
ಚಿತ್ರದುರ್ಗ, ಅಕ್ಟೋಬರ್ 21: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ (Headmaster) ವೀರೇಶ್ ಹಿರೇಮಠ್ 9 ವರ್ಷದ ವಿದ್ಯಾರ್ಥಿ ತರುಣ್ ಮೇಲೆ ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿ ತನ್ನ ಅಜ್ಜಿಗೆ ಫೋನ್ ಮಾಡಿದುದನ್ನು ಪ್ರಶ್ನಿಸಿದ ಶಿಕ್ಷಕ, ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾರೆ. ಈ ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ವಿಡಿಯೋ ವೈರಲ್ ಆದ ಬಳಿಕ ಶಿಕ್ಷಕ ನಾಪತ್ತೆಯಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ತರುಣ್ ಉತ್ತರ ಕರ್ನಾಟಕ ಮೂಲದ ವಿದ್ಯಾರ್ಥಿ ಆಗಿದ್ದು, ದೇಗುಲಕ್ಕೆ ಸೇರಿದ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಅಜ್ಜಿಗೆ ಬೇರೆ ನಂಬರಿನಿಂದ ಕರೆ ಮಾಡಿದರೆ ಬಿಡುವುದಿಲ್ಲ ಎಂದು ಶಿಕ್ಷಕ ವೀರೇಶ್ ಬೆದರಿಕೆಯೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆಯ ಕುರಿತು ಗುರು ತಿಪ್ಪೇಸ್ವಾಮಿ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರಪ್ಪ ಅವರು ನಾಯಕನಹಟ್ಟಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಿಕ್ಷಕ ಹಲ್ಲೆ ನಡೆಸುತ್ತಿರುವ ವಿಡಿಯೋ ಇಲ್ಲಿದೆ
ನಿನ್ನೆ (ಅ.20) ಸುಂಕದಕಟ್ಟೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿಗೆ ಮನ ಬಂದಂತೆ ಥಳಿಸಿರುವ ಘಟನೆ ನಡೆದಿದೆ. ಕಳೆದ ವಾರ ಎರಡು ದಿನ ಕ್ಲಾಸ್ ಗೆ ಹೋಗಿರಲಿಲ್ಲವೆಂಬ ಕಾರಣಕ್ಕೆ ಶಾಲೆಯ ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರು ಸೇರಿ ಕ್ಲಾಸ್ ಬಿಟ್ಟ ನಂತರ ಕ್ಲಾಸ್ ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್ನಿಂದ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ್ದಾರೆ.
ನಂತರ ಡಾರ್ಕ್ ರೂಮ್ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದ ವಿದ್ಯಾರ್ಥಿಯ ದೇಹದ ಕೆಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇನ್ನು ಹಲ್ಲೆಯಾದ ನಂತರ ಮನೆಯಲ್ಲಿ ಮಗು ಒಂಥರ ವಿಚಿತ್ರವಾಗಿ ಕಿರುಚಾಡುತ್ತ, ಓಡಾಡುತ್ತಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಮಗುವಿನ ಸ್ಥಿತಿಗೆ ಪೋಷಕರು ಕಂಗಾಲಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.