ಕೊಟ್ಟ ಮಾತು ಉಳಿಸಿಕೊಂಡ ಕಾಂಗ್ರೆಸ್: ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರಿ ನೀಡಲಾಗಿದ್ದು, ನೇಮಕಾತಿ ಪತ್ರ ವಿತರಿಸಲಾಗಿದೆ. 2021ರ ಕೋವಿಡ್ ಎರಡನೇ ಅಲೆಯ ಸಂದರ್ಭ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಂಡಿದ್ದವರ ಕುಟುಂಬಗಳ ಸದಸ್ಯರಿಗೆ ಈ ಹಿಂದೆ ನೀಡಿದ್ದ ಭರವಸೆಯನ್ನು ಆ ಮೂಲಕ ಕಾಂಗ್ರೆಸ್ ಈಡೇರಿಸಿದೆ. ಇದು ಸಂತ್ರಸ್ತ ಕುಟುಂಬಗಳ ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದ್ದು, ಹೊಸ ಆಶಾಕಿರಣ ಮೂಡಿಸಿದೆ.

ಚಾಮರಾಜನಗರ, ಏಪ್ರಿಲ್ 21: ಕೊರೊನಾ ಎರಡನೇ ಅಲೆಯ ಸಂದರ್ಭ 2021ರ ಮೇ 2ರಂದು ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ಹಲವು ರೋಗಿಗಳು ಪ್ರಾಣ ಕಳೆದುಕೊಂಡಿದ್ದರು. ಈ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಕೊಟ್ಟ ಮಾತನ್ನು ರಾಜ್ಯ ಕಾಂಗ್ರೆಸ್ ಉಳಿಸಿಕೊಂಡಿದು, ಸಿದ್ದರಾಮಯ್ಯ ನೆತೃತ್ವದ ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರ ವಿತರಣೆ ಮಾಡಿದೆ. ಗುಂಡ್ಲುಪೇಟೆಯ ದೇವರಾಜ್ ಅರಸ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನೇಮಕಾತಿ ಪತ್ರ ವಿತರಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ವೇಳೆ ಸಂತ್ರಸ್ತ ಕುಟುಂಬಗಳ ಸದಸ್ಯರಿಗೆ ಸರ್ಕಾರಿ ಉದ್ಯೋಗದ ನೀಡುವ ಭರವಸೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದರು. ಅದರಂತೆ ಸಂತ್ರಸ್ತ ಕುಟುಂಬಗಳ 25 ಮಂದಿಗೆ ಚಾಮರಾಜನಗರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಖಾಯಂ ನೌಕರಿಯನ್ನು ರಾಜ್ಯ ಸರ್ಕಾರ ನೀಡಿದೆ. ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಬ್ಬರದ ಸಂದರ್ಭ, ಕೋವಿಡ್ ಎರಡನೇ ಅಲೆಯ ವೇಳೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಬಾರಿ ದುರಂತವೊಂದು ನಡೆದಿತ್ತು. ಆಮ್ಲಜನಕದ ಕೊರತೆಯಿಂದಾಗಿ ಒಟ್ಟು 36 ಮಂದಿ ಪ್ರಾಣಕಳೆದುಕೊಂಡಿದ್ದು, ಈ ವಿಚಾರ ದೇಶಾದ್ಯಂತ ಸುದ್ದಿಯಾಗಿತ್ತು. ಈ ಪೈಕಿ 21 ಸಂತ್ರಸ್ತ ಕುಟುಂಬಗಳು ಸರ್ಕಾರಿ ಉದ್ಯೋಗಕ್ಕೆ ಬೇಡಿಕೆ ಇಟ್ಟಿದ್ದರು. ಹೀಗಾಗಿ ಮೃತಪಟ್ಟ ಕುಟುಂಬದವರಿಗೆ ಸರ್ಕಾರಿ ನೌಕರಿ ಭರವಸೆಯನ್ನುವಿರೋಧ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೀಡಿದ್ದರು. ಆ ವೇಳೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡುವುದರ ಜೊತೆಗೆ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವುದಾಗಿಯೂ ಆಶ್ವಾಸನೆ ನೀಡಲಾಗಿತ್ತು.
ಇದನ್ನೂ ಓದಿ: ಪ್ರೇಯಸಿಯನ್ನ ಅಜ್ಜನ ಮನೆಗೆ ಕರೆದೊಯ್ದು ಪ್ರಿಯಕರ; ಮುಂದಾಗಿದ್ದು ಘನಘೋರ!
ಸುದೀರ್ಘ ಹೋರಾಟ
ಘಟನೆಯ ಬಳಿಕ ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ಅಂದಿನಿಂದಲೂ ಹೋರಾಟಗಳು ನಡೆದುಕೊಂಡು ಬಂದಿದ್ದವು. ಅಂತಿಮವಾಗಿ ಇವರ ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ 25 ಮಂದಿಗೆ ಸರ್ಕಾರಿ ನೌಕರಿಯನ್ನು ನೀಡಿದೆ. ಕುಟುಂಬದ ಸದಸ್ಯರನ್ನು ಕಳೆದುಕೊಂಡು ಕಂಗಾಲಾಗಿದ್ದವರ ಬಾಳಲ್ಲಿ ಸರ್ಕಾರದ ಈ ನಿರ್ಧಾರ ಹೊಸ ಅಶಾಕಿರಣ ಮೂಡಿಸಿದ್ದು, ಸಂತ್ರಸ್ತ ಕುಟುಂಬಗಳ ಸುದೀರ್ಘ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಂತಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



