ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ: ಮಸೂದೆ ಪಾಸ್

ಧೂಮಪಾನ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್‌ ಕೊಟ್ಟಿದೆ. ಇನ್ನು ಮುಂದೆ ಕಂಡ ಕಂಡಲ್ಲಿ ಸಿಗರೇಟ್‌ ಸೇದುವಂತಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಹೊಗೆ ಬಿಟ್ಟರೆ, ಅಂಥವರ ಜೇಬು ಸುಡುವುದು ಗ್ಯಾರಂಟಿ. ಯಾಕಂಂದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್​ ಸೇದುವವವರ ಹಾಗೂ ಶಾಲೆಗಳ 100 ವ್ಯಾಪ್ತಿಯಲ್ಲಿ ಸಿಗರೇಟ್​ ಮಾರಾಟಗಾರರ ವಿರುದ್ಧ ಹಾಕಲಾಗುತ್ತಿದ್ದ ದಂಡದ ಮೊತ್ತ ಹೆಚ್ಚಳವಾಗಿದೆ.

ಶಾಲೆಗಳಿಂದ 100 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ನಿಷೇಧ, ದಂಡ ಹೆಚ್ಚಳ:  ಮಸೂದೆ ಪಾಸ್
ಪ್ರಾತಿನಿಧಿಕ ಚಿತ್ರ
Edited By:

Updated on: Feb 21, 2024 | 5:31 PM

ಬೆಂಗಳೂರು, ಫೆಬ್ರವರಿ 21:  ಬೆಂಗಳೂರು, (ಫೆಬ್ರವರಿ 21): ಸಿಗರೇಟ್​​ಗಳ (cigarettes )ಮತ್ತು ಇತರೆ ತಂಬಾಕು (Tobacco) ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ವಿಧೇಯಕ ಇಂದು (ಫೆ.21) ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಈ ಹಿನ್ನೆಲೆಯಲ್ಲಿ ಶಾಲೆಗಳಿಂದ (Schools) ನೂರು ಮೀಟರ್ ವ್ಯಾಪ್ತಿಯಲ್ಲಿ ಸಿಗರೇಟ್ ಮಾರಾಟ ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದವರ ವಿರುದ್ಧ ದಂಡದ ಪ್ರಮಾಣ 100 ರೂ. ರಿಂದ 1000 ರೂ. ಗೆ ಏರಿಕೆ ಮಾಡಲಾಗಿದೆ.

ಇನ್ನು ಸಿಗರೇಟು ಮಾರಾಟದ ವಯೋಮಿತಿ 18 ವರ್ಷದಿಂದ 21 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಯಾವುದೇ ಬಾರ್ ರೆಸ್ಟೋರೆಂಟ್ ಹಾಗೂ ಇತರೆ ಕಡೆಗಳಲ್ಲಿ ಹುಕ್ಕಾ ಬಾರ್​ ನಿಷೇಧಿಸಲಾಗಿದೆ. ಹುಕ್ಕಾ ಬಾರ್ ಅನಧಿಕೃತವಾಗಿ‌ ನಡೆಸಿದರೆ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಹಾಗೂ 3 ವರ್ಷಕ್ಕೆ ವಿಸ್ತರಣೆ ಮಾಡುವ ಜೈಲು ಶಿಕ್ಷೆ ಮತ್ತು 50 ಸಾವಿರದಿಂದ 1 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: ಘಾಟಿ ಸುಬ್ರಹ್ಮಣ್ಯ, ಶ್ರೀಚಾಮುಂಡೇಶ್ವರಿ, ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ಅಂಗೀಕಾರ

ವಿಧೇಯಕ ಮಂಡಿಸಿದ ದಿನೇಶ್ ಗುಂಡೂರಾವ್

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 2024ರ ಸಿಗರೇಟ್ ಸೇವನೆ ಮತ್ತು ಜಾಹೀರಾತು ನಿಷೇಧ, ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ ಮತ್ತು ಸರಬರಾಜು ತಿದ್ದುಪಡಿ ವಿಧೇಯಕವನ್ನು ಮಂಡನೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್, ಹುಕ್ಕಾಬಾರ್‌ಗಳನ್ನು ನಿಷೇಧ ಮಾಡಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್ ಸೇದಬಾರದು ಅಂತಿದೆ. ಆದರೆ, ಅನೇಕ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಹುಕ್ಕಾ ಬಾರ್‌ಗಳನ್ನು ಆರಂಭಿಸಿದ್ದಾರೆ. ಸಿಗರೇಟ್ ಸೇದೋದೇ ತಪ್ಪು ಅಂತ ಹೇಳಿದರೆ, ಮತ್ತೊಂದು ರೂಪದಲ್ಲಿ ತಂದಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಮುಂದಾಗಿದ್ದೇವೆ ಎಂದು ಹೇಳಿದರು.

ಕಾನೂನಿನಲ್ಲಿ 18 ವರ್ಷದೊಳಗಿನವರಿಗೆ ಮಾರಬಾರದು ಎಂದು ಇತ್ತು. ಅದನ್ನು 21 ವರ್ಷಕ್ಕೆ ಅಂತ ಏರಿಸಲಾಗಿದೆ. ಶಾಲಾ – ಕಾಲೇಜುಗಳ ಮೂರು ಮೀಟರ್ ಒಳಗೆ ಮಾರಾಟ ಮಾಡಬಾರದು ಅಂತ ನಿಯಮ ಇದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರಿಗೆ ಇನ್ನೂರು ದಂಡ ಇತ್ತು. ಈಗ ಸಿಗರೇಟ್ ಸೇದುವವರಿಗೆ 1000 ರೂ. ದಂಡ ಹಾಕಲಾಗುವುದು. ಆರೋಗ್ಯ ಕಾಪಾಡುವುದು ನಮ್ಮ ಕರ್ತವ್ಯ. ಯುವಕರು ಹುಕ್ಕಾ ಬಾರ್‌ಗೆ ಹೋಗಿ ಅಡಿಕ್ಟ್ ಆಗುತ್ತಿದ್ದಾರೆ. ಯುವ ಜನತೆ ಇದನ್ನು ಫ್ಯಾಷನ್ ಮಾಡಿಕೊಂಡಿದ್ದಾರೆ. ಇದರಿಂದ ಬೇರೆ ರೀತಿಯ ಅಡ್ಡ ಪರಿಣಾಮ‌ ಆಗುತ್ತಿದೆ ಎಂದು ದಿನೇಶ್‌ ಗುಂಡೂರಾವ್‌ ಕಳವಳ ವ್ಯಕ್ತಪಡಿಸಿದರು.

ಒಳ್ಳೆಯ ನಿರ್ಧಾರ ಎಂದ ವಿರೋಧ ಪಕ್ಷ

ಈ ವೇಳೆ ವಿಪಕ್ಷ ನಾಯಕ ಅಶೋಕ್ ಮಾತನಾಡಿ, ಇದು ಒಳ್ಳೆಯ ನಿರ್ಧಾರವಾಗಿದೆ. ಇನ್ನೆರಡು ನಿಯಮಗಳನ್ನು ಸೇರಿಸಿ. ಶಾಲಾ – ಕಾಲೇಜುಗಳ ನೂರು ಮೀಟರ್ ಒಳಗೆ ಮಾರಾಟ ಮಾಡಿದರೆ ಸಾವಿರ ಅಲ್ಲ, ಹತ್ತು ಸಾವಿರ ರೂಪಾಯಿ ದಂಡ ಹಾಕಲಾಗುವುದು ಎಂಬುದನ್ನು ಸೇರ್ಪಡೆ ಮಾಡಿ ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಗರೇಟ್ ಮಾರಾಟ ಮಾಡುವವರು ಸಣ್ಣ ಪುಟ್ಟ ಅಂಗಡಿಗಳು, ಅವರ ಮೇಲೆ ಮತ್ತೊಂದು ರೀತಿಯ ದೌರ್ಜನ್ಯ ಆಗಬಾರದು. ಹಾಗಾಗಿ ಸಾವಿರ ರೂಪಾಯಿ ದಂಡ ಹಾಕಿದ್ದೇವೆ. ಆದರೆ, ಹುಕ್ಕಾ ಬಾರ್ ನಡೆಸುವವರು ಶ್ರೀಮಂತರು. ಅವರಿಗೆ ಬೇಕಾದರೆ ನೊಡೋಣ ಎಂದು ಹೇಳಿದರು.

ಶಾಸಕ ಸುರೇಶ್ ಕುಮಾರ್ ಮಾತನಾಡಿ, ಅಪರೂಪಕ್ಕೆ ಒಳ್ಳೆಯ ಬಿಲ್ ತಂದಿದ್ದಾರೆ ಎಂದು ಹೇಳಿದರು. ಈ ವೇಳೆ ಮಧ್ಯಪ್ರವೇಶ ಮಾಡಿದ ಶಾಸಕ ಶಿವಲಿಂಗೇಗೌಡ, ಹುಕ್ಕಾ ಬಾರ್ ಅಂದ್ರೇನು, ಸ್ವಲ್ಪ ವಿವರ ನೀಡಿ ಎಂದು ಕೇಳಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಸ್ಪೀಕರ್‌ ಯು.ಟಿ. ಖಾದರ್‌, ಗೂಗಲ್ ಮಾಡಿ ಸಿಗುತ್ತದೆ ಎಂದು ಹೇಳಿ ಕೂರಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.​

Published On - 5:26 pm, Wed, 21 February 24

Loading...
Unable to load recommendations.
Follow Us