ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ: ಸಿದ್ದು ಆಪ್ತರ ವಾದವೇನು?

ಮುಡಾ ಹಗರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ರಾಜ್ಯಪಾಲರ ಪ್ರಾಸಿಕ್ಯೂಷನ್​ ವಿರುದ್ಧ ಹೈಕೋರ್ಟ್​ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಮತ್ತೊಂದೆಡೆ, ಅವರ ಆಪ್ತ ಸಚಿವರು ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸದಂತೆ ವಾದ ಮಂಡಿಸಲು ಸಿದ್ಧರಾಗಿದ್ದಾರೆ.

ಸಿದ್ದರಾಮಯ್ಯ ಪರ ಕಾಂಗ್ರೆಸ್ ಹೈಕಮಾಂಡ್ ಬಳಿ ವಾದ ಮಂಡಿಸಲು ಅತ್ಯಾಪ್ತ ಸಚಿವರ ಸಿದ್ಧತೆ: ಸಿದ್ದು ಆಪ್ತರ ವಾದವೇನು?
ಸಿದ್ದರಾಮಯ್ಯ
Image Credit source: PTI
Edited By:

Updated on: Aug 21, 2024 | 8:45 AM

ಬೆಂಗಳೂರು, ಆಗಸ್ಟ್ 21: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ನೀಡಿದರೂ ಹೈಕೋರ್ಟ್​​ನಿಂದ ತಾತ್ಕಾಲಿಕ ರಿಲೀಫ್ ಪಡೆದಿರುವ ಸಿಎಂ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ಈ ಮಧ್ಯೆ, ಸಿದ್ದರಾಮಯ್ಯ ಪರ ಹೈಕಮಾಂಡ್ ಬಳಿ ಪ್ರಬಲ ವಾದ ಮಂಡಿಸಲು ಅವರ ಆಪ್ತ ಸಚಿವರು ಸಿದ್ಧತೆ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಆಪ್ತ ಸಚಿವರ ವಾದವೇನು?

ಕರ್ನಾಟಕದ ಕಾಂಗ್ರೆಸ್ ಪಕ್ಷದ ಭವಿಷ್ಯದ ಕಾರಣಕ್ಕೆ ಸಿದ್ದರಾಮಯ್ಯ ಅನಿವಾರ್ಯ. ಹೀಗಾಗಿ ಸಿಎಂ ಹೈಕಮಾಂಡ್ ಅವರ ಪರ ಸ್ಟ್ರಾಂಗ್ ಆಗಿ ನಿಲ್ಲಬೇಕು. ಇಲ್ಲವಾದಲ್ಲಿ ಕರ್ನಾಟಕದ ಬಳಿಕ ತೆಲಂಗಾಣದ ಸರ್ಕಾರಕ್ಕೂ ಸಂಕಷ್ಟ ತರುತ್ತಾರೆ ಎಂದು ಸಿದ್ದರಾಮಯ್ಯ ಆಪ್ತ ಸಚಿವರು ವಾದಿಸುತ್ತಿದ್ದಾರೆ.

ಒಂದು ವೇಳೆ ಸಿಎಂ ವಿರುದ್ಧ ಎಫ್ಐ‌ಆರ್ ದಾಖಲಾದರೂ, ತನಿಖೆ ಶುರು ಮಾಡಿದರೂ ಹೈಕಮಾಂಡ್ ಅವರ ಪರ ನಿಲ್ಲಬೇಕು. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಬಾರದು ಎಂದು ಸಚಿವರು ವಾದಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಬೆನ್ನಿಗೆ ಸಚಿವರು ನಿಲ್ಲದಿದ್ದರೆ ಇಡೀ ವ್ಯವಸ್ಥೆಯೇ ಹಾಳಾಗಬಹುದು. ಸಿದ್ದರಾಮಯ್ಯ ಇಳಿಸಿದರೆ ಹಾಲಿ ಹಾಗೂ ಮುಂದಿನ ರಾಜಕೀಯ ಲೆಕ್ಕಾಚಾರಗಳೆಲ್ಲ ಏರುಪೇರಾಗಬಹುದು. ಹೀಗಾಗಿ, ಸಿದ್ದರಾಮಯ್ಯ ಭದ್ರವಾಗಿ ಅಧಿಕಾರದಲ್ಲಿ ಇದ್ದರೆ ಕ್ಯಾಬಿನೆಟ್​​ಗೂ ಉಳಿಗಾಲ. ಸಿದ್ದರಾಮಯ್ಯರನ್ನು ಹೈಕಮಾಂಡ್ ಕೈಬಿಟ್ಟರೆ ಕಾಂಗ್ರೆಸ್​​ಗೆ ತೊಂದರೆ ಎಂದು ಹೈಕಮಾಂಡ್ ಮುಂದೆ ವಾದ ಮಂಡಿಸಲು ಸಿದ್ದರಾಮಯ್ಯ ಅತ್ಯಾಪ್ತ ಸಚಿವರು ಸಿದ್ದವಾಗಿದ್ದಾರೆ. ಅದರಲ್ಲೂ ಅಹಿಂದ ಸಚಿವರು ವಿಶೇಷವಾಗಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ದಲಿತ ಎಂಬ ಕಾರಣಕ್ಕೆ ರಾಜ್ಯಪಾಲರನ್ನು ಗುರಿಯಾಗಿಸುತ್ತಿದೆಯೇ ಕಾಂಗ್ರೆಸ್? ಆರ್ ಅಶೋಕ್ ಪ್ರಶ್ನೆ

ಈ ಮಧ್ಯೆ, ಮುಡಾ ಹಗರಣದಲ್ಲಿ ರಾಜ್ಯಪಾಲರ ವಿರುದ್ಧ ವಾಚಾಮಗೋಚರ ಟೀಕೆ ಮಾಡಿರುವ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ‘ದಲಿತ’ ಅಸ್ತ್ರ ಬಳಸಿದೆ. ದಲಿತರು ಎಂಬ ಕಾರಣಕ್ಕೆ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ನಾಯಕರು ಗುರಿಯಾಗಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ನಾಳೆ ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರು ಹೀನಾಯವಾಗಿ ಟೀಕೆ‌ ಮಾಡಿರುವುದನ್ನು ದಲಿತ ಅಸ್ತ್ರವಾಗಿ ಬಳಸಿಕೊಂಡ ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ನಾಯಕರಿಂದ ಪ್ರತಿಭಟನೆ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us