Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ
Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.

ಬೆಂಗಳೂರು, ಜೂನ್ 09: ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವರುಣನ (Weather) ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ (Red Alert) ಘೋಷಿಸಿದೆ. ಇಂದೂ ಸೇರಿದಂತೆ ಮೂರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಪ್ರಕೃತಿ ವಿಕೋಪದ ಸಾಧ್ಯತೆ ಇರುವುದರಿಂದ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮುಖ್ಯಾಂಶಗಳು
- ಚಿಕ್ಕಮಗಳೂರು ಸೇರಿದಂತೆ ಐದು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.
- ನದಿ ತೀರ, ತಗ್ಗು ಪ್ರದೇಶಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.
- ತುರ್ತು ಪರಿಸ್ಥಿತಿಗಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಲ್ಪ್ಲೈನ್ ಆರಂಭಿಸಲಾಗಿದೆ.
5 ಜಿಲ್ಲೆಗಳಿಗೆ ರೆಡ್ ಅಲರ್ಟ್: ಎಲ್ಲೆಲ್ಲಿ ಭಾರಿ ಮಳೆ?
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲೂ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.
ಚಿಕ್ಕಮಗಳೂರಿನಲ್ಲಿ ಕಟ್ಟೆಚ್ಚರ: 24 ಗಂಟೆ ಸಹಾಯವಾಣಿ ಆರಂಭ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಹೈ ಅಲರ್ಟ್ ಘೋಷಿಸಿದ್ದಾರೆ. ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ತಾಲೂಕು ಮಟ್ಟದಲ್ಲಿ ಪರಿಸ್ಥಿತಿ ನಿಭಾಯಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಎಲ್ಲಾ ತುರ್ತು ಸೇವಾ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲೇ ಇರುವಂತೆ ಡಿಸಿ ಆದೇಶಿಸಿದ್ದಾರೆ. ಡಿಸಿ ಕಚೇರಿ ಮತ್ತು ಎಸ್ಪಿ ಕಚೇರಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಹೆಲ್ಪ್ಲೈನ್ ಆರಂಭಿಸಲಾಗಿದೆ. ತುರ್ತು ಸಂದರ್ಭದಲ್ಲಿ 08262-238950 ಅಥವಾ 9480805100 ನಂಬರ್ಗಳಿಗೆ ಕರೆ ಮಾಡುವಂತೆ ಹೇಳಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.




