ಸಿಜೆ ರಾಯ್ ಕೇಸ್ ಸಂಬಂಧ ಎಸ್ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ? ಇಲ್ಲಿದೆ ಮಾಹಿತಿ
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ನಗರ ಪೊಲೀಸ್ ಆಯುಕ್ತರು ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿದ್ದಾರೆ. ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ, ಐಟಿ ರೈಡ್ ಒತ್ತಡ ಸೇರಿದಂತೆ ಆತ್ಮಹತ್ಯೆಗೆ ಕಾರಣವಾದ ಎಲ್ಲ ಅಂಶಗಳನ್ನು ತಂಡ ಕೂಲಂಕುಷವಾಗಿ ಪರಿಶೀಲಿಸಲಿದೆ.
ಬೆಂಗಳೂರು, ಜನವರಿ 31: ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಸತ್ಯಾಸತ್ಯತೆ ಬಗ್ಗೆ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ಆದೇಶಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರ ಆದೇಶದ ಮೇರೆಗೆ ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ನೇತೃತ್ವದಲ್ಲಿ ಈ ತಂಡ ಕಾರ್ಯನಿರ್ವಹಿಸಲಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ಬಿ ಎಸಿಪಿ ರಾಮಚಂದ್ರ, ಅಶೋಕನಗರ ಠಾಣೆ ಇನ್ಸ್ಪೆಕ್ಟರ್ ರವಿ ಕೂಡ ಈ ಎಸ್ಐಟಿ ತಂಡದಲ್ಲಿದ್ದಾರೆ. ಆತ್ಮಹತ್ಯೆಗೆ ಐಟಿ ರೈಡ್ ಒತ್ತಡವೇ ಕಾರಣ ಎಂಬ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಎಸ್ಐಟಿ ಈ ಕುರಿತು ಸಮಗ್ರ ತನಿಖೆ ನಡೆಸಲಿದೆ. ಅವರ ಮೊಬೈಲ್ ಫೋನ್ ಪರಿಶೀಲಿಸಿ, ಹಣಕಾಸು ವ್ಯವಹಾರಗಳು ಸೇರಿದಂತೆ ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಯಲಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
