
ಚಿಕ್ಕಮಗಳೂರು, ಡಿಸೆಂಬರ್ 6: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ (40) ಅವರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಯಾದ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು.
ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿದ ಶಾಸಕ ಆನಂದ್, ‘ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದೆ. ನಂತರ ಗಣೇಶ್ ಅವರನ್ನು ಕರೆಸಿ ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 8 ಜನರು ಶಾಮೀಲಾಗಿರುವ ಶಂಕೆ ಇದೆ. ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇತ್ತು. ಪೊಲೀಸರು ಸಮಯಕ್ಕೆ ಕ್ರಮ ಕೈಗೊಂಡಿದ್ದರೆ ಈ ಘಟನೆ ತಪ್ಪಿಸಬಹುದಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದೆ.
ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಕಲ್ಮರಡಿ ಮಠದ ಕಿರಿದಾದ ರಸ್ತೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ ಬೈಕ್ನಲ್ಲಿ ಅಡ್ಡಗಟ್ಟಿದ ಹಂತಕರ ತಂಡ ಅವರ ಮೇಲೆ ಮಚ್ಚಿನಿಂದ ದಾಳಿ ಮಾಡಿದೆ. ನಂತರ ಮಚ್ಚನ್ನು ಅಲ್ಲೇ ಬಿಸಾಡಿ ಹಂತಕರು ತೆರಳಿದ್ದಾರೆ. ಸದ್ಯ ಆ ಮಚ್ಚು ರಸ್ತೆಯಲ್ಲೇ ಬಿದ್ದಿದೆ.
ಘಟನೆ ಸಂಬಂಧ ಸಖರಾಯಪಟ್ಟಣ ಪೊಲೀರು ಈವರೆಗೆ ಐವರನ್ನು ವಶಕ್ಕೆ ಪಡೆದಿದ್ದಾರೆ. ಸಂಜಯ್, ಭೂಷಣ್, ಮಿಥುನ್ ಸೇರಿದಂತೆ 5 ಜನರನ್ನು ವಶಕ್ಕೆ ಪಡೆಯಲಾಗಿದೆ.
ಇದನ್ನೂ ಓದಿ: ಸೈಬರ್ ಕ್ರೈಂ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್ಗಳ ಸಂಖ್ಯೆ 13,000ಕ್ಕೆ ಇಳಿಕೆ
ಘಟನೆ ಸಂಬಂಧ ಬಜರಂಗದಳದ 6 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳಾದ ಸಂಜಯ್, ನಿತಿನ್, ನಾಗಭೂಷಣ್, ದರ್ಶನ್, ಅಜಯ್ ಸೇರಿದಂತೆ ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸದ್ಯ ಸಂಜಯ್, ನಾಗಭೂಷಣ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಮಿಥುನ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Published On - 7:57 am, Sat, 6 December 25