AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ

Chitradurga News: ಆಗಷ್ಟ್ 1ರಿಂದ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ ಐವರು ಸಾವಿಗೀಡಾಗಿದ್ದರು. ಆದರೆ ಇಂದು ಕರಿಬಸಪ್ಪ(35) ಎನ್ನುವವರು ಮೃತ ಪಟ್ಟಿದ್ದಾರೆ. ಹಾಗಾಗಿ ಸದ್ಯ ಮೃತರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ.

ಕಲುಷಿತ ನೀರು ಸೇವಿಸಿ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ
ಮೃತ ಕರಿಬಸಪ್ಪ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Aug 07, 2023 | 4:20 PM

Share

ಚಿತ್ರದುರ್ಗ ಆಗಸ್ಟ್​ 07: ಕೋಟೆನಾಡಿನ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು (contaminated water) ಸೇವಿಸಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆ ಆಗಿದೆ. ಚಿತ್ರದುರ್ಗ ತಾಲೂಕಿನ ಚಿಕ್ಕಪುರದ ಕರಿಬಸಪ್ಪ(35) ಎನ್ನುವವರು ಇಂದು ಮೃತ ಪಟ್ಟಿದ್ದಾರೆ. ಜು.30, 31ರಂದು ಕವಾಡಿಗರಹಟ್ಟಿ ಸಂಬಂಧಿಕರ ಮನೆಯಲ್ಲಿದ್ದು, ಆಗಸ್ಟ್ 1ರಿಂದ ವಾಂತಿ, ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಚಿತ್ರದುರ್ಗ ಜಿಲ್ಲಾಸ್ಪತ್ರೆ, ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ.

ಸೂಕ್ತ ಪರಿಹಾರ ಕ್ರಮಕ್ಕೆ ಮನವಿ

ಕವಾಡಿಗರಹಟ್ಟಿಯಲ್ಲಿ ನೀರು, ಆಹಾರ ಸೇವೆನೆಯಿಂದ ಸಾವನ್ನಪ್ಪಿದ್ದಾರೆ ಎಂದು ಮೃತ ಕರಿಬಸಪ್ಪ ಸಹೋದರ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಡಿಹೆಚ್ಓ ಡಾ.ರಂಗನಾಥ್​ಗೆ ಈ ಬಗ್ಗೆ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಸೂಕ್ತ ಪರಿಹಾರ ಕ್ರಮಕ್ಕೆ ಮೃತನ ಸಂಬಂಧಿಕರಿಂದ ಮನವಿ ಮಾಡಿದ್ದು, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಡಿಹೆಚ್ಓ ಡಾ.ರಂಗನಾಥ್​ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಸಾವು; ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ – ಗುಂಡೂರಾವ್

ಆಗಸ್ಟ್​ 1 ರಂದು ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಮರಣ‌ ಮೃದಂಗವೇ ಬಾರಿಸಿತ್ತು. ಕಲುಷಿತ ನೀರು ಸೇವಿಸಿದ ಪರಿಣಾಮ ಈವರೆಗೆ 6 ಜನರು ಮೃತಪಟ್ಪಿದ್ದಾರೆ. ಓರ್ವ ಗರ್ಭಿಣಿಯ ಗರ್ಭಪಾತ ಸಂಭವಿಸಿದೆ. 206ಜನ ವಾಂತಿ ಬೇಧಿಯಿಂದ ಅಸ್ವಸ್ಥರಾಗಿ‌ ಚಿಕಿತ್ಸೆ ಪಡೆದಿದ್ದು 59ಜನ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಕರಣ ಮರು ತನಿಖೆಯ ಭರವಸೆಯ ನೀಡಿದ ಪೌರಾಡಳಿತ ಸಚಿವ ರಹೀಂಖಾನ್

ನಿನ್ನೆ ಪೌರಾಡಳಿತ ಸಚಿವ ರಹೀಂಖಾನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಶಾಸಕ ಕೆ.ಸಿ.ವಿರೇಂದ್ರ, ಡಿಸಿ ದಿವ್ಯಪ್ರಭು, ಪೌರಾಯುಕ್ತ ಶ್ರೀನಿವಾಸ್ ಸಾಥ್ ನೀಡಿದ್ದರು. ಈ ವೇಳೆ ಪ್ರತಿಕ್ರಿಯಿಸಿದ ಸಚಿವ ರಹೀಂಖಾನ್, ಪ್ರಕರಣ ಮರು ತನಿಖೆಯ ಭರವಸೆ ನೀಡಿದರು. ಅಂತೆಯೇ ಅಧಿಕಾರಿಗಳ ನಿರ್ಲಕ್ಷ ಆಗಿದೆ ಎಂದು ಒಪ್ಪಿಕೊಂಡಿದ್ದು, ಪೂರ್ಣ ತನಿಖೆಯ ಬಳಿಕ ಪೌರಯುಕ್ತ ಸೇರಿ ಇತರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ

ನಟ ಚೇತನ್ ಕವಾಡಿಗರಹಟ್ಟಿಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದರು. ಬಳಿಕ ಪ್ರತಿಕ್ರಿಯಿಸಿ ಸರ್ಕಾರದ ವೈಫಲ್ಯವೇ ಕಾರಣ. ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಕಿಡಿ ಕಾರಿದ್ದರು.

ಬಿಜೆಪಿ ಶಾಸಕ ಸಿ.ಟಿ.ರವಿ ಬಸವೇಶ್ವರ ಆಸ್ಪತ್ರೆಗೆ ಭೇಟಿ ನೀಡಿದ್ದರು. ಬಳಿಕ ಪ್ರತಿಕ್ರಿಯಿಸಿ ಈ ರೀತಿಯ ಅನೇಕ ಪ್ರಕರಣದ ಬಳಿಕವೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಸಾವಿನ ಬಳಿಕ ಪರಿಹಾರ ಕೊಡುವುದು ಒಂದು ಭಾಗ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮೃತರ ಕುಟುಂಬಕ್ಕೆ ತಲಾ 25ಲಕ್ಷ ಪರಿಹಾರ ಮತ್ತು ಸರ್ಕಾರಿ ನೌಕರಿ ಕೊಡಬೇಕೆಂದು ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:18 pm, Mon, 7 August 23

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More