾಖಲಾತಿ ಸಮಸ್ಯೆ

ಶೂನ್ಯ ದಾಖಲಾತಿ ಹಾಗೂ ದಾಖಲಾತಿ ಕೊರತೆಯಿಂದ ನಾವು ಶಾಲೆಗಳನ್ನ ಬಂದ್ ಮಾಡುತ್ತಿದ್ದೇವೆ ಎಂದು ಚಾಮರಾಜನಗರ ಜಿಲ್ಲಾ ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ನೀಡಿದ್ದಾರೆ. ಆದರೆ ಅಸಲಿಗೆ ಶೂನ್ಯ ದಾಖಲಾತಿಯಾಗಲು ಮುಖ್ಯ ಕಾರಣ ಶಾಲೆಯ ಅವ್ಯವಸ್ಥೆ. ಸರಿಯಾದ ಮೂಲಭೂತ ಸೌಕರ್ಯ ಇಲ್ಲದ ಕಾರಣ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಪೋಷಕರು ಹೆದರುತ್ತಿದ್ದಾರೆ. ಸಾಲ ಮಾಡಿದರೂ ಪರವಾಗಿಲ್ಲ, ಮಕ್ಕಳ ಭವಿಷ್ಯ ಮುಖ್ಯ ಎಂದು ಪೋಷಕರು ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳುಹಿಸುತ್ತಿದ್ದಾರೆ.

ಆಂಗ್ಲ ಮಾಧ್ಯಮ ಸರ್ಕಾರಿ ಶಾಲೆ ಇಲ್ಲದಿರುವುದೂ ಕಾರಣ?

ಆಂಗ್ಲ ಮಾದ್ಯಮ ಸರ್ಕಾರಿ ಶಾಲೆಗಳು ಇಲ್ಲದೆ ಇರುವುದೂ ಶೂನ್ಯ ದಾಖಲಾತಿಗೆ ಕಾರಣ ಎಂಬ ಮಾತುಗಳು ಕೇಳಿ ಬಂದಿವೆ. ಅಲ್ಲದೇ ಈ ಕೂಡಲೇ ಶಿಕ್ಷಣ ಸಚಿವರು ಗಡಿ ಜಿಲ್ಲೆಯ ಶಾಲೆಗಳತ್ತ ಗಮನಹರಿಸಿ ಮೂಲಭೂತ ಸೌಕರ್ಯ ಸೇರಿ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಒದಗಿಸಬೇಕಿದೆ ಎಂಬ ಆಗ್ರಹ ವ್ಯಕ್ತವಾಗಿದೆ.

ಇದನ್ನೂ ಓದಿ: ವೀರಪ್ಪನ್ ಓಡಾಡಿದ್ದ ಜಾಗದಲ್ಲಿ ಸಫಾರಿಗೆ ಅರಣ್ಯ ಇಲಾಖೆ ಚಿಂತನೆ: ಶೀಘ್ರದಲ್ಲೇ ಶುರುವಾಗಲಿದೆ ಹೊಗೇನಕಲ್ ಸಫಾರಿ

ನೆಪ ಮಾತ್ರಕ್ಕೆ ಸರ್ಕಾರಿ ಶಾಲೆ ಉಳಿಸಿ ಎಂದು ಬೊಬ್ಬೆ ಹೊಡೆಯುವ ರಾಜ್ಯ ಸರ್ಕಾರ ಈಗ ಸರ್ಕಾರಿ ಶಾಲೆಗಳನ್ನು ಬಂದ್ ಮಾಡುತ್ತಿದೆ. ಈಗಲಾದರೂ ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಳ್ಳದೆ ಹೋದರೆ ಮುಂಬರುವ ದಿನಗಳಲ್ಲಿ ಸರ್ಕಾರಿ ಶಾಲೆಗಳೇ ಇಲ್ಲದಂತಾಗುವುದು ಪಕ್ಕಾ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಗಡಿ ಜಿಲ್ಲೆಯ ಶಾಲೆಗಳಿಗೆ ವಿಶೇಷ ಪ್ಯಾಕೇಜ್ ಕೊಟ್ಟು ಅಭಿವೃದ್ಧಿ ಪಡಿಸಬೇಕಿದೆ ಎಂಬ ಆಗ್ರಹ ಕೂಡ ವ್ಯಕ್ತವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us