ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಕಲುಷಿತ ನೀರು ಸೇವಿಸಿ ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ.

ಚಿತ್ರದುರ್ಗ ಕಲುಷಿತ ನೀರು ಸೇವನೆ ಪ್ರಕರಣ: ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆ
ಕಲುಷಿತ ನೀರು
Edited By: ವಿವೇಕ ಬಿರಾದಾರ

Updated on: Aug 05, 2023 | 9:38 AM

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ (Contaminated water) ಐವರು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥಗೊಂಡವರ ಸಂಖ್ಯೆ 185ಕ್ಕೆ ಏರಿಕೆಯಾಗಿದೆ. ಓರ್ವ ಗರ್ಭಿಣಿಯ ಗರ್ಭಪಾತವಾಗಿದೆ. 25 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 155 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗ ಹೊರವಲಯದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ಜುಲೈ 31ರಂದು ಕಲುಷಿತ ನೀರು ಸೇವಿಸಿ ಮೂರು ಜನ ಸಾವನ್ನಪ್ಪಿದ್ದರು. ಜೊತೆಗೆ ಸುಮಾರು ನೂರು ಜನ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಮೃತರ ಸಂಖ್ಯೆ ನಿನ್ನೆ (ಜು.04) ಐದಕ್ಕೆ ಏರಿತ್ತು.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆ: ಪ್ರಯೋಗಾಲಯ ವರದಿ ಬಹಿರಂಗ, ಕಾಲರಾ ಮಾದರಿ ಪತ್ತೆ

ಆಗಸ್ಟ 3 ರಂದು ಪ್ರಯೋಗಾಲಯ ವರದಿ ಬಂದಿದ್ದು, ಕಾಲರಾ ಮಾದರಿಯ ಸೂಕ್ಷ್ಮಾಣು ಅಂಶ ಪತ್ತೆಯಾಗಿತ್ತು. ವಾಂತಿ, ಭೇದಿ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆ ಮಾಡಿದ್ದು, ಈ ನೀರು ಕುಡಿಯಲು ಯೋಗ್ಯವಲ್ಲವೆಂದು ಚಿತ್ರದುರ್ಗ ಜಿಲ್ಲಾ ಸರ್ವೇಕ್ಷಣಾ ಘಟಕ ವರದಿಯಲ್ಲಿ ಉಲ್ಲೇಖಿಸಿತ್ತು. ಇದೀಗ ಪ್ರಕರಣ ಸಂಬಂಧ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಾಕಿಯಿದೆ.

5 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ

ಇನ್ನು 5 ಲಕ್ಷ ರೂ. ಪರಿಹಾರ ಚೆಕ್‌ ನೀಡುವಂತೆ ಜಿಲ್ಲಾಧಿಕಾರಿಗೆ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಸೂಚನೆ ನೀಡಿದ್ದರು. ಮೃತರ ಕುಟುಂಬಕ್ಕೆ ತಲಾ 50 ಸಾವಿರ ರೂ. ವೈಯಕ್ತಿಕ ಸಹಾಯ ಧನ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us