ಚಿಕ್ಕಮಗಳೂರಲ್ಲಿ ವರುಣಾರ್ಭಟ: ಮನೆಗಳಿಗೆ ನುಗ್ಗಿದ ಚರಂಡಿ ನೀರು, ಮರ ಬಿದ್ದು ರಸ್ತೆ ಬಂದ್
ಚಿಕ್ಕಮಗಳೂರಿನಲ್ಲಿ ಗುಡುಗು ಸಹಿತ ಸುರಿದ ಭಾರಿ ಮಳೆಗೆ ಜನ ಜೀವನ್ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ.

ಚಿಕ್ಕಮಗಳೂರು, ಮೇ 26: ಜಿಲ್ಲೆಯ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಬಿಸಿಲ ತಾಪಕ್ಕೆ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ಮುಳ್ಳಯ್ಯನಗಿರಿ ಭಾಗದಲ್ಲಿ ಕಳೆದ ಅರ್ಧಗಂಟೆಯಿಂದ ಭಾರಿ ಮಳೆಯಾಗಿದ್ದು, ಹೊನ್ನಮ್ಮನಹಳ್ಳ ಬಳಿ ಗುಡ್ಡ ಪ್ರದೇಶದಿಂದ ಭಾರಿ ಪ್ರಮಾಣದ ನೀರು ಹರಿದುಬಂದಿದೆ. ಚಂದ್ರದ್ರೋಣ ಪರ್ವತದ ಸಾಲಿನ ಹೊನ್ನಮ್ಮನಹಳ್ಳ, ಮುಳ್ಳಯ್ಯನಗಿರಿ, ಬಾಬಾ ಬುಡನ್ ಗಿರಿ ಭಾಗದಲ್ಲಿ ಗುಡುಗು-ಮಿಂಚು ಮತ್ತು ಗಾಳಿ ಸಹಿತ ಭಾರಿ ಮಳೆಯಾಗಿದೆ.
ಮುಖ್ಯಾಂಶಗಳು
- ಚಿಕ್ಕಮಗಳೂರು ಜಿಲ್ಲೆಯ ಹಲವು ಭಾಗಗಳಲ್ಲಿ ವರುಣಾರ್ಭಟ
- ಗಾಳಿ ಸಹಿತ ಭಾರಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತ
- ಮನೆಗಳಿಗೆ ಚರಂಡಿ ನೀರು ನುಗ್ಗಿ ಸಾಲು ಸಾಲು ಅವಾಂತರ
ಮನೆಗಳಿಗೆ ನುಗ್ಗಿದ ಚರಂಡಿ ನೀರು
ಧಾರಾಕಾರವಾಗಿ ಸುರಿದ ಗಾಳಿ ಮಳೆಗೆ ಚಿಕ್ಕಮಗಳೂರು ನಗರದಲ್ಲಿ ಸಾಲು ಸಾಲು ಅವಾಂತರಗಳು ನಡೆದಿದೆ. ನಗರದ ಹಳೆ ಉಪ್ಪಳ್ಳಿ, ಗೌರಿ ಕಾಲುವೆ ಬಡಾವಣೆಯ ಹತ್ತಾರು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರದಾಟ ನಡೆಸಿದ್ದಾರೆ. ರಾಜಕಾಲುವೆಯದುರಾವಸ್ಥೆಯಿಂದಲೇ ಮನೆಗಳಿಗೆ ಮಳೆ ನೀರು ನುಗ್ಗಿದೆ. ಪರಿಣಾಮ ಮನೆಯಲ್ಲಿದ್ದ ಅಗತ್ಯ ವಸ್ತುಗಳು, ವಸ್ತ್ರಗಳು ನೀರುಪಾಲಾಗಿವೆ ಎಂದು ಸ್ಥಳೀಯರು ಅಲವತ್ತುಕೊಂಡಿದ್ದಾರೆ.
ಇದನ್ನೂ ಓದಿ: ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಮುಳುಗಿದ ರೈಲ್ವೇ ಅಂಡರ್ ಪಾಸ್, ಹೊಳೆಯಂತಾದ ರಸ್ತೆಗಳು
ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ಸಂಚಾರ ಅಸ್ತವ್ಯಸ್ತ

ರಸ್ತೆ ಮೇಲೆ ಉರುಳಿರುವ ಬೃಹತ್ ಮರ
ಇತ್ತ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಬಳಿ ಗಾಳಿ ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದ ಪರಿಣಾಮ ಚಿಕ್ಕಮಗಳೂರು-ಶಾಂತವೇರಿ, ಲಿಂಗದಹಳ್ಳಿ ರಸ್ತೆ ಸಂಚಾರ ಬಂದ್ ಆಗಿದೆ. ಚಿಕ್ಕಮಗಳೂರು-ತರೀಕೆರೆ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಆಗಿದ್ದು, ವಾಹನಗಳು ರಸ್ತೆಯಲ್ಲಿ ನಿಂತಲ್ಲೇ ನಿಂತ ದೃಶ್ಯಗಳು ಕಂಡುಬಂದಿವೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.





