Congress: ಸಿಟಿ ರವಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಮುಂದಾದ ಕಾಂಗ್ರೆಸ್ ಹೈಕಮಾಂಡ್​​ಗೆ ಸ್ವಪಕ್ಷದಿಂದಲೇ ವಿರೋಧ!

ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ತಮ್ಮಯ್ಯಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ ಟಕ್ಕರ್ ನೀಡಲು ಮುಂದಾಗಿದ್ದ ಕಾಂಗ್ರೆಸ್ ಹೈಕಮಾಂಡ್​ಗೆ ಇದೀಗ ಪ್ರತಿರೋಧದ ಬಿಸಿ ತಟ್ಟಿದೆ.

ಚಿಕ್ಕಮಗಳೂರು: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ (Congress) ಸೇರಿದ್ದ ತಮ್ಮಯ್ಯಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿಗೆ (CT Ravi) ಟಕ್ಕರ್ ನೀಡಲು ಮುಂದಾಗಿದ್ದ ಕಾಂಗ್ರೆಸ್ (Congress) ಹೈಕಮಾಂಡ್​ಗೆ ಇದೀಗ ಪ್ರತಿರೋಧದ ಬಿಸಿ ತಟ್ಟಿದೆ. ಮೂಲ ಕಾಂಗ್ರೆಸ್ಸಿಗರನ್ನು ಬಿಟ್ಟು ವಲಸಿಗರಿಗೆ ಟಿಕೆಟ್ ನೀಡದಂತೆ ಪಕ್ಷದೊಳಗೆ ಆಗ್ರಹ ವ್ಯಕ್ತವಾಗಿದೆ. ಇದರೊಂದಿಗೆ ಟಿಕೆಟ್ ನಿರ್ಧಾರ ಕೈಗೊಳ್ಳುವ ವಿಚಾರದಲ್ಲಿ ಹೈಕಮಾಂಡ್​ ಇಕ್ಕಟ್ಟಿಗೆ ಸಿಲುಕಿದೆ. ಚಿಕ್ಕಮಗಳೂರಿನಲ್ಲಿ ಮೂಲ ಕಾಂಗ್ರೆಸ್ ಹಾಗೂ ವಲಸೆ ಕಾಂಗ್ರೆಸಿಗರ ನಡುವೆ ಟಿಕೆಟ್​ಗಾಗಿ ಪೈಪೋಟಿ ತೀವ್ರಗೊಂಡಿದೆ. ಹಿಂದೆ ಸಿಟಿ ರವಿ ಅವರ ಆಪ್ತರಾಗಿದ್ದ ತಮ್ಮಯ್ಯ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದಲ್ಲದೆ, ರವಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು.

ಶಾಸಕ ಸಿಟಿ ರವಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಕ್ಕೆ ಯೋಜನೆ ಸಿದ್ದಪಡಿಸಿದ್ದ ಕಾಂಗ್ರೆಸ್ ಹೈಕಮಾಂಡ್, ರವಿ ಅವರ ಮಾಜಿ ಆಪ್ತನನ್ನೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ತಮ್ಮಯ್ಯ ಟಿಕೆಟ್​ಗೆ ಅರ್ಜಿ ಸಲ್ಲಿಸದಿದ್ದರೂ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ಮುಂದಾಗಿದೆ ಎನ್ನಲಾಗಿದೆ.

ಈ ಮಧ್ಯೆ, ವಲಸಿಗರು ಮತ್ತು ಮೂಲ ಕಾಂಗ್ರೆಸ್ಸಿಗರ ನಡುವೆ ಟಿಕೆಟ್ ಫೈಟ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ಕರೆಯಲಾಗಿತ್ತು. 6 ಮಂದಿ ಟಿಕೆಟ್ ಆಕಾಂಕ್ಷಿಗಳ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ವಲಸಿಗರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಕಾರ್ಯಕರ್ತರು ಸಭೆಯಲ್ಲಿ ಎಚ್ಚರಿಕೆ ನೀಡಿದ್ದರು.

ಸಿಟಿ ರವಿ – ತಮ್ಮಯ್ಯ ವಾಕ್ಸಮರ

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೆಯೇ ಸಿಟಿ ರವಿ ವಿರುದ್ಧ ವಾಕ್ಸಮರ ಆರಂಭಿಸಿದ್ದ ತಮ್ಮಯ್ಯ ಅನೇಕ ಆರೋಪಗಳನ್ನು ಮಾಡಿದ್ದಾರೆ, ಮಾಡುತ್ತಿದ್ದಾರೆ. ಸಿಟಿ ರವಿ ಕೂಡ ಅದಕ್ಕೆ ತಿರುಗೇಟು ನೀಡುತ್ತಿದ್ದಾರೆ. ಇದರೊಂದಿಗೆ ಚಿಕ್ಕಮಗಳೂರು ರಾಜಕೀಯ ತೀವ್ರ ಜಿದ್ದಾಜಿದ್ದಿಯ ಕ್ಷೇತ್ರವಾಗಿ ಮಾರ್ಪಟ್ಟಿದೆ.

ರವಿ ಅವರ ಆಪ್ತ ಎಚ್.ಡಿ. ತಮ್ಮಯ್ಯ ಫೆಬ್ರುವರಿಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದರು. ತಮ್ಮಯ್ಯ ಅವರು ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಚಿಕ್ಕಮಗಳೂರು ಕ್ಷೇತ್ರದಲ್ಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿರುವ ಕಾರಣ ತಮ್ಮಯ್ಯ ನಿರ್ಗಮನ ರವಿಗೆ ಸಂಕಷ್ಟ ತಂದೊಡ್ಡಬಹುದು ಎನ್ನಲಾಗಿದೆ. ಇದನ್ನೇ ಬಂಡವಾಳ ಮಾಡಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ತಮ್ಮಯ್ಯಗೆ ಟಿಕೆಟ್ ನೀಡಲು ಮುಂದಾಗಿದ್ದು, ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Sat, 1 April 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us