ಘೋರ ದುರಂತ: ಚಿಕ್ಕಮಗಳೂರಿನಲ್ಲಿ ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಂಭೀರ ಗಾಯ!

ಚಿಕ್ಕಮಗಳೂರು ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ವೇಳೆ ಭೀಕರ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಜನರ ಗುಂಪಿಗೆ ನುಗ್ಗಿದ್ದರಿಂದ 7 ವರ್ಷದ ಬಾಲಕಿ ಸಾನ್ವಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಘೋರ ದುರಂತ: ಚಿಕ್ಕಮಗಳೂರಿನಲ್ಲಿ ಮೆರವಣಿಗೆ ಮೇಲೆ ಹರಿದ ಕಾರು; 7 ವರ್ಷದ ಬಾಲಕಿ ಸಾವು, 9 ಮಂದಿಗೆ ಗಂಭೀರ ಗಾಯ!
ಚಿಕ್ಕಮಗಳೂರಿನಲ್ಲಿ ಕಾರು ಅಪಘಾತ
Edited By:

Updated on: Apr 15, 2026 | 6:09 AM

ಚಿಕ್ಕಮಗಳೂರು, ಏ.15: ಜಿಲ್ಲೆಯ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆಯ ಸಂಭ್ರಮದ ನಡುವೆಯೇ ಮೃತ್ಯು ಕಾರಿನ ರೂಪದಲ್ಲಿ ಬಂದಪ್ಪಳಿಸಿದೆ. ವೇಗವಾಗಿ ಬಂದ ಕಾರೊಂದು ಮೆರವಣಿಗೆಯಲ್ಲಿದ್ದ ಜನರ ಮೇಲೆ ಹರಿದ ಪರಿಣಾಮ 7 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರೊಂದು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ. ಈ ಘಟನೆಯು ಹಾಸನದ ಗಣಪತಿ ಮೆರವಣಿಗೆಯ ವೇಳೆ ನಡೆದಿದ್ದ ದುರಂತವನ್ನು ನೆನಪಿಸುವಂತಿದೆ.ಇಂದಾವರ ಗ್ರಾಮದಿಂದ ಬಿಳೆಕಲ್ಲು ಗ್ರಾಮದ ತನ್ನ ತಂಗಿ ಮನೆಗೆ ಹೋಗಿದ್ದ ಸಾನ್ವಿ (7) ಎಂಬ ಬಾಲಕಿ ಕಾರು ಗುದ್ದಿದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಅಪಘಾತದಲ್ಲಿ ನಿಶ್ಚಿತ (11), ತೃಪ್ತಿ (11), ತಿಮ್ಮರಾಜು (45), ಉಷಾ (22), ಸೃಷ್ಟಿ (18), ನಾಗರಾಜು (28), ಚೇತನ್ (16) ಸೇರಿದಂತೆ ಒಟ್ಟು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಎಂಟು ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರಿನಲ್ಲಿದ್ದ ಸುಧಾಕರ್ ಎಂಬುವವರಿಗೂ ಗಾಯಗಳಾಗಿದ್ದು, ಅವರ ಸ್ಥಿತಿಯೂ ಗಂಭೀರವಾಗಿದೆ.

ಇದನ್ನೂ ಓದಿ: ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು

ಘಟನೆಯಿಂದ ರೊಚ್ಚಿಗೆದ್ದ ನೂರಾರು ಗ್ರಾಮಸ್ಥರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ. ಗಾಯಾಳು ಕಾರು ಚಾಲಕನನ್ನು ಹಾಸನಕ್ಕೆ ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಆಕ್ರೋಶ ಹೊರಹಾಕಿದ್ದರಿಂದ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us