ಚಿಕ್ಕಮಗಳೂರು: 5 ಮಂದಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳ ಬಂಧನ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳಿದ್ದಾರೆ ಎಂಬ ಆರೋಪಗಳ ನಡುವೆಯೇ ಐವರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಕಾಫಿ ಎಸ್ಟೇಟ್ಗಳಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದ ಆರೋಪಿಗಳ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿದೆ. ಈ ಪೈಕಿ ಕೆಲವರು ಕುಟುಂಬ ಸಮೇತ ಬಂದಿದ್ದಾರೆ. ಅವರು ಜಿಲ್ಲೆಗೆ ಹೇಗೆ ಬಂದರು ಮತ್ತು ಯಾರು ಕರೆತಂದರು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಖ್ಯಾಂಶಗಳು
- ಕಾಫಿನಾಡಲ್ಲಿ ಐವರು ಅಕ್ರಮ ಬಾಂಗ್ಲಾ ನಿವಾಸಿಗಳ ಬಂಧನ
- ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆ
- ಕರೆದುಕೊಂಡು ಬಂದ ಏಜೆಂಟ್ಗಾಗಿ ಪೊಲೀಸರ ಶೋಧ
ಚಿಕ್ಕಮಗಳೂರು, ಆಗಸ್ಟ್ 5: ಕಾಫಿನಾಡು ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಕಾಫಿ ತೋಟಗಳು, ಹೋಂಸ್ಟೇ ಹಾಗೂ ರೆಸಾರ್ಟ್ಗಳಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳಿದ್ದಾರೆ ಎಂಬ ಆರೋಪಗಳ ನಡುವೆ ಐವರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳನ್ನು ಪೊಲೀಸರು ಬಂದಿಸಿರುವುದು ಚರ್ಚೆಗೆ ಕಾರಣವಾಗಿದೆ. ಕೇಂದ್ರ ಗುಪ್ತಚರ ಇಲಾಖೆಯಿಂದ ಬಂದ ಮಾಹಿತಿಯ ಆಧಾರದಲ್ಲಿ ನಡೆಸಿದ ತಪಾಸಣೆ ವೇಳೆ ಐವರು ಪತ್ತೆಯಾಗಿದ್ದು, ಅವರ ಬಳಿ ಬಾಂಗ್ಲಾದೇಶದ ಗುರುತಿನ ಚೀಟಿಗಳು ಪತ್ತೆಯಾಗಿವೆ.
ಕಳೆದ ಎರಡು ತಿಂಗಳಿಂದ ಜಿಲ್ಲೆಯ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಬರುವ ಹೊರ ಜಿಲ್ಲೆ ಹಾಗೂ ಹೊರ ರಾಜ್ಯದ ಕಾರ್ಮಿಕರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದರು. ಇದೇ ವೇಳೆ ನಡೆದ ಪರಿಶೀಲನೆಯಲ್ಲಿ ಐವರು ಕಾಫಿ ಎಸ್ಟೇಟ್ಗಳು ಸೇರಿದಂತೆ ವಿವಿಧೆಡೆ ದಿನಗೂಲಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.
ಬಂಧಿತರನ್ನು ಜಹಾಂಗೀರ್, ಫೈಸುದ್ದಿನ್, ನುಮನ್ ಬಶೀರ್, ಮಹಮದ್ ಹುಮೈನ್ ಹಾಗೂ ಮಹಮದ್ ಹಸೀಬುಲ್ ಎಂದು ಗುರುತಿಸಲಾಗಿದೆ. ಕೆಲವರು ಒಂಟಿಯಾಗಿ ಚಿಕ್ಕಮಗಳೂರಿಗೆ ಬಂದಿದ್ದರೆ, ಇನ್ನೂ ಕೆಲವರು ಕುಟುಂಬ ಸಮೇತರಾಗಿ ಬಂದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಮಿಕರ ಪರಿಶೀಲನೆ ಕಾರ್ಯದ ವೇಳೆ ಪತ್ತೆ
ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಾರ್ಮಿಕರ ದಾಖಲೆ ಹಾಗೂ ಫೋಟೋಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಐವರು ಕಾಫಿ ಎಸ್ಟೇಟ್ಗಳು ಸೇರಿದಂತೆ ಯಾರೇ ದಿನಗೂಲಿ ಕೆಲಸಕ್ಕೆ ಕರೆದರೂ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.
ಯಾರು ಕರೆತಂದರು? ಪೊಲೀಸರಿಂದ ತನಿಖೆ
ಬಂಧಿತರು ಚಿಕ್ಕಮಗಳೂರಿಗೆ ಹೇಗೆ ಬಂದರು, ಅವರನ್ನು ಯಾರು ಕರೆತಂದರು, ಎಲ್ಲಿಂದ ಬಂದರು, ಅವರ ಏಜೆಂಟ್ ಯಾರು ಹಾಗೂ ಸಂಪರ್ಕ ಹೇಗೆ ಬೆಳೆಸಿಕೊಂಡರು ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿ ಪಡೆಯಲು ವಿಚಾರಣೆ ಮುಂದುವರಿದಿದೆ.
ಈಗಾಗಲೇ ಬೇರೆ ಜಿಲ್ಲೆಗಳು ಹಾಗೂ ರಾಜ್ಯಗಳಲ್ಲೂ ಅಕ್ರಮ ಬಾಂಗ್ಲಾದೇಶಿ ನಿವಾಸಿಗಳು ಬಂಧನವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.
ಬಾಂಗ್ಲಾದ ಅಕ್ರಮ ವಲಸಿಗರಿದ್ದಾರೆ ಎಂದು ಆರೋಪಿಸಿದ್ದ ಬಿಜೆಪಿ
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಸಾವಿರಾರು ಅಕ್ರಮ ಬಾಂಗ್ಲಾದೇಶಿ ನಿವಾಸಿಗಳಿದ್ದಾರೆ ಎಂದು ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳು ಹಲವು ವರ್ಷಗಳಿಂದ ಆರೋಪಿಸುತ್ತಿವೆ. ಸದ್ಯ ಐವರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಇನ್ನಷ್ಟು ಮಂದಿ ಇರಬಹುದೇ ಎಂಬ ಕುತೂಹಲ ಮೂಡಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




