ಚಿತ್ರದುರ್ಗ: ಬಬ್ಬೂರು ಗ್ರಾಮದಲ್ಲಿ ಮೂರೂ ನೀರು ಶುದ್ಧೀಕರಣ ಘಟಕಗಳು ಬಂದ್, ಕುಡಿಯುವ ನೀರಿಗೆ ಸಂಕಷ್ಟ

ಬಬ್ಬೂರು ಗ್ರಾಮದ ಬೋವಿ ಕಾಲೋನಿ, ಎಕೆ ಕಾಲೋನಿ ಮತ್ತು ರಂಗನಾಥಸ್ವಾಮಿ ದೇಗುಲ ಬಳಿಯ ಶುದ್ಧ ಕುಡಿಯುವ ನೀರಿನ ಘಟಕಗಳು ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ, ಜಿಲ್ಲಾಡಳಿತದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿತ್ರದುರ್ಗ: ಬಬ್ಬೂರು ಗ್ರಾಮದಲ್ಲಿ ಮೂರೂ ನೀರು ಶುದ್ಧೀಕರಣ ಘಟಕಗಳು ಬಂದ್, ಕುಡಿಯುವ ನೀರಿಗೆ ಸಂಕಷ್ಟ
ನೀರು ಶುದ್ಧೀಕರಣ ಘಟಕಮ ಮುಚ್ಚಿರುವುದು.
Edited By:

Updated on: Oct 23, 2023 | 7:44 PM

ಚಿತ್ರದುರ್ಗ, ಅಕ್ಟೋಬರ್ 23: ಕೋಟೆನಾಡು ಚಿತ್ರದುರ್ಗ(Chitradurga) ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಮೂರು ನೀರು ಶುದ್ಧೀಕರಣ ಘಟಕಗಳಿವೆ. ಆದ್ರೆ, ಮೂರೂ ಘಟಕಗಳೂ ಅನೇಕ ದಿನಗಳಿಂದ ತಾಂತ್ರಿಕ ದೋಷದಿಂದ ಸ್ಥಗಿತಗೊಂಡಿವೆ. ಹಬ್ಬದ ಸಂದರ್ಭದಲ್ಲೂ ನೀರಿನ ಘಟಕ ದುರಸ್ತಿಗೊಳಿಸದೇ ಇರುವುದರಿಂದ ಕುಡಿಯುವ ನೀರಿಗೆ (Drinking Water) ಸಮಸ್ಯೆಯಾಗಿದ್ದು, ಜನರಲ್ಲಿ ಆಕ್ರೋಶ ಮೂಡಿಸಿದೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಪ್ರತಿನಿಧಿಸುವ ಹಿರಿಯೂರು ಕ್ಷೇತ್ರದಲ್ಲೇ ನೀರಿನ ಘಟಕಗಳು ಸ್ಥಗಿತ ಆಗಿದ್ದು ಜನ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ.

ಇನ್ನು ಇದೇ ಅಕ್ಟೋಬರ್ 6ರಂದು ಇದೇ ಬಬ್ಬೂರು ಬಳಿಯ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಬರ ಆವರಿಸಿದ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜನರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗಳೇ ಹೊಣೆ ಆಗುತ್ತೀರಿ ಎಂದು ಎಚ್ಚರಿಕೆ ನೀಡಿದ್ದರು. ಆದ್ರೆ, ಸಿಎಂ ನಿಂತು ಭಾಷಣ ಮಾಡಿದ ಗ್ರಾಮದಲ್ಲೇ ಈಗ ನೀರಿನ ಸಮಸ್ಯೆ ಶುರುವಾಗಿದೆ.

ಬಬ್ಬೂರು ಗ್ರಾಮದ ಬೋವಿ ಕಾಲೋನಿ, ಎಕೆ ಕಾಲೋನಿ ಮತ್ತು ರಂಗನಾಥಸ್ವಾಮಿ ದೇಗುಲ ಬಳಿಯ ಶುದ್ಧ ಕುಡಿಯುವ ನೀರಿನ ಘಟಕಗಳು ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ, ಜಿಲ್ಲಾಡಳಿತದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ ಎಂಬುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಭಾರೀ ಗೋಲ್​​ಮಾಲ್

ಇನ್ನು ಶುದ್ಧ ಕುಡಿಯುವ ನೀರಿಗಾಗಿ ಗ್ರಾಮದ ಜನರು ಹಿರಿಯೂರು ಪಟ್ಟಣಕ್ಕೆ ತೆರಳುಂತಾಗಿದೆ. ಹೀಗಾಗಿ, ಬೈಕ್ ಮತ್ತು ವಾಹನಗಳು ಇಲ್ಲದವರು ನೀರಿಗಾಗಿ ಪರದಾಡುವಂತಾಗಿದೆ. ಅನೇಕ ದಿನಗಳಿಂದ ಗ್ರಾಮದ ಜನರು ನೀರಿಗಾಗಿ ಅಲೆದಾಡುವ ಪರಿಸ್ಥಿತಿಯಿದೆ. ಜಿಲ್ಲಾ ಪಂಚಾಯತಿ ಸಿಇಓ ಸೋಮಶೇಖರ್ ಅವರ ಗಮನಕ್ಕೆ ತಂದಾಗ ಗ್ರಾಮ ಪಂಚಾಯತಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದ್ರೂ, ಸಹ ಯಾವುದೇ ಪ್ರಯೋಜನ ಆಗಿಲ್ಲ ಎಂದು ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮ ಸೇರಿದಂತೆ ಜಿಲ್ಲೆಯ ವಿವಿದೆಡೆ ನೀರು ಶುದ್ಧೀಕರಣ ಘಟಕಗಳು ಸ್ಥಗಿತಗೊಂಡಿವೆ. ಬೇಸಿಗೆ ಆರಂಭಕ್ಕೂ ಮುನ್ನವೇ ಜನ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇನ್ನು ಬಿರು ಬೇಸಿಗೆಗಾಲದಲ್ಲಿ ಇನ್ಯಾವ ಸ್ಥಿತಿ ಕಾದಿದೆಯೋ ಎಂದು ಜನ ಆತಂಕಗೊಳ್ಳುವಂತಾಗಿದೆ. ಹೀಗಾಗಿ, ಜಿಲ್ಲಾಡಳಿತ ಮತ್ತು ಜಿಲ್ಲಾಪಂಚಾಯತಿ ಅಧಿಕಾರಿಗಳು ಇನ್ನಾದ್ರೂ ಎಚ್ಚೆತ್ತುಕೊಂಡು ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಕ್ರಮ ಕೈಗೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಸವರಾಜ ಮುದನೂರ್, ಚಿತ್ರದುರ್ಗ

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us