ಪರಿಸರ ಹೋರಾಟಗಾರ ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಏಳು ಜನರ ಬಂಧನ

TV9 Digital Desk

| Edited By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 02, 2021 | 8:06 PM

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಈವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೋಪಿಗಳು ಅಡಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಪರಿಸರ ಹೋರಾಟಗಾರ ಗಿರೀಶ್ ಮೇಲೆ ಹಲ್ಲೆ ಪ್ರಕರಣ: ಏಳು ಜನರ ಬಂಧನ
ಡಿ.ವಿ.ಗಿರೀಶ್ ಅವರ ಮೇಲೆ ಹಲ್ಲೆ (ಸಂಗ್ರಹ ಚಿತ್ರ)

ಚಿಕ್ಕಮಗಳೂರು: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಈವರೆಗೆ ಏಳು ಮಂದಿಯನ್ನು ಬಂಧಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆರೋಪಿಗಳು ಅಡಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಂಬಿಹಳ್ಳಿಯಲ್ಲಿ ಆಗಸ್ಟ್​ 30ರಂದು ಹಲ್ಲೆ ನಡೆದಿತ್ತು.

ಗಿರೀಶ್ ಅವರು ತಮ್ಮ ಜಿಪ್ಸಿಯಲ್ಲಿ ಕೆಮ್ಮಣ್ಣುಗುಂಡಿ ಸಮೀಪದ ಕಟ್ಟೆಹೊಳೆ ಎಸ್ಟೇಟ್​ನಿಂದ ಗೆಳೆಯರೊಂದಿಗೆ ಹಿಂದಿರುಗುವಾಗ ಸಂತವೇರಿ ತಿರುವಿನ ಸಮೀಪ ನಿಂತಿದ್ದ ಕೆಲ ಯುವಕರು ವಾಹನದಲ್ಲಿದ್ದ ಬಾಲಕಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿದ್ದರು. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಕುಪಿತಗೊಂಡಿದ್ದ ಕಿಡಿಗೇಡಿಗಳು ಹಲ್ಲೆ ನಡೆಸಿದ್ದರು.

ಗಿರೀಶ್ ಅವರ ಮೇಲೆ ಹಲ್ಲೆ ನಡೆಸಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಡಿ.ವಿ.ಗಿರೀಶ್ ಯಾರು? ಪರಿಸರ ಸಂರಕ್ಷಣೆ ಚಳವಳಿಯಲ್ಲಿ ಸಕ್ರಿಯರಾಗಿರುವ ಗಿರೀಶ್ ಹಲವು ಸಂಸ್ಥೆಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಹೆಸರುವಾಸಿಯಾಗಿದ್ದಾರೆ. ಭದ್ರಾ ಅಭಯಾರಣ್ಯ ಹಾಗೂ ಚಿಕ್ಕಮಗಳೂರಿನ ಪರಿಸರ ಸಂರಕ್ಷಣೆಗಾಗಿ ಯಾವುದೇ ರಾಜಿಯಿಲ್ಲದ ಅವರು ನಡೆಸಿದ ಸುದೀರ್ಘ ಹೋರಾಟವನ್ನು ಗೌರವಿಸಿ ಹಲವು ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿವೆ.

ಸ್ಕಾಟ್ಲೆಂಡ್‌ನ ಪ್ರತಿಷ್ಠಿತ ದಿ ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ ‘ಪ್ರೊಟೆಕ್ಟ್ ದಿ ಟೈಗರ್’ ಪ್ರಶಸ್ತಿ ಅದರಲ್ಲಿ ಪ್ರಮುಖವಾದುದು. ಇದರ ಜೊತೆಗೆ ವೈಲ್ಡ್‌ಲೈಫ್ ಕನ್ಸರ್​ವೇಶನ್ ಸೊಸೈಟಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾರ್ಲ್ ಜೀಸ್ ವೈಲ್ಡ್ ಲೈಫ್ ಕನ್ಸರ್ವೇಶನ್ ಅವಾರ್ಡ್, ಟೈಗರ್ ಗೋಲ್ಡ್ ಸೇರಿದಂತೆ ಹತ್ತಾರು ಪುರಸ್ಕಾರಗಳು ಸಂದಿವೆ. ನೂರಾರು ಯುವಜನರಲ್ಲಿ ಪರಿಸರ ಪ್ರೀತಿಯನ್ನು ಬಿತ್ತಿ, ಮಾರ್ಗದರ್ಶನ ಮಾಡಿದ್ದಾರೆ.

ಪಶ್ಚಿಮಘಟ್ಟದ ಕುದುರೆಮುಖ- ಮುತ್ತೋಡಿ ಅಭಯಾರಣ್ಯಗಳ ಉಳಿವಿಗೆ ಗಿರೀಶ್ ನೀಡಿದ ಕೊಡುಗೆ ದೊಡ್ಡದು. 2001-02ರಲ್ಲಿ ಭದ್ರ ಅಭಯಾರಣ್ಯದಲ್ಲಿದ್ದ 450ಕ್ಕೂ ಹೆಚ್ಚು ಕುಟುಂಬಗಳ ಸ್ವಯಂ ಪ್ರೇರಿತ ಪುನರ್ವಸತಿ ವಿಚಾರದಲ್ಲಿ ಅವರು ವಹಿಸಿದ ಪಾತ್ರ ವಿಶ್ವಮಟ್ಟದಲ್ಲಿ ಸುದ್ದಿಯಾಗಿತ್ತು. 2001-02ರಲ್ಲಿ ಮುತ್ತೋಡಿ ವ್ಯಾಪ್ತಿಯ 13 ಹಳ್ಳಿಗಳ (ಮುತ್ತೋಡಿ, ಕೆಸವೆ, ಮಾಡ್ಲ, ದಬ್ಬಗಾರು, ಕರ್ವಾನಿ, ಹೆಬ್ಬೆ, ಕಂಚಿಗಾರು, ಹೆಗ್ಗಾರು, ಮತ್ವಾನಿ, ಹಿರೇಬೆಳ್ಳು, ಒಡ್ಡಿಹಟ್ಟಿ, ಪರದೇಶಪ್ಪನಮಠ, ಹಿಪ್ಲಾ) ಜನರಿಗೆ ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸಮೀಪ ಯೋಗ್ಯ ರೀತಿಯಲ್ಲಿ ಪುನರ್ವಸತಿ ಕಲ್ಪಿಸಲಾಯಿತು. ಇದು ನಮ್ಮ ದೇಶದ ಅತ್ಯುತ್ತಮ ಪುನರ್ವಸತಿ ಎಂದೇ ಪರಿಗಣಿತವಾಗಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಜೈರಾಂ ರಮೇಶ್ ಸಹ ಲಕ್ಕವಳ್ಳಿಗೆ ಭೇಟಿ ನೀಡಿ ಪುನರ್ವಸತಿ ಪರಿಶೀಲಿಸಿದ್ದರು.

(Assault on Wildlife Conservation Activist DV Girish 7 Arrested)

ಇದನ್ನೂ ಓದಿ: ಖ್ಯಾತ ಪರಿಸರ ಹೋರಾಟಗಾರ ಡಿ.ವಿ.ಗಿರೀಶ್ ಮೇಲೆ ಚಿಕ್ಕಮಗಳೂರಿನಲ್ಲಿ ಹಲ್ಲೆ: ವ್ಯಾಪಕ ಖಂಡನೆ

ಇದನ್ನೂ ಓದಿ: ಪಶ್ಚಿಮಘಟ್ಟದಲ್ಲಿ ಸಣ್ಣಸಣ್ಣ ಡ್ಯಾಂಗಳ ನಿರ್ಮಾಣಕ್ಕೆ 1,400 ಸ್ಥಳಗಳನ್ನು ಗುರುತಿಸಲಾಗಿದೆ: ಸಣ್ಣ ನೀರಾವರಿ‌ ಸಚಿವ ಮಾಧುಸ್ವಾಮಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada