ನಿಮ್ ಮನೆಗೆ ಕಾಳಿಂಗ ಸರ್ಪ ಬಂತಾ? ಹಿಡಿಯೋಕೆ ಅರಣ್ಯ ಇಲಾಖೆನೇ ಮಾಡುತ್ತೆ ವ್ಯವಸ್ಥೆ! ಸರ್ಕಾರದಿಂದ ಮಹತ್ವದ ಕ್ರಮ
ಮಲೆನಾಡಿನಲ್ಲಿ ಹೆಚ್ಚಾಗಿ ಕಂಡುಬರುವ ಕಾಳಿಂಗ ಸರ್ಪಗಳನ್ನು ಸುರಕ್ಷಿತವಾಗಿ ಸೆರೆಹಿಡಿಯಲು ಮತ್ತು ಕಾಡಿಗೆ ಬಿಡಲು ಅರಣ್ಯ ಇಲಾಖೆಯ ಸಿಬ್ಬಂದಿಗೆ ತರಬೇತಿ ನೀಡಿ ವಿಶೇಷ ತಂಡ ರಚಿಸುವಂತೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಕಾಳಿಂಗ ಸರ್ಪಗಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಬಹುದು ಎಂದಿದ್ದಾರೆ.

ಚಿಕ್ಕಮಗಳೂರು, ನವೆಂಬರ್ 24: ಚಿಕ್ಕಮಗಳೂರು (Chikkamagaluru) ಜಿಲ್ಲೆ ಅಜ್ಜಂಪುರದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲು ವಿಶೇಷ ತಂಡವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ. ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ಕಾಡಿಗೆ ಬಿಡಲು ಯಾವುದೇ ಖಾಸಗಿ ಸಂಸ್ಥೆಗಳ ಮೊರೆ ಹೋಗದೆ ಅರಣ್ಯ ಇಲಾಖೆಯ ವಿಭಾಗದ 5 ಸಿಬ್ಬಂದಿಗೆ ತರಬೇತಿ ನೀಡುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಕಾಳಿಂಗನ ಮೇಲಿನ ದೌರ್ಜನ್ಯಕ್ಕೆ ಬ್ರೇಕ್
ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಉಡುಪಿ ಭಾಗದಲ್ಲಿ ಕಾಳಿಂಗ ಸರ್ಪಗಳು ಹೆಚ್ಚಾಗಿ ಕಂಡು ಬರುತ್ತಿವೆ. ಜನವಸತಿ ಪ್ರದೇಶ ಸೇರಿದಂತೆ ಮನೆಯೊಳಗೆ, ತೋಟಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಕಾಳಿಂಗನಿಂದ ಸಾರ್ವಜನಿಕರಲ್ಲಿ ಭಯ ಮೂಡುತ್ತಿದೆ. ಇದಕ್ಕೆ ಪರಿಹಾರವಾಗಿ ಉರಗ ತಜ್ಞರು ಮತ್ತು ಖಾಸಗಿ ಸಂಸ್ಥೆಗಳನ್ನು ಸಂಪರ್ಕಿಸುವ ಅಗತ್ಯವಿಲ್ಲವೆಂದು ಹೇಳಿರುವ ಈಶ್ವರ್ ಖಂಡ್ರೆ, ಕಾಳಿಂಗ ಸರ್ಪವನ್ನು ಹಿಡಿಯಲು ಮತ್ತು ಸುರಕ್ಷಿತವಾಗಿ ಕಾಡಿಗೆ ಬಿಡಲು ನಮ್ಮದೇ ಇಲಾಖೆಯ ಅಧಿಕಾರಿಗಳಿಗೆ ತರಬೇತಿ ನೀಡಬೇಕು. ಒಬ್ಬ ಪ್ರಾದೇಶಿಕ ಅರಣ್ಯಾಧಿಕಾರಿಯೊಂದಿಗೆ ತರಬೇತಿ ಪಡೆತ 5 ಜನರ ತಂಡವನ್ನು ನೇಮಿಸಬೇಕು. ಈಗಾಗಲೆ ರಚಿಸಿರುವ ETF(Elephant task Force) ಮತ್ತು LTF (Leopard Task Force) ನಂತೆಯೇ ಕಾಳಿಂಗ ಸರ್ಪವನ್ನು ಹಿಡಿಯಲೂ ಒಂದು ತಂಡ ರಚಿಸುವುದರಿಂದ ಸರ್ಪಗಳ ಸೆರೆ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯ ವನ್ನೂ ತಪ್ಪಿಸಬಹುದಾಗಿದೆ ಎಂದು ಹೇಳೀದ್ದಾರೆ.
ಇದನ್ನೂ ಓದಿ ಆಗುಂಬೆ ಭಾಗದಲ್ಲಿ ಕಾಳಿಂಗ ಸರ್ಪ ಸಂಶೋಧನಾ ಹೆಸರಿನಲ್ಲಿ ವಂಚನೆ: ತನಿಖೆಗೆ ಆದೇಶ
ಈ ಹಿಂದೆ ಆಗುಂಬೆಯಲ್ಲಿರುವ ಕಾಳಿಂಗ ಮನೆಯ ವಿರುದ್ಧ ದೂರು ದಾಖಲಾಗಿತ್ತು. ಅದರೊಂದಿಗೆ ಪರಿಸರ ಸೂಕ್ಷ್ಮ ವಲಯದಲ್ಲಿ ವಾಣಿಜ್ಯ ಚಟುವಟಿಕೆಗಳಲ್ಲಿ ತೊಡಗಿದ ಮತ್ತು ಸಂಶೋಧನಾ ಅನುಮತಿಗಳನ್ನು ದುರುಪಯೋಗಪಡಿಸಿಕೊಂಡ ಆರೋಪವೂ ಕೇಳಿ ಬಂದಿತ್ತು. ಇಂತಹ ಎಲ್ಲಾ ಚಟುವಟಿಕೆಗಳನ್ನು ಹತೋಟಿಗೆ ತರಲು ಅರಣ್ಯ ಸಚಿವರು ಮುಂದಾಗಿದ್ದು, ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳ ತಂಡವನ್ನೇ ನೇಮಿಸಲಾಗುತ್ತದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
