ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಆರೋಪ ಕೇಳಿಬಂದಿದೆ. ವೈದ್ಯರಿಲ್ಲದೆ, ಸೂಕ್ತ ವೈದ್ಯಕೀಯ ಸೌಲಭ್ಯಗಳಿಲ್ಲದೆ ಬಾಲಕಿ ಮೃತಪಟ್ಟಿದೆ ಎನ್ನಲಾಗುತ್ತಿದ್ದು, ಇಬ್ಬರು ಪ್ರಭಾವಿ ಜನಪ್ರತಿನಿಧಿಗಳ ಸ್ವಗ್ರಾಮದಲ್ಲೇ ಈ ದುರಂತ ಸಂಭವಿಸಿದ್ದು, ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು
ಬಾಲಕಿ ಸಾವು
Image Credit source: tv9 kannada
Edited By:

Updated on: Jul 20, 2026 | 9:30 PM

ಮುಖ್ಯಾಂಶಗಳು

  • ವೈದ್ಯರು ಇಲ್ಲ, ವೈದ್ಯಕೀಯ ಸೌಲಭ್ಯಗಳು ಇಲ್ಲದೆ ಬಾಲಕಿ ಸಾವು ಆರೋಪ
  • ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಘಟನೆ
  • ಆಸ್ಪತ್ರೆ ಎದುರಿನ ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

ಚಿಕ್ಕಬಳ್ಳಾಪುರ, ಜುಲೈ 20: ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ವೈದ್ಯರು ಹಾಗೂ ವೈದ್ಯಕೀಯ ಸೌಲಭ್ಯಗಳಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿರುವ (death) ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತ ಬಾಲಕಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಸರ್ಕಾರಿ ಆಸ್ಪತ್ರೆ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಹಾಗೂ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಸ್ವಗ್ರಾಮ. ಆದರೆ ಅವರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪದಿಂದ ಪದೇ ಪದೇ ಸುದ್ದಿಯಾಗುತ್ತಿದೆ.

ನಡೆದಿದ್ದೇನು?

ನಿನ್ನೆ ಸಂಜೆ ಪೆರೇಸಂದ್ರ ಗ್ರಾಮದ ಚಂದ್ರಿಕಾ ಹಾಗೂ ನವೀನ್ ದಂಪತಿಯ 8 ವರ್ಷದ ಮಗಳು ಶಶಿಕಲಾ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಳು. ತಕ್ಷಣ ಪಕ್ಕದಲ್ಲಿರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ವೈದ್ಯಕೀಯ ಸಲಕರಣೆಗಳಿಲ್ಲ. ಕೇವಲ ಒಬ್ಬರು ನರ್ಸ್ ಮಾತ್ರ ಇದ್ದು, ಚಿಕಿತ್ಸೆ ನೀಡಲು ವಿಫಲರಾಗಿದ್ದಾರೆ. ಇದರಿಂದ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ಮಾಡದೆ ನಿರ್ಲಕ್ಷ್ಯ, ಮಹಿಳೆ ಸಾವು: ಜಯದೇವ ಹೃದ್ರೋಗ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ

ಇನ್ನು ಆಸ್ಪತ್ರೆಯಲ್ಲಿ ವೈದ್ಯರು ಇರುವುದಿಲ್ಲ, ಆಕ್ಸಿಜನ್ ಸೇರಿದಂತೆ ಮೂಲಭೂತ ವೈದ್ಯಕೀಯ ಸೌಲಭ್ಯಗಳಿಲ್ಲ ಎಂಬುದನ್ನು ಅರಿತ ಸ್ಥಳೀಯರು ಆಸ್ಪತ್ರೆ ಎದುರು ರಸ್ತೆ ತಡೆದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಬಾಲಕಿ ಆಸ್ಪತ್ರೆಗೆ ಬಂದಾಗಲೇ ನಾಡಿ ಮಿಡಿತ ಇರಲಿಲ್ಲ: ಡಾ. ಚೇತನ್

ಪ್ರತಿಭಟನಾಕಾರರೊಂದಿಗೆ ಮಾತನಾಡಿದ ಅವರು, ‘ಬಾಲಕಿ ಆಸ್ಪತ್ರೆಗೆ ಬಂದಾಗಲೇ ನಾಡಿ ಮಿಡಿತ ಇರಲಿಲ್ಲ. ಉಸಿರಾಟವು ಅತ್ಯಂತ ಕಡಿಮೆ ಇತ್ತು. ಕರ್ತವ್ಯದಲ್ಲಿದ್ದ ಸಿಬ್ಬಂದಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲ್ದರ್ಜೆಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದರೆ ಮಾತ್ರ ಸಾವಿನ ನಿಖರ ಕಾರಣ ತಿಳಿಯುತ್ತದೆ. ಜಿಲ್ಲೆಯಲ್ಲಿ ವೈದ್ಯರ ಕೊರತೆ ಇದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅತಿ ಆಸೆ ಗತಿಗೇಡು: ಲೋನ್ ಆಸೆಗೆ ತಾಳಿ ಅಡವಿಟ್ಟು ಮುಂಗಾಡ ಹಣ ಕಟ್ಟಿ ಮೋಸ ಹೋದ ಮಹಿಳೆಯರು

ಒಂದೆಡೆ ಆಸ್ಪತ್ರೆಯ ನಿರ್ಲಕ್ಷ್ಯದಿಂದಲೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರ ಆರೋಪ, ಮತ್ತೊಂದೆಡೆ ಭಾನುವಾರ ಸಂಜೆ ವೈದ್ಯರಿಗೆ ರಜೆ ಇದ್ದರೂ, ಕರ್ತವ್ಯದಲ್ಲಿದ್ದ ವೈದ್ಯಕೀಯ ಸಿಬ್ಬಂದಿ ನಿಯಮಾನುಸಾರ ಚಿಕಿತ್ಸೆ ನೀಡಿದ್ದಾರೆ ಎನ್ನುವುದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ. ಆದರೆ ಇಬ್ಬರು ಪ್ರಭಾವಿ ಜನಪ್ರತಿನಿಧಿಗಳ ತವರು ಗ್ರಾಮದಲ್ಲೇ ವೈದ್ಯರು ಇಲ್ಲದಿರುವುದು ಮಾತ್ರ ವಿಪರ್ಯಾಸ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us