ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 28 ವರ್ಷದ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ ನಂತರ ಮೃತಪಟ್ಟಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ನವಜಾತ ಶಿಶುಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದ್ದು, ತಪ್ಪಿತಸ್ಥರ ವಿರುದ್ಧ ತನಿಖೆ ಮತ್ತು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ.

ಮಗುವಿನ ಮುಖ ನೋಡುವ ಮೊದಲೇ ಕಣ್ಮುಚ್ಚಿದ ಮಹಿಳೆ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು?
ಮೃತ ಶಿಲ್ಪಾ
Image Credit source: Tv9 Kannada
Edited By:

Updated on: Mar 10, 2026 | 5:26 PM

ಚಿತ್ರದುರ್ಗ, ಮಾರ್ಚ್​ 10: ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆಯೋರ್ವರು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಹೆರಿಗೆ ವೇಳೆ ವೈದ್ಯರು ಮತ್ತು ಸಿಬ್ಬಂದಿ ನಿರ್ಲಕ್ಷದಿಂದಾಗಿಯೇ  ಸಾವಾಗಿರೋದಾಗಿ ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಶಿಲ್ಪಾ(28) ಮೃತ ದುರ್ದೈವಿಯಾಗಿದ್ದು, ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುಗೆ ದಾಖಲಿಸುವುದಾಗಿ ಹೇಳಿ ಶಿಲ್ಪಾರ ಮೃತದೇಹವನ್ನು ಶವಾಗಾರಕ್ಕೆ ಶಿಫ್ಟ್​​ ಮಾಡಲಾಗಿದೆ. ಮಗುವಿನ ಆರೋಗ್ಯದ ಮಾಹಿತಿ ಕೂಡ ತಮಗೆ ನೀಡಿಲ್ಲ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಚಳ್ಳಕೆರೆ ತಾಲೂಕಿನ ಪರಶುರಾಂಪುರದ ಶಿಲ್ಪಾರನ್ನು ನಿನ್ನೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ತಡರಾತ್ರಿ ಹೆಣ್ಣು ಮಗುವಿಗೆ ಅವರು ಜನ್ಮ ನೀಡಿದ್ದರು. ಹೆರಿಗೆ ಬಳಿಕ ವೈದ್ಯರು ನಿರ್ಲಕ್ಷ ತೋರಿದ ಪರಿಣಾಮ ಶಿಲ್ಪಾಳ ಸಾವು ಸಂಭವಿಸಿದೆ. ಏಕಾಏಕಿ ಐಸಿಯುಗೆ ಶಿಫ್ಟ್ ಮಾಡಬೇಕೆಂದು ಹೇಳಿ ನೇರವಾಗಿ ಶವಾಗಾರಕ್ಕೆ ಶಿಫ್ಟ್ ಮಾಡಿದ್ದಾರೆ ಎಂಬುದು ಮೃತಳ ತಾಯಿ ದುರ್ಗಮ್ಮ ಅವರ ಆರೋಪ. ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತರ ಸಂಬಂಧಿಕರು ಆಸ್ಪತ್ರೆ ಬಳಿ ಜಮಾಯಿಸಿದ್ದು, ಜಿಲ್ಲಾಸ್ಪತ್ರೆಯ ಮುಖ್ಯಸ್ಥರಾದ ಡಾ.ರವೀಂದ್ರ ಸೇರಿ ಸಿಬ್ಬಂದಿಯನ್ನು ತರಾಟೆಗೆ ಪಡೆದಿದ್ದಾರೆ. ತಪ್ಪಿತಸ್ಥ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದು, ದಲಿತಪರ ಸಂಘಟನೆಗಳ ಮುಖಂಡರು ಮೃತಳ ಸಂಬಂಧಿಕರಿಗೆ ಸಾಥ್ ನೀಡಿದ್ದಾರೆ.

ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಚಾಕು ಇರಿತ; ಸಿಡಿದೆದ್ದ ಹಿಂದೂ ಸಂಘಟನೆಗಳು, ಚಿತ್ರದುರ್ಗ ರಣಾಂಗಣ

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಮುಖ್ಯಸ್ಥ ಡಾ.ರವೀಂದ್ರ, ಶಿಲ್ಪಾ ಅವರನ್ನು ತಡವಾಗಿ ಹೆರಿಗೆಗೆ ಕರೆತಂದಿದ್ದಾರೆ. ಹೆರಿಗೆ ವೇಳೆ‌ ಉಸಿರಾಟ ತೊಂದರೆಯಿಂದ ಅವರು ಮೃತಪಟ್ಟಿದ್ದು, ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಪರಿಶೀಲಿಬೇಕಿದೆ. ಶಿಲ್ಪಾ ಅವರಿಗೆ ಹೆಣ್ಣು ಮಗು ಜನಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಹೀಗಿದ್ದರೂ ವೈದ್ಯರ ವಿರುದ್ಧ ಶಿಲ್ಪಾ ಸಂಬಂಧಿಕರ ಆರೋಪ ಹಿನ್ನೆಲೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಕೋಟೆನಾಡು ಚಿತ್ರದುರ್ಗದ ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಒಂದಲ್ಲ ಒಂದು ದೂರು ಕೇಳಿ ಬರುತ್ತಲೇ ಇರುವ ನಡುವೆಯೇ ನಡೆದ ಬಾಣಂತಿಯ ಸಾವು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಿ ಜನರ ಪ್ರಾಣ ರಕ್ಷಣೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:25 pm, Tue, 10 March 26

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us