
ಚಿಕ್ಕಬಳ್ಳಾಪುರ, ಜೂನ್ 28: ನಗರದಲ್ಲಿ ಶನಿವಾರ (ಜೂ.27) ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಮಹೋತ್ಸವದ ವೇಳೆ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep eshwar) ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ನಡೆದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ನಿನ್ನೆ ನಡೆದ ಈ ಆಘಾತಕಾರಿ ಘಟನೆಯನ್ನು ಬೆನ್ನಟ್ಟಿ ಇಡೀ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಸದ್ಯ ನಾಲ್ವರನ್ನು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ನಗರ ಠಾಣೆಯ ಪಿಎಸ್ಐ ಅಮರ್ ಅವರು ಸ್ವಯಂಪ್ರೇರಿತ (Suo Moto) ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಶಾಸಕರ ಮೇಲೆ ಚಪ್ಪಲಿ ಎಸೆದು, ಅವಾಚ್ಯ ಪದಗಳಿಂದ ನಿಂದಿಸಿ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕೇಸ್ ದಾಖಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಾದ ಅಖಿಲ್ ರೆಡ್ಡಿ, ಪ್ರಕಾಶ್, ಮೋಹನ್ ರಾಜ್ ಮತ್ತು ಮಹೇಂದ್ರ ಎಂಬುವವರನ್ನು ಬಂಧಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರ ಪೊಲೀಸ್ ಠಾಣೆ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.
ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಅಲ್ಲಿಗೆ ನುಗ್ಗಿದ ಜೆಡಿಎಸ್ ಕಾರ್ಯಕರ್ತರು, ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಕೆಳಗಿಳಿಸಬೇಕು ಎಂದು ಘೋಷಣೆ ಕೂಗಿ ಗಲಾಟೆ ಆರಂಭಿಸಿದರು. ಕಾರ್ಯಕ್ರಮಕ್ಕೆ ತೀವ್ರ ಅಡ್ಡಿಯಾದಾಗ ಸ್ಥಳದಲ್ಲಿದ್ದ ಸ್ವಾಮೀಜಿಯವರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿ, ಕಾರ್ಯಕ್ರಮ ಮುಂದುವರಿಯಲು ಅನುವು ಮಾಡಿಕೊಟ್ಟರು.
ಆದರೆ, ಕಾರ್ಯಕ್ರಮ ಮುಗಿದ ಬಳಿಕ ಗಲಾಟೆ ಮತ್ತಷ್ಟು ವಿಕೋಪಕ್ಕೆ ತಿರುಗಿತು. ಪ್ರದೀಪ್ ಈಶ್ವರ್ ಅವರು ತಮ್ಮ ಕಾರಿನ ಸನ್ರೂಫ್ (Sunroof) ಮೂಲಕ ಹೊರಬಂದು ಮೆರವಣಿಗೆಯಲ್ಲಿ ತೆರಳುತ್ತಿದ್ದಾಗ, ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ಜೆಡಿಎಸ್ ಕಾರ್ಯಕರ್ತರಿಗೆ ತಿರುಗೇಟು ನೀಡಲು ಮೀಸೆ ತಿರುವಿ, ತೋಳು ತಟ್ಟಿ ಸವಾಲು ಹಾಕಿದ್ದಾರೆ. ಇದರಿಂದ ತೀವ್ರ ರೊಚ್ಚಿಗೆದ್ದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಶಾಸಕರ ಮೇಲೆ ನೇರವಾಗಿ ಚಪ್ಪಲಿ ಎಸೆದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳದಲ್ಲೇ ಕೆಲವರನ್ನು ವಶಕ್ಕೆ ಪಡೆದಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ (DC) ಜಿ. ಪ್ರಭು, ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ನಡೆಯುತ್ತಿತ್ತು. ಆದರೆ ಈ ಘಟನೆ ತೀವ್ರ ಬೇಸರ ಮತ್ತು ನೋವು ತರಿಸಿದೆ. ಈಗಾಗಲೇ ನಾಲ್ವರನ್ನು ಕಸ್ಟಡಿಗೆ ಪಡೆಯಲಾಗಿದ್ದು, ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ ತೋಳು ತಟ್ಟಿ ಮೀಸೆ ತಿರುವಿದ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ
ಇತ್ತ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕರ ಮೇಲೆ ಚಪ್ಪಲಿ ಎಸೆಯುವುದು ಸರಿಯಲ್ಲ. ಯಾರೇ ಆಗಲಿ ಪ್ರಚೋದನೆ ನೀಡುವುದು ತಪ್ಪು, ಎಲ್ಲರೂ ಕಾನೂನಿನ ಇತಿಮಿತಿಯಲ್ಲಿದ್ದರೆ ರಾಜ್ಯಕ್ಕೆ ಒಳ್ಳೆಯ ಹೆಸರು. ಜೆಡಿಎಸ್ನವರಿಗೆ ಈಗ ಅಸ್ತಿತ್ವದ ಪ್ರಶ್ನೆ ಶುರುವಾಗಿದೆ. ಬಿಜೆಪಿ-ಜೆಡಿಎಸ್ನ 12 ಶಾಸಕರು ಅಡ್ಡಮತದಾನ ಮಾಡಿರುವುದು ಅವರಲ್ಲಿನ ನಾಯಕತ್ವದ ಕೊರತೆಯನ್ನು ತೋರಿಸುತ್ತದೆ. ಜವಾಬ್ದಾರಿ ಹೊತ್ತ ಆರ್. ಅಶೋಕ್ ಮತ್ತು ವಿಜಯೇಂದ್ರ ರಾಜೀನಾಮೆ ನೀಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:12 pm, Sun, 28 June 26