ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಸ್ಪರ್ಧೆ ಬಹುತೇಕ ಖಚಿತ, ಮೈತ್ರಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ

| Updated By: ಗಣಪತಿ ಶರ್ಮ

Updated on: Jul 09, 2024 | 9:43 AM

ಉಪ ಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ಕಣ ರಂಗೇರುತ್ತಿದೆ. ಇಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ. ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್​​ನಿಂದ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ‌ ಈಗ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಸುಳಿವು ಬಿಟ್ಟುಕೊಟ್ಟಿಲ್ಲ.

ಚನ್ನಪಟ್ಟಣ ಉಪಚುನಾವಣೆ: ಜೆಡಿಎಸ್ ಸ್ಪರ್ಧೆ ಬಹುತೇಕ ಖಚಿತ, ಮೈತ್ರಿ ಅಭ್ಯರ್ಥಿ ಬಗ್ಗೆ ಹೆಚ್ಚಿದ ಕುತೂಹಲ
ಕುಮಾರಸ್ವಾಮಿ
Follow us on

ಬೆಂಗಳೂರು, ಜುಲೈ 9: ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಮತ್ತೊಂದು ಮಿನಿ ಉಪ ಸಮರಕ್ಕೆ ರಣಕಣ ಸಜ್ಜಾಗುತ್ತಿದೆ. ಉಪಚುನಾವಣೆ ಘೋಷಣೆಗೂ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ರಂಗ ತಾಲಿಮು ರಾಜಕೀಯ ಪಕ್ಷಗಳಲ್ಲಿ ಜೋರಾಗಿದೆ. ಈ ಮಧ್ಯೆ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಸ್ಪರ್ಧೆ ಮಾಡುತ್ತದೆಯೋ ಅಥವಾ ಜೆಡಿಎಸ್ ಸ್ಪರ್ಧೆ ಮಾಡುತ್ತದೆಯೋ ಎಂಬ ಕುತೂಹಲ ಚನ್ನಪಟ್ಟಣ ಬಿಜೆಪಿ ಜೆಡಿಎಸ್ ಹಾಗೂ ಕಾರ್ಯಕರ್ತರಲ್ಲಿ ಮನೆ ಮಾಡಿದೆ. ಆದರೆ ಈಗ ಚನ್ನಪಟ್ಟಣ ಉಪ ಸಮರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.

ಜೆಡಿಎಸ್ ಸ್ಪರ್ಧೆ ಬಗ್ಗೆ ಕುಮಾರಸ್ವಾಮಿ ಸುಳಿವು

ಬೊಂಬೆ ನಾಡಿನಲ್ಲಿ ಜೆಡಿಎಸ್ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಅದಕ್ಕೆ ಪುಷ್ಟಿ ಕೊಡುವಂತೆ ಸೋಮವಾರ ಕೇಂದ್ರ ಸಚಿವ ಕುಮಾರಸ್ವಾಮಿ ಚನ್ನಪಟ್ಟಣ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಚುನಾವಣೆ ಸ್ಪರ್ಧೆ ಮತ್ತು ಅಭ್ಯರ್ಥಿ ಆಯ್ಕೆ ಬಗ್ಗೆ ಮುಕ್ತವಾಗಿ ಕುಮಾರಸ್ವಾಮಿ ಕಾರ್ಯಕರ್ತರು ಜೊತೆ ಸಮಾಲೋಚನೆ ನಡೆಸಿ ಜೆಡಿಎಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸುಳಿವು ಕೊಟ್ಟಿದ್ದಾರೆ. ಇದೇ ಸಮಯದಲ್ಲಿ ಕಾರ್ಯಕರ್ತರು ಕೂಡ ಚನ್ನಪಟ್ಟಣದಿಂದ ನಿಖಿಲ್ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿಗೆ ಒತ್ತಡ ಹಾಕಿದ್ದಾರೆ. ಆದರೆ, ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಎನ್​​ಡಿಎ ಅಭ್ಯರ್ಥಿ ಗೆಲ್ಲಬೇಕು. ಆ ನಿಟ್ಟಿನಲ್ಲಿ ನಿಖಿಲ್ ಕೆಲಸ ಮಾಡುತ್ತಾರೆ ಎಂಬ ಸಂದೇಶವನ್ನು ಕುಮಾರಸ್ವಾಮಿ ಕಾರ್ಯಕರ್ತರಿಗೆ ಕೊಟ್ಟಿದ್ದಾರೆ.

ಜೆಡಿಎಸ್​​ನಿಂದ ಕಣಕ್ಕಿಳಿಯುತ್ತಾರಾ ಯೋಗೇಶ್ವರ್?

ಇತ್ತ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿಸಿರುವ ಮಾಜಿ ಸಚಿವ ಸಿಪಿ ಯೋಗೇಶ್ವರ್, ಕುಮಾರಸ್ವಾಮಿ ಗ್ರೀನ್ ಸಿಗ್ನಲ್​​​ಗೆ ಕಾಯುತಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಕುಮಾರಸ್ವಾಮಿ ಕೂಡ ನೆನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಸಿಪಿ ಯೋಗೇಶ್ವರ್ ಅಥವಾ ಯಾರೇ ಅಭ್ಯರ್ಥಿಯಾದರು ಒಮ್ಮತದಿಂದ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಮುಖಂಡರು ಕೆಲಸ ಮಾಡಬೇಕು ಎಂಬ ಸೂಚನೆ ಕೊಟ್ಟಿದ್ದಾರೆ. ಆದರೆ ಕುಮಾರಸ್ವಾಮಿ ಮಾತಿಗೆ ಒಪ್ಪದ ಕಾರ್ಯಕರ್ತರು ಸಿಪಿ ಯೋಗೇಶ್ವರ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರೆ ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡಲಿ ಎಂದಿದ್ದಾರೆ. ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ಗೆಲುವು ಕಷ್ಟ ಸಾಧ್ಯವಾಗುತ್ತದೆ. ಇದರಿಂದ ಕಾಂಗ್ರೆಸ್​​ಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ, ಮುಖಂಡರು ಮತ್ತು ಕಾರ್ಯಕರ್ತರು ಒಂದು ಬಾರಿ ಸಿಪಿ ಯೋಗೇಶ್ವರ್ ಭೇಟಿ ಮಾಡಿ ಮಾತುಕತೆ ನಡೆಸುವಂತೆ ಕುಮಾರಸ್ವಾಮಿ ಸೂಚನೆ ‌ಕೂಡ ನೀಡಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕ್ಷೇತ್ರದ ಮುಖಂಡರ ಸಭೆ, ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಕುಮಾರಸ್ವಾಮಿ

ಸದ್ಯ ಕುಮಾರಸ್ವಾಮಿ ಕರ್ಮಭೂಮಿ ಚನ್ನಪಟ್ಟಣದಿಂದ ಜೆಡಿಎಸ್ ಅಭ್ಯರ್ಥಿ ಮತ್ತೊಮ್ಮೆ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ. ಶೀಘ್ರದಲ್ಲೇ ಕುಮಾರಸ್ವಾಮಿ ಬಿಜೆಪಿ ಬಲಿಷ್ಠರನ್ನ ಭೇಟಿ ಮಾಡಿ ಅಭ್ಯರ್ಥಿಯ ಹೆಸರು ಫೈನಲ್ ಮಾಡಲಿದ್ದಾರೆ. ಹೀಗಾಗಿ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್​​ನಿಂದ ಸಿಪಿ ಯೋಗೇಶ್ವರ್ ಕಣಕ್ಕಿಳಿಯುತ್ತಾರೆಯೇ ಅಥವಾ ದಳಪತಿಗಳು ಹೊಸ ಮುಖಕ್ಕೆ ಮಣೆ ಹಾಕುತ್ತಾರೆಯೇ ಕಾದುನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ