ಶಾಸಕರನ್ನೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ, ಆಯಕಟ್ಟಿನ ಪೋಸ್ಟಿಂಗ್​ಗೆ ಕೊಡಬೇಕು ಕೋಟಿ: ಭಾಸ್ಕರ್ ರಾವ್ ಆರೋಪ

ಜನರ ರಕ್ಷಣೆ ಮಾಡಬೇಕಾದ ಪೊಲೀಸರ ಸ್ಥಿತಿಯೇ ಕರ್ನಾಟಕದಲ್ಲಿ ಹದಗೆಟ್ಟಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದು, ಪೊಲೀಸರಿಗೇ ರಕ್ಷಣೆ ನೀಡಬೇಕಾದ ಸ್ಥಿತಿ ಇದೆ. ಶಾಸಕರನ್ನೆಲ್ಲ ತೋಳಗಳಂತೆ ಹಣ ಕೀಳಲು ಬಿಡಲಾಗಿದೆ. ಅದರಿಂದಾಗಿ ಜನರಿಗೆ ತೊಂದರೆಯಾಗುತ್ತಿದೆ. ಪೋಸ್ಟಿಂಗ್​ಗೆ ಕೋಟಿ ಕೋಟಿ ಲಂಚ ಕೊಡಬೇಕಾಗಿದೆ ಎಂದು ಆರೋಪಿಸಿದ್ದಾರೆ.

ಶಾಸಕರನ್ನೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ, ಆಯಕಟ್ಟಿನ ಪೋಸ್ಟಿಂಗ್​ಗೆ ಕೊಡಬೇಕು ಕೋಟಿ: ಭಾಸ್ಕರ್ ರಾವ್ ಆರೋಪ
ಭಾಸ್ಕರ್ ರಾವ್
Edited By:

Updated on: Aug 06, 2024 | 11:14 AM

ಚಿತ್ರದುರ್ಗ, ಆಗಸ್ಟ್ 6: ರಾಜ್ಯ ಸರ್ಕಾರ ರಕ್ಷಣೆ ಮಾಡುವವರನ್ನೇ ಭಕ್ಷಕರನ್ನಾಗಿ ಮಾಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಆರೋಪಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಪೊಲೀಸರನ್ನೇ ಈ ಸರ್ಕಾರ ಭಕ್ಷಕರನ್ನಾಗಿ ಮಾಡಿದೆ. ಲಕ್ಷಾಂತರ ರೂ. ಕೊಡುವವರೆಗೆ ಪೋಸ್ಟಿಂಗ್ ಕೊಡುವುದಿಲ್ಲ. ಸಮವಸ್ತ್ರಧಾರಿಗಳು ಭಕ್ಷಕರು ಮಾತ್ರವಲ್ಲ ಭಿಕಾರಿಗಳಾಗಿದ್ದಾರೆ. ಇದು ನೇರವಾಗಿ ಜನರ ಮೇಲೆ ಪರಿಣಾಮ ಬೀರುತ್ತಿದೆ ಎಂದರು.

ಬೇರೆ ಇಲಾಖೆಗಳಲ್ಲಿ ಗುತ್ತಿಗೆ, ಟೆಂಡರ್, ಪರ್ಸೆಂಟೇಜ್ ನಡೆಯುತ್ತದೆ. ಆದರೆ, ಪೊಲೀಸರು ಜನಸಾಮಾನ್ಯರಿಂದ ವಸೂಲಿ ಮಾಡಬೇಕಾಗುತ್ತದೆ. ಲೂಟಿ ಹೊಡೆಯಿರಿ ಎಂದು ಸರ್ಕಾರವೇ ಒತ್ತಡ ಹೇರುತ್ತಿದೆ. ಇದರಿಂದಾಗಿ ಪೊಲೀಸ್ ಇಲಾಖೆ ಸಂಪೂರ್ಣ ದುರ್ಬಲವಾಗುತ್ತಿದೆ. ಪೊಲೀಸರಿಗೇ ರಕ್ಷಣೆ ಕೊಡಬೇಕಾದ ಸ್ಥಿತಿ ನಿರ್ಮಾಣ ಆಗಿದೆ ಎಂದು ಅವರು ಹೇಳಿದರು.

ಪಿಎಸ್​ಐ ಪರಶುರಾಮ್ ಆತ್ಮಹತ್ಯೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಾಮಣಿಕತೆ ಇರುವುದರಿಂದಲೇ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದರು.

‘ಮುಖ್ಯಮಂತ್ರಿಗಳ ವರೆಗೆ ಹಣ ಕೊಡಬೇಕು’

ಬೆಂಗಳೂರಲ್ಲಿ ಪೊಲೀಸ್ ಠಾಣೆಗೆ ಪೋಸ್ಟಿಂಗ್ ಪಡೆಯಲು ಕೋಟಿಗಟ್ಟಲೆ ರೂಪಾಯಿ ಹಣ ಕೊಡಬೇಕು. ಜಿಲ್ಲೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಕೊಡಬೇಕಿದೆ. ಜನಪ್ರತಿನಿಧಿಗಳು, ಗೃಹ ಸಚಿವರು, ಮುಖ್ಯಮಂತ್ರಿಗೆ ಹಣ ಕೊಡಬೇಕು. ಪ್ರಬಲ ಮುಖ್ಯಮಂತ್ರಿ ಇದ್ದರೆ ಈ ರೀತಿ ಆಗುವುದಿಲ್ಲ. ದುರ್ಬಲ ಮುಖ್ಯಮಂತ್ರಿ ಇದ್ದಾಗ ಹೀಗೆಲ್ಲ ಆಗುತ್ತದೆ. ಶಾಸಕರಿಗೆಲ್ಲ ತೋಳಗಳಂತೆ ಹಣ ಕೀಳಲು ಬಿಟ್ಟಿದ್ದಾರೆ ಎಂದು ಭಾಸ್ಕರ್ ರಾವ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಅಮಿತ್ ಶಾಗೆ ಮುಟ್ಟಿದ ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವಿನ ಸುದ್ದಿ

ಯಾದಗಿರಿ ಪಿಎಸ್​ಐ ಪರಶುರಾಮ್ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣ ಕರ್ನಾಟಕದಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣ ರಾಜಕೀಯ ಆಯಾಮವನ್ನೂ ಪಡೆದುಕೊಂಡಿದೆ. ಲಂಚಕ್ಕಾಗಿ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಕಿರುಕುಳ ಕೊಟ್ಟಿದ್ದರಿಂದಲೇ ಪರಶುರಾಮ್ ಸಾವಿಗೀಡಾಗಿದ್ದಾರೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಒತ್ತಾಯಿಸಿದ್ದಾರೆ. ಸದ್ಯ ಸಿಐಡಿ ತನಿಖೆ ಪ್ರಗತಿಯಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us