Nandi Hills: ಮುದ್ದೇನಹಳ್ಳಿಗೆ ಮೋದಿ ಭೇಟಿ ಹಿನ್ನೆಲೆ; ನಾಳೆಯಿಂದಲೇ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ
ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಕಾರಣ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಮುಖ್ಯಾಂಶಗಳು
- ಮಾರ್ಚ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25 ಮಧ್ಯಾಹ್ನ 2 ಗಂಟೆಯ ವರೆಗೆ ನಂದಿಗಿರಿಧಾಮಕ್ಕೆ ಪ್ರವೇಶ ನಿರ್ಬಂಧ
- ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಕಾರಣ ಕ್ರಮ.
- 25ರಂದು ಮೋದಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ಆಗಮಿಸಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ.
ಚಿಕ್ಕಬಳ್ಳಾಫುರ: ಮಾರ್ಚ್ 25ರಂದು ಬೆಳಗ್ಗೆ ಮುದ್ದೇನಹಳ್ಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Muddenahalli) ಭೇಟಿ ನೀಡುತ್ತಿರುವ ಕಾರಣ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ (Nandi Hills) ಪ್ರವೇಶ ನಿರ್ಬಂಧಿಸಲಾಗಿದೆ. ಮಾರ್ಚ್ 24 ರಂದು ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್ 25 ಮಧ್ಯಾಹ್ನ 2 ಗಂಟೆಯ ವರೆಗೂ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಎನ್ಎಂ ನಾಗರಾಜ್ ಗುರುವಾರ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಅಧಿಕಾರಿಗಳು, ಎಸ್ಪಿಜಿ ಅಧಿಕಾರಿಗಳು ಹಾಗೂ ಪ್ರಧಾನಿಯವರ ಭದ್ರತಾ ಸಿಬ್ಬಂದಿ ಈಗಾಗಲೇ ನಂದಿಗಿರಿಧಾಮದ ಅತಿಥಿ ಗೃಹದಲ್ಲಿ ತಂಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಅಧಿಕಾರಿಗಳ ತುರ್ತು ಸಂಚಾರಕ್ಕೆ ಅನುಕೂಲ ಕಲ್ಪಿಸಿ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಪಿಡಬ್ಲ್ಯೂಡಿ ಅಧಿಕಾರಿಗಳ ಕೊರಿಕೆ ಮೇರೆಗೆ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಭೇಟಿಗೆ ನಿರ್ಬಂಧ ಆದೇಶ ಹೊರಡಿಸಿದ್ದಾರೆ.
25ರಂದು ಮೋದಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ ಸತ್ಯಸಾಯಿ ಸಾಯಿ ಲೋಕಸೇವಾ ಗ್ರಾಮಕ್ಕೆ ಆಗಮಿಸಿ ಖಾಸಗಿ ವೈದ್ಯಕೀಯ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ. ಇದಕ್ಕಾಗಿ ಪೂರ್ವಸಿದ್ದತೆಗಳು ಭರದಿಂದ ಸಾಗಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಿ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವುದರ ಮೂಲಕ ಖ್ಯಾತಿ ಗಳಿಸಿರುವ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದ ಬಳಿ ಇರುವ, ಸತ್ಯ ಸಾಯಿ ಗ್ರಾಮದ ಸತ್ಯ ಸಾಯಿ ಸರಳಾ ಆಸ್ಪತ್ರೆಗೆ ಇದೆ ತಿಂಗಳ 25ರಂದು ಬೆಳಿಗ್ಗೆ 10.40ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯರು ಭೇಟಿ ನೀಡಲಿದ್ದಾರೆ. ಆಸ್ಪತ್ರೆಯ ಎದುರುಗಡೆ ಸುಮಾರು 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ (Sadguru Madhusudan Sai Institute of Medical Sciences and Research) ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ.
ಬೆಳಗ್ಗೆ 10.40ಕ್ಕೆ ನೇರವಾಗಿ ಹೆಲಿಕಾಪ್ಟರ್ ಮೂಲಕ ಸತ್ಯಸಾಯಿ ಗ್ರಾಮ ಮುದ್ದೇನಹಳ್ಳಿಗೆ ಆಗಮಿಸಲಿರುವ ಮೋದಿ, ಕಾಲೇಜು ಉದ್ಘಾಟನೆ ನಂತರ 12 ಗಂಟೆಗೆ ಹೆಲಿಕಾಪ್ಟರ್ ಮೂಲಕ ವಾಪಸಾಗಲಿದ್ದಾರೆ.
ಮಾರ್ಚ್ 25ರಂದು ಮೋದಿ ಅವರು ರಾಜ್ಯದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಕೆಆರ್ಪುರಂ, ವೈಟ್ಫೀಲ್ಡ್ ಮೆಟ್ರೋ ಮಾರ್ಗದಲ್ಲಿ ಸಂಚಾರಕ್ಕೆ ಚಾಲನೆ ನೀಡಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




