ಚಿಕ್ಕಮಗಳೂರು: 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿ ಮೌಲ್ಯದ ಚಿನ್ನ, ಡೈಮಂಡ್ ಹಾಗೂ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯಾದ್ಯಂತ ನೀತಿ ಸಂಹಿತಿ ಜಾರಿಯಲ್ಲಿದ್ದು, ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಫ್ಲೈಯಿಂಗ್ ಸ್ಕ್ವಾಡ್, ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ಅಲ್ಲಲ್ಲಿ ಚೆಕ್​ಪೋಸ್ಟ್​ಗಳನ್ನು ಹಾಕಿ ವಾಹನಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಅದರಂತೆ ಕೋಟ್ಯಂತರ ಮೌಲ್ಯದ ಚಿನ್ನ, ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದ್ದು, ನಗದು ಕೂಡ ಜಪ್ತಿ ಮಾಡಲಾಗಿದೆ.

ಚಿಕ್ಕಮಗಳೂರು: 4 ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಪೊಲೀಸರು
ದಾಖಲೆ ಇಲ್ಲದೆ ಸಾಗಿಸುತ್ತಿದ್ದ 4 ಕೋಟಿ ಮೌಲ್ಯದ ಚಿನ್ನ, ಡೈಮಂಡ್ ಹಾಗೂ ಬೆಳ್ಳಿ ವಸ್ತುಗಳಿರುವ ಬಾಕ್ಸ್​ಗಳು
Edited By: Rakesh Nayak Manchi

Updated on: Mar 26, 2024 | 9:17 PM

ಚಿಕ್ಕಮಗಳೂರು, ಮಾ.26: ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಜಿಲ್ಲೆಯ (Chikkamagaluru) ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. 6 ಕೆಜಿ 586 ಗ್ರಾಂ ಚಿನ್ನ (Gold), 1 ಕೆಜಿ 71.492 ಗ್ರಾಂ ವಜ್ರಾಭರಣ, 1 ಕೆಜಿ ಬೆಳ್ಳಿ ವಸ್ತುಗಳನ್ನು ಚೆಕ್ ಪೋಸ್ಟ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಒಂದು ಕಾರು ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಹೀಗಾಗಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಕೋಟ್ಯಂತರ ಮೌಲ್ಯದ ಚಿನ್ನಾಭರಣಗಳು ಪತ್ತೆಯಾಗಿವೆ. ಸಾಗಿಸಲಾಗುತ್ತಿದ್ದ ಚಿನ್ನ, ಬೆಳ್ಳಿ, ಡೈಮಂಡ್​ಗಳ ದಾಖಲೆಗಳನ್ನು ಕೇಳಿದಾಗ ಸಂಬಂಧಪಟ್ಟವರು ದಾಖಲೆ ನೀಡಿಲ್ಲ. ಹೀಗಾಗಿ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿ ಚಿನ್ನಾಭರಣದ ಮೂಲದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಚುನಾವಣಾ ಅಧಿಕಾರಿಗಳ ಹದ್ದಿನ ಕಣ್ಣು: ರಾಜ್ಯದ ವಿವಿಧಡೆ ಅಕ್ರಮವಾಗಿ ಸಾಗಿಸುತ್ತಿದ್ದ ಹಣ, ವಸ್ತುಗಳು ಜಪ್ತಿ

ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಕೋಟ್ಯಂತರ ಮೌಲ್ಯದ ಚಿನ್ನ, ಡೈಮಂಡ್ಸ್ ಹಾಗೂ ಬೆಳ್ಳಿ ವಸ್ತುಗಳನ್ನು ಟ್ರಕ್ ಮೂಲಕ ಸಾಗಾಟ ಮಾಡಲಾಗುತ್ತಿತ್ತು. ಈ  ವೇಳೆ ಚುನಾವಣಾಧಿಕಾರಿಗಳು, ಪೊಲೀಸರು ಟ್ರಕ್ ತಡೆದು ಪರಿಶೀಲನೆ ನಡೆಸಿದಾಗ ಚಿನ್ನಾಭರಣಗಳನ್ನು ಸಾಗಿಸುತ್ತಿರುವ ವಿಚಾರ ತಿಳಿದುಬಂದಿದೆ. ಪ್ರಾಥಮಿಕ ತನಿಖೆ ವೇಳೆ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿರುವುದು ತಿಳಿದುಬಂದ ಹಿನ್ನೆಲೆ ಅವುಗಳನ್ನು ವಶಕ್ಕೆ ಪಡೆದಿದ್ದಾರೆ.

ಬನವಾಸಿ ಚೆಕ್‌ಪೋಸ್ಟ್‌ ಬಳಿ 6 ಲಕ್ಷ ಜಪ್ತಿ

ಕಾರವಾರ: ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಕಂದಾಯ ಅಧಿಕಾರಿಗಳು 6.7 ಲಕ್ಷ ನಗದು ವಶಕ್ಕೆ ಪಡೆದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಅಥಣಿ ನಿವಾಸಿ ಪರಶುರಾಮ್‌ ಯಲ್ಲಪ್ಪ ಅವರಿಗೆ ಸೇರಿದ 5.2 ಲಕ್ಷ ನಗದನ್ನು ಶಿರಸಿ ತಾಲೂಕಿನ ಬನವಾಸಿ ಚೆಕ್‌ಪೋಸ್ಟ್‌ ಬಳಿ ವಶಕ್ಕೆ ಪಡೆಯಲಾಗಿದೆ. ಚಿನ್ನ ಖರೀದಿಸಲು ಸೊರಬದಿಂದ ಶಿರಸಿಗೆ ತೆರಳುತ್ತಿದ್ದ ಶಿವಮೊಗ್ಗ ಜಿಲ್ಲೆ ಸೊರಬದ ರೇಣುಕಾ ನಾಗರಾಜ್‌ ಎಂಬವರ ಬಳಿಯಿಂದ 1.5 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಸೂಕ್ತ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಿನ್ನೆಲೆ ಜಪ್ತಿ ಮಾಡಲಾಗಿದೆ.

ಪಿಳ್ಳೆಕೇರನಹಳ್ಳಿ ಚೆಕ್​​ಪೋಸ್ಟ್​ ಬಳಿ 20 ಲಕ್ಷ ನಗದು ಜಪ್ತಿ

ಚಿತ್ರದುರ್ಗ: ತಾಲೂಕಿನ ಪಿಳ್ಳೆಕೇರನಹಳ್ಳಿ ಚೆಕ್​​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ 35 ಸಾವಿರ ರೂ. ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ತಹಶೀಲ್ದಾರ್ ನಾಗವೇಣಿ ನೇತೃತ್ವದ ಎಸ್.ಎಸ್.ಟಿ ಹಾಗೂ ಎಫ್.ಎಸ್.ಟಿ ತಂಡವು ಈ ಹಣವನ್ನ ವಶಕ್ಕೆ ಪಡೆದಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
Follow Us