ಚಿಕ್ಕಮಗಳೂರಿನಲ್ಲಿ ಮಳೆಯಿಂದ ಗುಡ್ಡ ಕುಸಿತ: ಸೊಲ್ಲಾಪುರ-ಮಂಗಳೂರು ಹೆದ್ದಾರಿ ಬಂದ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದಾಗಿ ಅಪಾರ ಹಾನಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ. ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ. ಮರಗಳು ಬಿದ್ದು ಮನೆ ಮತ್ತು ವಾಹನಗಳಿಗೆ ಹಾನಿಯಾಗಿದೆ. ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ. ನಿರಂತರ ಮಳೆ-ಗಾಳಿಯಿಂದ ಜನರು ಹೈರಾಣಾಗಿದ್ದಾರೆ.

ಚಿಕ್ಕಮಗಳೂರು, ಜೂನ್ 17: ಚಿಕ್ಕಮಗಳೂರು (Chikkamagaluru) ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಗಾಳಿ-ಮಳೆಯಿಂದ (Monsoon Rain) ಜಿಲ್ಲೆಯಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿದೆ. ಮರಗಳು ಧರೆಗೆ ಉರುಳಿವೆ, ಗುಡ್ಡ ಕುಸಿತವಾಗಿದೆ. ಗಾಳಿ-ಮಳೆಯಿಂದ ಸೃಷ್ಟಿಯಾದ ಅವಾಂತರಗಳಿಂದ ಜನರು ಹೈರಾಣಾಗಿದ್ದಾರೆ. ಸೊಲ್ಲಾಪುರದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ (Natioanl Highway 169) ಗುಡ್ಡ ಕುಸಿತಗೊಂಡ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ಶೃಂಗೇರಿ ತಾಲೂಕಿನ ನೆಮ್ಮಾರು, ತನಿಕೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತಗೊಂಡಿದೆ. ಆದ್ದರಿಂದ ತನಿಕೋಡು ಚೆಕ್ಪೋಸ್ಟ್ನಿಂದ ಎಸ್.ಕೆ. ಗಡಿಯವರೆಗೆ ಮಂಗಳವಾರ (ಜೂ.17) ರಾತ್ರಿಯಿಂದ ಜೂನ್ 20ರ ಬೆಳಗ್ಗೆ 8ರವರೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ಮಾದರಿಯ ವಾಹನ ಸಂಚಾರಕ್ಕೆ ಜಿಕ್ಕಮಗಳೂರು ಜಿಲ್ಲಾಡಳಿತ ನಿರ್ಬಂಧಿಸಿದೆ. ಬದಲಿ ಮಾರ್ಗವಾದ ಬಾಳೆಹೊನ್ನೂರು, ಮಾಗುಂಡಿ, ಕಳಸ, ಕುದುರೆಮುಖ ಮುಖಾಂತರ ಎಸ್.ಕೆ.ಬಾರ್ಡರ್ಗೆ ತಲುಪುವಂತೆ ವಾಹನ ಸವಾರರಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದ್ದಾರೆ.
ಮರ ಬಿದ್ದು ಕಾರುಗಳಿಗೆ ಹಾನಿ
ಮಂಗಳವಾರ (ಜೂನ್.17) ಬೆಳಗ್ಗೆ ಶೃಂಗೇರಿ ತಾಲೂಕಿನ ಸಾಲ್ಮರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭೂಕುಸಿತ ಉಂಟಾಗಿತ್ತು. ಈ ಸಂದರ್ಭದಲ್ಲಿ ವಾಹನ ಸವಾರರು ಆತಂಕದಲ್ಲೇ ಸಂಚಾರ ಮಾಡಿದರು. ಇನ್ನು, ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಗ್ರಾಮದಲ್ಲಿ ಗಾಳಿ-ಮಳೆಗೆ ಬುಡಸಮೇತ ಹಳೆ ಮರ ಮುರಿದುಬಿದ್ದು ಎರಡು ಕಾರುಗಳಿಗೆ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಅನಾಹುತ ತಪ್ಪಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮರ ಬಿದ್ದು ಇಬ್ಬರು ಮೃತಪಟ್ಟಿದ್ದರೂ ಜಿಲ್ಲಾಡಳಿತ ಇನ್ನೂವರೆಗೂ ಎಚ್ಚೆತ್ತುಕೊಂಡಿಲ್ಲ. ಕಡೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 173ನ ಪಕ್ಕದಲ್ಲಿರುವ ನೂರಾರು ಮರಗಳು ರಸ್ತೆಗೆ ಬೀಳುವ ಸ್ಥಿತಿಯಲ್ಲಿವೆ. ನಿತ್ಯ ಈ ಹೆದ್ದಾರಿಯಲ್ಲಿ ಸಾವಿರಾರು ವಾಹನಗಳು ಸಂಚಾರ ಮಾಡುತ್ತವೆ.
ಇದನ್ನೂ ಓದಿ: ಕರ್ನಾಟಕದಾದ್ಯಂತ ಜೂನ್ 23ರವರೆಗೂ ಭಾರಿ ಮಳೆ, ಕರಾವಳಿಗೆ ರೆಡ್ ಅಲರ್ಟ್
ಮನೆಯ ಮೇಲೆ ಬಿದ್ದ ಬೃಹತ್ ಮರ
ಬಿರುಗಾಳಿ ಮಳೆ ಆರ್ಭಟಕ್ಕೆ ಕಳಸ ತಾಲೂಕಿನ ಮರಸಣಿಗೆ ಗ್ರಾಮದ ಗಾಂಧಿನಗರದಲ್ಲಿನ ಪ್ರೇಮ ಸುಂದರ್ ಎಂಬುವವರ ಬೃಹತ್ ಮರ ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಯ ಮೇಲ್ಛಾವಣಿ ಪುಡಿಪುಡಿಯಾಗಿದ್ದು, ಮನೆಯಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಾಳು ಮಹಿಳೆಯನ್ನು ಕಳಸ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತಿ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:21 pm, Tue, 17 June 25