ಸಿಎಂ ಆಗಬಲ್ಲ ಡಿಕೆ ಶಿವಕುಮಾರ್​ರನ್ನು ಬಿಟ್ಟುಕೊಡುತ್ತೀರಾ: ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಪ್ರಶ್ನೆ

|

Updated on: Oct 28, 2024 | 8:14 AM

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಸಾಧ್ಯತೆ ಇದೆ ಎಂದು ಚನ್ನಪಟ್ಟಣದ ಉಪಚುನಾವಣಾ ಪ್ರಚಾರದ ವೇಳೆ, ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದ್ದಾರೆ. ಚನ್ನಪಟ್ಟಣ ಉಪಚುನಾವಣೆಯ ಫಲಿತಾಂಶವು ರಾಜ್ಯದ ರಾಜಕೀಯ ಭವಿಷ್ಯವನ್ನು ನಿರ್ಧರಿಸಬಹುದು, ರಾಜಕೀಯ ಬದಲಾವಣೆಗೆ ಕಾರಣವಾಗಬಹುದು ಎಂದು ಶಿವಲಿಂಗೇಗೌಡ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಸಿಎಂ ಆಗಬಲ್ಲ ಡಿಕೆ ಶಿವಕುಮಾರ್​ರನ್ನು ಬಿಟ್ಟುಕೊಡುತ್ತೀರಾ: ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಪ್ರಶ್ನೆ
ಶಿವಲಿಂಗೇಗೌಡ & ಡಿಕೆ ಶಿವಕುಮಾರ್
Follow us on

ಬೆಂಗಳೂರು, ಅಕ್ಟೋಬರ್ 28: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ಬರಲಿದೆಯೇ ಎಂಬ ಅನುಮಾನಗಳ ಮಧ್ಯೆಯೇ ಅರಸೀಕೆರೆಯ ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ, ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ ಎಂಬ ಹೇಳಿಕೆ ನೀಡುವ ಮೂಲಕ ಮತ್ತೆ ಚರ್ಚೆ ಹುಟ್ಟು ಹಾಕಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಸಂಬಂಧ ಪಕ್ಷದ ಅಭ್ಯರ್ಥಿ ಯೋಗೇಶ್ವರ ಪರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ.

ಶಿವಲಿಂಗೇಗೌಡ ಹೇಳಿದ್ದೇನು?

ಚನ್ನಪಟ್ಟಣದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಶಿವಲಿಂಗೇಗೌಡ, ಡಿಕೆ ಶಿವಕುಮಾರ್ ಅವರ ಮುಖ್ಯಮಂತ್ರಿ ಸ್ಥಾನದ ಭವಿಷ್ಯ ನಿರ್ಧರಿಸಲು ಚನ್ನಪಟ್ಟಣ ಉಪಚುನಾವಣೆ ನಿರ್ಣಾಯಕ ಎಂದಿದ್ದಾರೆ. ಡಿಕೆ ಶಿವಕುಮಾರ್ ನಿಮ್ಮದೇ ಜಿಲ್ಲೆಯವರಾಗಿದ್ದು (ರಾಮನಗರ) ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳಿವೆ. ಹೀಗಿರುವಾಗ ಅವರ ತವರು ಜಿಲ್ಲೆಯಲ್ಲಿಯೇ ಅವರನ್ನು ಕೈ ಬಿಟ್ಟರೆ ಹೇಗಿರುತ್ತದೆ ಎಂದು ಪ್ರಶ್ನಿಸಿದ್ದಾರೆ.

ರಾಮನಗರ ಜಿಲ್ಲೆ ಉತ್ತಮವಾಗಿ ಅಭಿವೃದ್ಧಿ ಹೊಂದಲಿದೆ. ಈ ಉಪಚುನಾವಣೆಯಿಂದ ರಾಜ್ಯ ರಾಜಕಾರಣಕ್ಕೆ ತಿರುವು ಸಿಗಲಿದೆ ಎಂದೂ ಶಿವಲಿಂಗೇಗೌಡ ಹೇಳಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ಬಿಜೆಪಿ ಜತೆ ಕೈಜೋಡಿಸುವುದಿಲ್ಲ ಎಂದು ಈ ಹಿಂದೆ ಹೇಳಿದ್ದ ಹೆಚ್​​ಡಿ ಕುಮಾರಸ್ವಾಮಿ ತಮ್ಮ ಮಾತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಶಿವಲಿಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಶಿವಲಿಂಗೇಗೌಡ ಈ ಹಿಂದೆ ಜೆಡಿಎಸ್‌ನಲ್ಲಿದ್ದರು. ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಿ ನಂತರ ಆ ಪಕ್ಷದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ನಿಲ್ಲದ ಸಿಎಂ ಹುದ್ದೆ ಚರ್ಚೆ

ಕಳೆದ ಬಾರಿಯ ವಿಧಾನಸಭೆ ಚುನಾವಣೆ ನಂತರ, ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಂದಿನಿಂದಲೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ನಡೆಯುತ್ತಲೇ ಇದೆ. ಎರಡೂವರೆ ವರ್ಷದ ಬಳಿಕ ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಯನ್ನು ಡಿಕೆ ಶಿವಕುಮಾರ್​ಗೆ ಕೊಡಬೇಕು ಎಂಬ ಒಪ್ಪಂದ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಕಾಂಗ್ರೆಸ್ ಪಕ್ಷ ಅಧಿಕೃತ ಹೇಳಿಕೆಯನ್ನು ಈವರೆಗೂ ನೀಡಿಲ್ಲ. ಆದಾಗ್ಯೂ, ಕಾಂಗ್ರೆಸ್ ಪಕ್ಷದ ಅನೇಕ ನಾಯಕರು ಮುಖ್ಯಮಂತ್ರಿ ಹುದ್ದೆ ಸಂಬಂಧ ಹೇಳಿಕೆಗಳನ್ನು ನೀಡುತ್ತಿದ್ದರು. ನಂತರ, ಸಿಎಂ ಹುದ್ದೆ ಸಂಬಂಧ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್ ತಾಕೀತು ಮಾಡಿತ್ತು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜಾತಿ ಲೆಕ್ಕಾಚಾರ: ಮುಸ್ಲಿಂ ಮತಗಳ ಮೇಲೆ ಯೋಗೇಶ್ವರ್, ಜೆಡಿಎಸ್ ಕಣ್ಣು

ಇದೀಗ ಚನ್ನಪಟ್ಟಣ ಉಪಚುನಾವಣೆ ಪ್ರಚಾರದಲ್ಲಿ ಶಿವಲಿಂಗೇಗೌಡ ನೀಡಿರುವ ಹೇಳಿಕೆ ಮತ್ತೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳು ದಟ್ಟವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ