ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ

ಜಾತಿ ಗಣತಿ ವಿಚಾರವಾಗಿ ಮೇಲ್ವರ್ಗ ಹಾಗೂ ಕೆಳವರ್ಗ ಸ್ವಾಮೀಜಿಗಳ ನಡುವೆ ಮುಸುಕಿನ ಗುದ್ದಾಟಗಳು ನಡೆದಿವೆ. ಇದರ ಮಧ್ಯೆ ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ: ಈಶ್ವರಾನಂದಪುರಿ ಸ್ವಾಮೀಜಿ ಬೇಸರ
ಈಶ್ವರಾನಂದಪುರಿ ಸ್ವಾಮೀಜಿ
Edited By:

Updated on: Feb 02, 2024 | 10:55 PM

ಚಿತ್ರದುರ್ಗ, (ಫೆಬ್ರವರಿ 02): ಜಾತಿ ಕಾರಣಕ್ಕೆ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ ಎಂದು ಕನಕ ಪೀಠದ ಈಶ್ವರಾನಂದಪುರಿ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೇಹಳ್ಳಿಯಲ್ಲಿ ನಡೆದ ಪರಿವರ್ತನೆ ಹಾದಿಯಲ್ಲಿ ಮಠಗಳು ಗೋಷ್ಠಿಯಲ್ಲಿ ಮಾತನಾಡಿದ ಈಶ್ವರಾನಂದಪುರಿ ಸ್ವಾಮೀಜಿ, ಬಾಗೂರು ಗ್ರಾಮದ ಚನ್ನಕೇಶವ ದೇವಸ್ಥಾನದ ಗರ್ಭಗುಡಿಗೆ ಬಿಡಲಿಲ್ಲ. ನಾವು ದೇವಸ್ಥಾನಕ್ಕೆ ಹೋಗಿದ್ದೆವೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕುರುಬ ಸಮುದಾಯದ ಸ್ವಾಮೀಜಿ ಒಳಗೆ ಬಂದರೆಂಬ ಕಾರಣಕ್ಕೆ ಸ್ವಚ್ಛಗೊಳಿಸಿದ್ದಾರೆ. ನಾವು ಹೋಗಿದ್ದಕ್ಕಾಗಿ ದೇಗುಲ ಸ್ವಚ್ಛವಾಯಿತೆಂದು ಟಾಂಗ್ ಕೊಟ್ಟ ಸ್ವಾಮೀಜಿ, ಇನ್ಮುಂದೆ ಎಂದಿಗೂ ಚನ್ನಕೇಶವ ದೇವಸ್ಥಾನಕ್ಕೆ ನಾವು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ವೈಕುಂಠ ಏಕಾದಶಿಗೆ ದೇಗುಲಕ್ಕೆ ಹೋಗಿದ್ದಾಗ ನರಕ ತೋರಿಸಿಬಿಟ್ಟರು. ಪೂಜಾರಿ ಹೆಣ್ಣುಮಕ್ಕಳಿಗೆಲ್ಲಾ ಗರ್ಭಗುಡಿ ಪ್ರವೇಶಿಸಲು ಬಿಟ್ಟಿದ್ದರು. ಮಠಾಧೀಶರಾದ ನಮಗೇ ಚನ್ನಕೇಶವ ದೇಗುಲದ ಗರ್ಭಗುಡಿಗೆ ಬಿಡಲಿಲ್ಲ. ಮುಜರಾಯಿ ಇಲಾಖೆ ದೇಗುಲ ಎಂದು ಗೊತ್ತಿದ್ದರೆ ಪ್ರತಿಭಟಿಸುತ್ತಿದ್ದೆವು. ಉಡುಪಿಯಲ್ಲಿ ಕನಕದಾಸರು ಪ್ರತಿಭಟಿಸಿದಂತೆ ಪ್ರತಿಭಟನೆ ಮಾಡ್ತಿದ್ದೆವು. ಆದ್ರೆ, ಆಗ ಮುಜರಾಯಿ ಇಲಾಖೆ ದೇಗುಲ ಎಂಬುದು ನಮಗೆ ತಿಳಿದಿರಲಿಲ್ಲ ಎಂದು ಹೇಳಿದರು.

ಇನ್ನು ಗೋಷ್ಠಿಯಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಡಾ.ಪಂಡಿತಾರಾಧ್ಯಶ್ರೀ, ಶಿವಶರಣ ಮಾದಾರ ಚನ್ನಯ್ಯ ಮಠದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ ಉಪಸ್ಥಿತರಿದ್ದರು.

Published On - 10:50 pm, Fri, 2 February 24

Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More
Follow Us