ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಆರೋಪಗಳಿಗೆ ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಬಗೆಯಲು ಮುಂದಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಹಳೆಯ ಹಗರಣಗಳ ತನಿಖಾ ಪ್ರಗತಿ ಪರಿಶೀಲನೆಗೆ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಸಮಿತಿಯ ಕುರಿತಾದ ವಿವರ ಇಲ್ಲಿದೆ.

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ
ಗೃಹ ಸಚಿವ ಡಾ. ಜಿ ಪರಮೇಶ್ವರ

Updated on: Sep 11, 2024 | 9:35 AM

ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಆದೇಶದಲ್ಲೇನಿದೆ?

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಸಚಿವರ ಸಮಿತಿಯ ಸದಸ್ಯರು

  • ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
  • ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
  • ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು

ಸದರಿ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣ ವಿಚಾರವಾಗಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಹಳೆಯ ಹಗರಣಗಳನ್ನು ಮುನ್ನೆಲೆಗೆ ತರಲು ಯತ್ನಿಸುತ್ತಿದೆ. ಈಗಾಗಲೇ ಮಾಜಿ ಸಚಿವರು, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ, ಹೈಕೋರ್ಟ್‌ನಲ್ಲಿ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹಿಂದಿನ ಸರ್ಕಾರಗಳ ಹಗರಣಗಳ ತನಿಖೆಗೆ ಸಮಿತಿ ರಚಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us