ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಹೊಸ ದಾಖಲೆಯತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲು!

ಒಂದೆಡೆ ಸಿಎಂ ಕುರ್ಚಿ ಬದಲಾವಣೆಯ ಗುಸುಗುಸು ಕಾಂಗ್ರೆಸ್ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದ್ದರೆ ಮತ್ತೊಂದೆಡೆ, ‘ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ’ ಎಂಬ ದಾಖಲೆ ಬರೆಯುವತ್ತ ಸಿದ್ದರಾಮಯ್ಯ ದಾಪುಗಾಲಿಡುತ್ತಿದ್ದಾರೆ. ಜನವರಿ 5ರ ವರೆಗೆ ಸಿಎಂ ಆಗಿ ಮುಂದುವರಿದಿದ್ದೇ ಆದರೆ, ಮಾಜಿ ಸಿಎಂ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಸರಿಗಟ್ಟಲಿದ್ದಾರೆ.

ನವೆಂಬರ್ ಕ್ರಾಂತಿ ಕಿಚ್ಚಿನ ಮಧ್ಯೆ ಹೊಸ ದಾಖಲೆಯತ್ತ ಸಿಎಂ ಸಿದ್ದರಾಮಯ್ಯ ದಾಪುಗಾಲು!
ಸಿದ್ದರಾಮಯ್ಯ
Edited By:

Updated on: Nov 10, 2025 | 9:48 AM

ಬೆಂಗಳೂರು, ನವೆಂಬರ್ 10: ಕರ್ನಾಟಕ ಕಾಂಗ್ರೆಸ್​ನಲ್ಲಿ (Karnataka Congress) ನವೆಂಬರ್ ಕ್ರಾಂತಿಯ ಕಿಚ್ಚು ಒಂದೆಡೆಯಾದರೆ, ಇದರ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತೊಂದು ಐತಿಹಾಸಿಕ ದಾಖಲೆಯತ್ತ ದಾಪುಗಾಲಿಡುತ್ತಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ, ಸಿಎಂ ಆಗಿ ಹೆಚ್ಚು ಅವಧಿ ಸೇವೆ ಸಲ್ಲಿಸಿದ ದೇವರಾಜ ಅರಸು ಅವರ ದಾಖಲೆಯನ್ನು ಸಿದ್ದರಾಮಯ್ಯ ಮುರಿಯಲಿದ್ದಾರೆ. ಆದರೆ, ಇದು ಸಾಕಾರಗೊಳ್ಳಬೇಕಾದರೆ ಸಿದ್ದರಾಮಯ್ಯ ಅವರು ಜನವರಿ ವರೆಗೂ ಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕು. ಅಧಿಕಾರ ಹಂಚಿಕೆ ಊಹಾಪೋಹಗಳು ನಿಜವಾಗದೇ ಇದ್ದಲ್ಲಿ ಸಿದ್ದರಾಮಯ್ಯ ದಾಖಲೆ ಬರೆಯುವುದು ಖಾತರಿಯಾಗಿದೆ.

ಎಷ್ಟು ವರ್ಷ ಸಿಎಂ ಆಗಿದ್ದರು ದೇವರಾಜ ಅರಸು?

ದೇವರಾಜ ಅರಸು 7 ವರ್ಷ 7 ತಿಂಗಳು 20 ದಿನಗಳ ಕಾಲ ಮುಖ್ಯಮಂತ್ರಿ ಸ್ಥಾನದಲ್ಲಿದ್ದು ಸೇವೆ ಸಲ್ಲಿಸಿದ್ದರು. ಅವರು 1972ರ ಮಾರ್ಚ್ 20ರಿಂದ 1977ರ ಡಿಸೆಂಬರ್ 31ರವರೆಗೆ ಮತ್ತು ಬಳಿಕ 1978ರ ಫೆಬ್ರವರಿ 28ರಿಂದ 1980ರ ಜನವರಿ 7ರವರೆಗೆ ಎರಡು ಅವಧಿಗಳಲ್ಲಿ ಸಿಎಂ ಆಗಿದ್ದರು.

ಜನವರಿಯಲ್ಲಿ ದೇವರಾಜ ಅರಸು ಸರಿಗಟ್ಟಲಿರುವ ಸಿದ್ದರಾಮಯ್ಯ

ಇದೀಗ ಸಿದ್ದರಾಮಯ್ಯ ಕೂಡ ಎರಡು ಅವಧಿಗಳಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದು, 2026ರ ಜನವರಿ 5 ರ ವೇಳೆಗೆ ದೇವರಾಜ ಅರಸು ಅವರ ದಾಖಲೆ ಸರಿಗಟ್ಟಲಿದ್ದಾರೆ. ನವೆಂಬರ್ ಕ್ರಾಂತಿ ಹಿನ್ನಲೆಯಲ್ಲಿ ಕಾಂಗ್ರೆಸ್‌ನೊಳಗೆ ನಾಯಕತ್ವ ಬದಲಾವಣೆ ಆಗದಿದ್ದರೆ, ಕರ್ನಾಟಕದ ಇತಿಹಾಸದಲ್ಲಿ ‘ಅತ್ಯಧಿಕ ಅವಧಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ’ ಎಂಬ ಕೀರ್ತಿ ಸಿದ್ದರಾಮಯ್ಯ ಅವರದ್ದಾಗಲಿದೆ.

ಇದನ್ನೂ ಓದಿ: ಪೂರ್ಣಾವಧಿ ಸಿಎಂ ಎಂದ ಬಳಿಕ ಡಿಕೆ ಶಿವಕುಮಾರ್ ಮುಖ ನೋಡುತ್ತಲೇ ವರಸೆ ಬದಲಿಸಿದ ಸಿದ್ದರಾಮಯ್ಯ!

ಮೊದಲ ಬಾರಿಗೆ ಪೂರ್ಣಾವಧಿ ಮುಖ್ಯಮಂತ್ರಿ ಸ್ಥಾನದಲ್ಲಿ ಅಧಿಕಾರ ಮುಗಿಸಿದ ಸಿದ್ದರಾಮಯ್ಯ, ಇದೀಗ ಎರಡನೇ ಬಾರಿಗೆ ಅದೇ ಹಾದಿಯಲ್ಲಿ ನಡೆದು ದಾಖಲೆ ನಿರ್ಮಾಣ ಮಾಡುವ ಹಂತದಲ್ಲಿದ್ದಾರೆ. ದೇವರಾಜ ಅರಸು ಅವರೇ ಸಾಟಿ ಎಂದು ಹೇಳಿಕೊಂಡಿದ್ದ ಸಿಎಂ ಸಿದ್ದರಾಮಯ್ಯ, ಈಗ ಅವರ ದಾಖಲೆಯನ್ನೇ ಸರಿಗಟ್ಟಲು ಕೌಂಟ್‌ಡೌನ್ ಆರಂಭವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us