ಸೆಂಟ್ ಜೋಸೆಫ್ ಶಾಲೆಯಲ್ಲೂ ಅಯ್ಯಪ್ಪ ಸ್ವಾಮಿ ಮಾಲೆ ವಿವಾದ: ಮಣಿಕಂಠನಿಗೆ ನಿಂದನೆ
ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಲ್ಲಿ ಅಯ್ಯಪ್ಪ ಮಾಲೆ ಧರಿಸಿದ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಸಂತ ಜೋಸೆಫ್ ಶಾಲೆ ಮತ್ತು ಎಂಇಎಸ್ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಹಾಕಲಾಗಿತ್ತು. ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಘಟನೆಗಳನ್ನು ಖಂಡಿಸಿ ಭಜರಂಗದಳ ಹಾಗೂ ಅಯ್ಯಪ್ಪ ಮಾಲಾಧಾರಿಗಳು ಪ್ರತಿಭಟನೆ ನಡೆಸಿದ್ದು, ಸಾರ್ವಜನಿಕರು ತನಿಖೆಗೆ ಆಗ್ರಹಿಸಿದ್ದಾರೆ. ಇದು ಧಾರ್ಮಿಕ ಹಕ್ಕುಗಳ ಮೇಲಿನ ವಿವಾದವನ್ನು ಹುಟ್ಟುಹಾಕಿದೆ.

ಚಿಕ್ಕಮಗಳೂರು, ಡಿಸೆಂಬರ್ 19: ಇತ್ತೀಚೆಗೆ ಹಲವು ಶಾಲಾ ಕಾಲೇಜುಗಳಲ್ಲಿ ಅಯ್ಯಪ್ಪ ಮಾಲೆ (Ayyappa Mala) ಧರಿಸಿದ ಬರುವ ಮಕ್ಕಳನ್ನು ಶಿಕ್ಷಿಸುವ ಪ್ರಕರಣಗಳು ಬೆಳಕಿಗೆ ಬಂದಿವೆ. ಚಿಕ್ಕಮಗಳೂರಿನ (Chikkamgaluru) MES ಪಿಯು ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲೆಯಲ್ಲಿ ಇದೇ ವಿಚಾರವಾಗಿ ಗಲಾಟೆಯಾಗಿದ್ದು, ನಗರದ ಶಾಲೆಯೊಂದರಲ್ಲಿ ಅಯ್ಯಪ್ಪ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಾಲಾಧಾರಿ ವಿದ್ಯಾರ್ಥಿಯನ್ನು ಹೊಡೆದು, ಹೊರಹಾಕಿದ ಆರೋಪ
ನಗರದ ಸಂತ ಜೋಸೆಫ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಶಾಲೆಯಿಂದ ಹೊರ ಕಳಿಸಿದ್ದಾರೆ ಎಂದು ಮಕ್ಕಳು ಮತ್ತು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆಯ ವಿರುದ್ಧ ಭಜರಂಗದಳ ಕಾರ್ಯಕರ್ತರು ಹಾಗೂ ನೂರಾರು ಅಯ್ಯಪ್ಪ ಮಾಲಾಧಾರಿಗಳು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವೇಳೆ ಶಾಲಾ ಆಡಳಿತ ಮಂಡಳಿ ಅಯ್ಯಪ್ಪ ಮಾಲಾಧಾರಿಗಳ ಬಳಿ ಕ್ಷಮೆ ಯಾಚಿಸಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇದನ್ನೂ ಓದಿ ಅಯ್ಯಪ್ಪ ಮಾಲೆ ಹಾಕಿದ ಮಕ್ಕಳು ಶಾಲೆಗೆ ಬರಬಾರದೇ? ಮಾಲೆ ಧರಿಸಿದ ಮಕ್ಕಳನ್ನು ಹೊರಹಾಕಿದ ಮುಖ್ಯ ಶಿಕ್ಷಕಿ
ಒಂದೇ ತಿಂಗಳಲ್ಲಿ ಮೂರು ಬಾರಿ ಮಾಲಾಧಾರಿಗಳ ಮೇಲೆ ದೌರ್ಜನ್ಯ
ಡಿಸೆಂಬರ್ 1 ರಂದು ಚಿಕ್ಕಮಗಳೂರಿನ MES ಪಿಯು ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದು, ಅಯ್ಯಪ್ಪ ಮಾಲೆ ತೆಗೆದು ಬರುವಂತೆ ಸೂಚನೆ ನೀಡಿ ಹೊರಗೆ ಕಳುಹಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿದಂತೆ ನೂರಾರು ಹಿಂದೂ ಸಂಘಟನೆಗಳ ಮುಖಂಡರು, ಕಾಲೇಜು ಬಳಿ ಬಂದು ಕಾಲೇಜ್ ಅಡಳಿತ ಮಂಡಳಿಯ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಯ್ಯಪ್ಪ ಮೂಲಾಧಾರಿಗಳನ್ನ ಹೊರ ಕಳಿಸಿದ್ರೆ ನೂರಾರು ವಿದ್ಯಾರ್ಥಿಗಳಿಗೆ ಮಾಲೆ ಹಾಕಿಸುವ ಎಚ್ಚರಿಕೆ ನೀಡಿದ್ದರು.
ಅಷ್ಟೇ ಅಲ್ಲದೇ ಬುಧವಾರ (ಡಿ.17) ಅಯ್ಯಪ್ಪ ಮಾಲೆ ಧರಿಸಿದ್ದ ಹಿನ್ನೆಲೆಯಲ್ಲಿ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ವಾಪಾಸ್ ಕಳುಹಿಸಲಾಗಿದೆ ಎಂದು ಪ್ರಭಾರಿ ಮುಖ್ಯ ಶಿಕ್ಷಕಿ ಭಾಗ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಆದರೆ ಆರೋಪಗಳನ್ನು ತಳ್ಳಿಹಾಕಿರುವ ಮುಖ್ಯ ಶಿಕ್ಷಕಿ , ನಾನು ಯಾವುದೇ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಗೆ ಕಳುಹಿಸಿಲ್ಲ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಚಿಕ್ಕಮಗಳೂರಿನಲ್ಲಿ ಶಿಕ್ಷಕ ಮಾಲೆ ಧರಿಸಿದ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



