ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ” ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಪೋಶೆಟ್ಟಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗುಂಗಿರ್ಲಹಳ್ಳಿ ಗ್ರಾಮದಿಂದ ಮಾರ್ಚ್ 12 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದ್ದಾರೆ. ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳೊಂದಿಗೆ ಸೋಮವಾರ ಗುಂಗಿರ್ಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಡಿಸಿ ಲತಾ ಅವರು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯ ಚಾಲನೆ ನೀಡುವ ಕಾರ್ಯಕ್ರಮದ ಪೂರ್ವ ಸಿದ್ಧತೆಗಾಗಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದರು.
ಗುಂಗಿರ್ಲಹಳ್ಳಿ (ಮಜರೆ) ಗ್ರಾಮದಲ್ಲಿ 171 ಕುಟುಂಬಗಳಿದ್ದು 977 ಜನರು ವಾಸವಿದ್ದಾರೆ, ಈ ಪೈಕಿ 157 ಖಾತೆದಾರರಿದ್ದಾರೆ. 977 ಜನಸಂಖ್ಯೆಯುಳ್ಳ ಈ ಕುಗ್ರಾಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಆಗಮಿಸಿ ಪಹಣಿ, ಅಟ್ಲಾಸ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ ಇತರೆ ದಾಖಲೆಗಳನ್ನು ಖುದ್ದಾಗಿ ಗ್ರಾಮಸ್ಥರಿಗೆ ಉಚಿತವಾಗಿ ವಿತರಿಸುವ ಮೂಲಕ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಗೆ ಶನಿವಾರ ಚಾಲನೆ ನೀಡಲಿದ್ದಾರೆ.
ಈ ಗ್ರಾಮದಲ್ಲಿ ವಾಸವಿರುವ 171 ಕುಟುಂಬಗಳಿಗೆ ಸಂಬಂಧಿಸಿದ “ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ”ಯ ದಾಖಲೆಗಳನ್ನು ಭೂಮಿ ಮತ್ತು ಮೋಜಣಿ ತಂತ್ರಾಂಶಗಳಿಂದ ಸಂಗ್ರಹಿಸಿ ಮುದ್ರಿಸಿಟ್ಟುಕೊಳ್ಳಲಾಗಿದೆ. ಈ ದಾಖಲೆಗಳನ್ನು ಮುಖ್ಯಮಂತ್ರಿ ಬೊಮ್ಮಾಯಿ ಅಂದು ಉಚಿತವಾಗಿ ವಿತರಿಸಿ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ನಡೆಯುವ ವೇದಿಕೆ ಕಾರ್ಯಕ್ರಮದ ಸ್ಥಳವನ್ನು ಗ್ರಾಮದಲ್ಲಿ ಗುರುತಿಸಿ ವೇದಿಕೆ ಸಿದ್ಧತೆಗಾಗಿ ಅಗತ್ಯ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಚಾಲನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಡಿಸಿ ಲತಾ ಅವರು ಅಗತ್ಯ ಸೂಚನೆಗಳನ್ನು ನೀಡಿದರು. ಈ ವೇಳೆ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡುವಂತೆ ಸ್ಥಳೀಯ ಜನಪ್ರತಿನಿಧಿಗಳನ್ನು ಕೋರಿದರು.
ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಗುಂಗಿರ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಿದ ದಿನದಿಂದ ಜಿಲ್ಲೆಯ ರೈತರ ಹಾಗೂ ಫಲಾನುಭವಿಗಳ ಮನೆ ಬಾಗಿಲಿಗೆ ಕಂದಾಯ ಮತ್ತು ಇತರ ಇಲಾಖೆಗಳ ಅಧಿಕಾರಿಗಳು ತೆರಳಿ ಪಹಣಿ, ಅಟ್ಲಾಸ್ ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಉಚಿತವಾಗಿ ತಲುಪಿಸಲಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಸದರಿ ಯೋಜನೆಯನ್ನು ಜಿಲ್ಲೆಯಲ್ಲಿಯೂ ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಜಿಲ್ಲಾಡಳಿತದ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ಈ ವೇಳೆ ಸ್ಥಳೀಯ ಗ್ರಾಮಸ್ಥರೊಂದಿಗೆ ಚರ್ಚಿಸಿ ಅಗತ್ಯ ಸಹಕಾರ ನೀಡುವಂತೆ ಕೋರಿದರು. ಪ್ರತಿಕ್ರಿಯಿಸಿದ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಮುಖ್ಯಮಂತ್ರಿ ನಮ್ಮ ಗ್ರಾಮಕ್ಕೆ ಆಗಮಿಸುತ್ತಿರುವುದೇ ನಮ್ಮೆಲ್ಲರ ಭಾಗ್ಯವಾಗಿದ್ದು, ಅಂದಿನ ದಿನವನ್ನು ಹಬ್ಬದ ರೀತಿಯಲ್ಲಿ ಗ್ರಾಮವನ್ನು ಸಿಂಗರಿಸಿ ಈ ಕಾರ್ಯಕ್ರಮವನ್ನು ಆಚರಿಸುತ್ತೇವೆ. ಇಂತಹ ಮಹತ್ವ ಪೂರ್ಣ ಕಾರ್ಯಕ್ರಮದಲ್ಲಿ ನಾವೆಲ್ಲರೂ ಮನಸಾಇಚ್ಚಾ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ನಮ್ಮ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್, ತಾಲ್ಲೂಕಿನ ತಹಸೀಲ್ದಾರ್ ಗಣಪತಿ ಶಾಸ್ತ್ರಿ, ತಾಲ್ಲೂಕು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥ್, ಪಿಡಿಓ ಮಂಜುನಾಥ್, ಸ್ಥಳೀಯ ಪ್ರತಿನಿಧಿಗಳು, ಗ್ರಾಮಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ವಿಶೇಷತೆ ರೈತರ ಹಕ್ಕನ್ನು / ಅರ್ಹತೆಯನ್ನು ನಿರ್ಧರಿಸುವ ಮೂಲ ಕಂದಾಯ ದಾಖಲೆಗಳಾದ ಪಹಣಿ ಮತ್ತು ಅಟ್ಲಾಸ್ಗಳು ಭೂಮಿ ಮತ್ತು ಮೋಜಣಿ ತಂತ್ರಾಂಶಗಳಲ್ಲಿ ಲಭ್ಯವಿದ್ದು ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳು ಇ-ಕ್ಷಣ ತಂತ್ರಾಂಶದಲ್ಲಿ ಲಭ್ಯವಿದ್ದು, ಸದರಿ ತಂತ್ರಾಂಶಗಳಿಂದ ಪಹಣಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಕುಟುಂಬವಾರು ಪಡೆದು ಸದರಿ ದಾಖಲೆಗಳನ್ನು ಲಕೋಟೆಯಲ್ಲಿರಿಸಿ ಕಂದಾಯ ಇಲಾಖೆ ವತಿಯಿಂದ ರಾಜ್ಯದ ಪ್ರತೀ ರೈತ ಕುಟುಂಬದ ಮನೆ ಬಾಗಿಲಿಗೆ ಹಾಗೂ ಫಲಾನುಭವಿಗಳಿಗೆ ಉಚಿತವಾಗಿ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.