AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ

ಏಳು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದ ನವ ವಿವಾಹಿತೆ ಏಕಾಏಕಿ ಅಸಹಜವಾಗಿ ಸಾವನ್ನಪ್ಪಿರುವಂತಹ ಘಟನೆ ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ನಡೆದಿದೆ. ಸದ್ಯ ಮೃತಳ ಸಂಬಂಧಿಕರು ಆಕೆಯ ಗಂಡ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಆಕ್ರೋಶದ ಕಟ್ಟೆ ಒಡೆದಿದೆ.

ಮದ್ವೆಯಾದ ಏಳೇ ತಿಂಗಳಿಗೆ ನವವಧು ಇದ್ದಕ್ಕಿದ್ದಂತೆ ಸಾವು: ಸಾವಿನ ಸುತ್ತ ಅನುಮಾನದ ಹುತ್ತ
ತನುಜಾ, ವೆಂಕಟೇಶ್Image Credit source: tv9 kannada
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on: Apr 24, 2026 | 7:47 PM

Share

ಚಿತ್ರದುರ್ಗ, ಏಪ್ರಿಲ್​ 24: ಅತ್ತಿಗೆಯ ತಂಗಿ ಹಾಗೂ ಭಾವನ ತಮ್ಮನ ನಡುವೆ ಪ್ರೇಮಾಂಕುರವಾಗಿತ್ತು. ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದಷ್ಟೇ ಮದುವೆ ಕೂಡ ಆಗಿದ್ದರು. ಆದರೆ ಪ್ರೀತಿಸಿ ಮದುವೆ ಆಗಿದ್ದ ನವವಿವಾಹಿತೆ ಅಸಹಜವಾಗಿ ಸಾವಿಗೀಡಾಗಿದ್ದಾಳೆ (death). ಹೀಗಾಗಿ ಇತ್ತ ಪತಿ ಮತ್ತು ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಕೋಟೆನಾಡು ಚಿತ್ರದುರ್ಗ (Chitradurga) ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ಘಟನೆ ನಡೆದಿದೆ.

ಚಿತ್ರದುರ್ಗದ ಕಾಮನಬಾವಿ ಬಡಾವಣೆಯ ಮೀನಾಕ್ಷಿ ಮತ್ತು ಹೊನ್ನೂರಪ್ಪ ದಂಪತಿಯ ಮೊದಲ ಪುತ್ರಿ ಅನು ಹಾಯ್ಕಲ್ ಗ್ರಾಮದ ಮೈಲಾರಿಗೆ ಮದುವೆ ಮಾಡಿಕೊಟ್ಟಿದ್ದರು. ಮೈಲಾರಿ ಸಹೋದರ ವೆಂಕಟೇಶ್, ಅತ್ತಿಗೆಯ ಸಹೋದರಿ ತನುಜಾಳ ಮೇಲೆ ಕಣ್ಣುಹಾಕಿದ್ದ. ಕಾಡಿ-ಬೇಡಿ ಪ್ರೀತಿಸಿ ಸೈ ಎನ್ನಿಸಿಕೊಂಡಿದ್ದ. ತನುಜಾ ಸಹ ಭಾವನ ತಮ್ಮ ವೆಂಕಟೇಶನನ್ನು ಪ್ರೀತಿಸಿದ್ದು, ಪೋಷಕರ ವಿರೋಧದ ನಡುವೆ ಏಳು ತಿಂಗಳ ಹಿಂದೆ ಲವ್​ ಮ್ಯಾರೇಜ್​ ಆಗಿದ್ದರು.

ನಡೆದಿದ್ದೇನು?

ಏಪ್ರಿಲ್ 21 ರಂದು ತನುಜಾ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾಳೆ ಎಂದು ವೆಂಕಟೇಶ್ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದ. ಚಿತ್ರದುರ್ಗ, ದಾವಣಗೆರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೊನೆಗೂ ಚಿಕಿತ್ಸೆ ಫಲಿಸದೆ ತನುಜಾ ಮೃತಪಟ್ಟಿದ್ದಾಳೆ. ಆದರೆ ಮರಣೋತ್ತರ ಪರೀಕ್ಷೆಯ ವರದಿ ನೋಡಿದರೆ ಪೆಟ್ಟು ಬಿದ್ದು ಸಾವು ಎಂಬುದು ತಿಳಿಯುತ್ತಿದೆ. ಹೀಗಾಗಿ ಪತಿ ವೆಂಕಟೇಶ್ ಮತ್ತು ಆತನ ಕುಟುಂಬಸ್ಥರೇ ಹೊಡೆದು ಕೊಂದಿದ್ದಾರೆ. ಬೈಕಿನಿಂದ ಬಿದ್ದಿದ್ದಾಳೆಂದು ಕಥೆ ಕಟ್ಟುತ್ತಿದ್ದಾರೆ ಎಂದು ಮೃತಳ ಸಂಬಂಧಿಕರು ಗಂಭೀರ ಆರೋಪ ಮಾಡಿದ್ದಾರೆ.

ಅಕ್ಕಪಕ್ಕದ ಮನೆಯವರ ಮಧ್ಯೆ ಗಲಾಟೆ: ಹಲ್ಲೆ

ತುರವನೂರು ಪೊಲೀಸ್ ಠಾಣೆಗೆ ಈ ಬಗ್ಗೆ ಪೋಷಕರು ದೂರು ಸಲ್ಲಿಸಿದ್ದಾರೆ. ತುರುವನೂರು ಠಾಣೆಯ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ವೇಳೆ ಅಕ್ಕಪಕ್ಕದ ಮನೆಯವರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿತ್ತು. ಆಗ ಕೆಲ ಮಹಿಳೆಯರು ತನುಜಾಳ ಮೇಲೆ ಹಲ್ಲೆ ನಡೆಸಿದ್ದರು. ಬಳಿಕ ವೆಂಕಟೇಶ್ ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದನೆಂಬ ಮಾತು ಕೇಳಿಬಂದಿದೆ. ಹಾಗಾದರೆ ತನುಜಾ ಮೇಲೆ ಹಲ್ಲೆ ಮಾಡಿದವರು ಯಾರು, ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಎಂಬುದು ಸ್ಪಷ್ಟವಾಗಬೇಕಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು, ಅಲ್ಲಿಯವರೆಗೆ ಶವ ಸಂಸ್ಕಾರ ಮಾಡಲು ಬಿಡುವುದಿಲ್ಲ ಎಂದು ಮೃತಳ ಅತ್ತೆ ಗಂಗಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಗ್ರಾಮದಲ್ಲಿ ತನುಜಾ ಅಸಹಜ ಸಾವಿನ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪತಿ ವೆಂಕಟೇಶ್ ಮತ್ತು ಕುಟುಂಬಸ್ಥರ ವಿರುದ್ಧ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರ ತನಿಖೆಯಿಂದ ಅಸಲಿಯತ್ತು ಬಯಲಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More