ಚಾಮರಾಜನಗರದಲ್ಲಿ ಗಲಾಟೆ: ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು, ಲಾಠಿ ಚಾರ್ಜ್

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಮಾಡುವ ವಿಚಾರಕ್ಕೆ ಅಧಿಕಾರಿಗಳು ಮತ್ತು ಗ್ರಾಮಸ್ಥರ ನಡುವೆ ಗಲಾಟೆಯಾಗಿದೆ. ಮೂಲ ಸೌಕರ್ಯ ಒದಗಿಸುವವರೆಗೆ ಮತದಾನ ಮಾಡುವುದಿಲ್ಲ ಎಂದಿದ್ದರೂ ಸಹ ಕೆಲ ಗ್ರಾಮಸ್ಥರನ್ನು ಮತದಾನಕ್ಕೆ ಕರೆತಂದಿದ್ದು, ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಮತಕೇಂದ್ರದ ಮೇಲೆ ದಾಳಿ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಗಲಾಟೆ: ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು, ಲಾಠಿ ಚಾರ್ಜ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Apr 26, 2024 | 4:52 PM

ಚಾಮರಾಜನಗರ, (ಏಪ್ರಿಲ್ 26): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಿರುವ ಘಟನೆ ನಡೆದಿದೆ.

ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಜನರು ಮತದಾನ ಬಹಿಷ್ಕರಿಸಿ ಮತದಾನದಿಂದ ದೂರ ಉಳಿದುಕೊಂಡಿದ್ದಾರೆ. ಆದ್ರೆ, ಹಾಡಿ ಜನರನ್ನು ಮನವೊಲಿಸಿ ಕರೆತಂದು ಮತದಾನ ಮಾಡಿಸಲು ಅಧಿಕಾರಿಗಳು ಮತಗಟ್ಟೆಗೆ ಕರೆದುಕೊಂಡು ಬಂದಿದ್ದಾರೆ. ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಇಂಡಿಗನತ್ತ ಗ್ರಾಮದ ಮತಗಟ್ಟೆಯನ್ನು ಸುತ್ತುವರಿದಿದ್ದು, ಮೂಲಸೌಕರ್ಯ ಕಲ್ಪಿಸುವವರೆಗೆ ಮತದಾನ ಮಾಡಬೇಡಿ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದರಿಂದ ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿದ್ದು, ಮೇಜು, ಕುರ್ಚಿ, ಇವಿಎಂ ಧ್ವಂಸಮಾಡಿದ್ದಾರೆ.

ಇದನ್ನೂ ಓದಿ: Tumakuru: ಮತದಾರನ ಎರಡೂ ಕೈ ತೋರು ಬೆರಳಿಗೆ ಶಾಹಿ: ತುಮಕೂರಿನಲ್ಲಿ ಅಪರೂಪದ ಘಟನೆ

ಮತಯಂತ್ರ ಧ್ವಂಸ, ಚುನಾವಣಾ ಸಿಬ್ಬಂದಿ ಮೇಲೆ ಹಲ್ಲೆ

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಪೀಸ್ ಪೀಸ್ ಮಾಡಿದ್ದಾರೆ. ಇನ್ನು ಘಟನೆಯಲ್ಲಿ ಚುನಾವಣಾ ಸಿಬ್ಬಂದಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಹನೂರು ತಹಸೀಲ್ದಾರ್ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Fri, 26 April 24