Chitradurga Murugha Mutt Swamiji: ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಸುಪ್ರೀಂಕೋರ್ಟ್​ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ​ ಹಿನ್ನೆಲೆ ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್​ಗೆ ಎದುರು ಮುರುಘಾಶ್ರೀ ಶರಣಾಗಿದ್ದಾರೆ. ವ್ಯಾನ್​​ನಲ್ಲಿ ಜೈಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದು, ಮೇ 27ಕ್ಕೆ ವಿಚಾರಣೆ ನಿಗದಿಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಚಿತ್ರದುರ್ಗ ಕೋರ್ಟ್ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು. ಡಿವೈಎಸ್ಪಿ ದಿನಕರ್​ ಕೂಡ ಕೋರ್ಟ್​ಗೆ ಆಗಮಿಸಿದ್ದಾರೆ.

Chitradurga Murugha Mutt Swamiji: ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
ಮುರುಘಾಶ್ರೀ
Edited By:

Updated on: Apr 29, 2024 | 4:24 PM

ಚಿತ್ರದುರ್ಗ, ಏಪ್ರಿಲ್ 29: ಫೋಕ್ಸೋ (POCSO) ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ (Murugha Mutt Swamiji) ಅವರ ಜಾಮೀನನ್ನು ಇತ್ತೀಚೆಗೆ ಸುಪ್ರೀಂಕೋರ್ಟ್ ರದ್ದುಗೊಳಿಸುವ ಮೂಲಕ ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆ ಇಂದು ಚಿತ್ರದುರ್ಗದ 1ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ಗೆ ಮುರುಘಾ ಶ್ರೀ ಶರಣಾಗಿದ್ದಾರೆ. ವ್ಯಾನ್​​ನಲ್ಲಿ ಜೈಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಮೇ 27ಕ್ಕೆ ವಿಚಾರಣೆ ನಿಗದಿಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇತ್ತೀಚೆಗೆ ಜಾಮೀನು ರದ್ದುಗೊಳಿಸಿದ್ದ ಸುಪ್ರೀಂಕೋರ್ಟ್ ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ ಸೂಚನೆ ಕೂಡ ನೀಡಿತ್ತು. ಜೊತೆಗೆ ವಿಶೇಷ ಕೋರ್ಟ್​ನಲ್ಲಿ ಸಂತ್ರಸ್ತ ಮಕ್ಕಳ ವಿಚಾರಣೆಗೆ ‘ಸುಪ್ರೀಂ’ ಆದೇಶಿಸಿತ್ತು. ಇನ್ನು 4 ತಿಂಗಳಲ್ಲಿ ತನಿಖೆ ಪೂರ್ಣಗೊಳ್ಳದಿದ್ದರೆ ಬಂಧನದ ಅವಧಿಯನ್ನು ಇನ್ನೆರಡು ತಿಂಗಳ ಕಾಲ ವಿಸ್ತರಣೆ ಮಾಡಬಹುದಾಗಿದೆ.

ಇದನ್ನೂ ಓದಿ: ಮುರುಘಾ ಶ್ರೀ ಮತ್ತೆ ಜೈಲಿಗೆ: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

2022ರ ಅಕ್ಟೋಬರ್ 13ರಂದು ಮುರುಘಾ ಸ್ವಾಮೀಜಿ ವಿರುದ್ಧ 2ನೇ ಪೋಕ್ಸೋ ಕೇಸ್ ದಾಖಲಾಗಿತ್ತು. ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆ ಎರಡನೇ ಪೋಕ್ಸೋ ಕೇಸ್​ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿತ್ತು. ಎರಡೂ ಕೇಸ್​ನಲ್ಲಿ ಸ್ವಾಮೀಜಿಗೆ ಜಾಮೀನು ಚಿತ್ರದುರ್ಗ ಕೋರ್ಟ್ ನಿರಾಕರಿಸಿತ್ತು. ಹೀಗಾಗಿ ಜಾಮೀನಿಗಾಗಿ ಮುರುಘಾ ಸ್ವಾಮೀಜಿ ಹೈಕೋರ್ಟ್​ ಮೊರೆ ಹೋಗಿದ್ದರು.

ಇದನ್ನೂ ಓದಿ: ಚಿತ್ರದುರ್ಗ: ಮುರುಘಾ ಮಠದ ಹಣ, ಆಸ್ತಿ ದುರ್ಬಳಕೆ ಆರೋಪ: ಎಸ್​ಕೆ ಬಸವರಾಜನ್ ವಿರುದ್ಧದ‌ ಕೇಸ್​ನಲ್ಲಿ ಮುರುಘಾ ಶ್ರೀ ಸಾಕ್ಷ್ಯ

ಹೈಕೋರ್ಟ್​ನಿಂದ 1ನೇ ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗೆ ಬೇಲ್​ ಸಿಕ್ಕಿತ್ತು. ನವೆಂಬರ್​ 16 ರಂದು ಹೈಕೋರ್ಟ್​ ಮುರುಘಾಶ್ರೀಗೆ 7 ಷರತ್ತುಗಳು ಹಾಕಿ ಜಾಮೀನು ನೀಡಿತ್ತು. ಬಂಧನವಾಗಿ ಬರೋಬ್ಬರಿ 441 ದಿನಗಳ ಬಳಿಕ ಮುರುಘಾ ಸ್ವಾಮೀಜಿ ರಿಲೀಸ್​ ಆಗಿದ್ದರು. ಬಿಡುಗಡೆ ಬಳಿಕ ದಾವಣಗೆರೆಯ ವಿರಕ್ತ ಮಠದಲ್ಲಿ ಸ್ವಾಮೀಜಿ ವಾಸ್ತವ್ಯ ಹೂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:11 pm, Mon, 29 April 24

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us