ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ: ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದ ಸಿದ್ದರಾಮಯ್ಯ

ಸೋಮವಾರ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ಮಾಡಿದರು. ವಿವಿಯ ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು. ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ: ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Edited By:

Updated on: Aug 21, 2023 | 3:52 PM

ಬೆಂಗಳೂರು, ಆಗಸ್ಟ್​ 21: ಶಿಕ್ಷಣ ಅಂದರೆ ಕೇವಲ ಓದುಬರಹ ಕಲಿಯುವುದಲ್ಲ. ಸಾಮಾಜಿಕ ಆರ್ಥಿಕ ಸಮಸ್ಯೆಗಳಿಗೆ ಸ್ಪಂದಿಸುವ ಶಿಕ್ಷಣ ನೀಡಬೇಕು. ಈ ನಿಟ್ಟಿನಲ್ಲಿ ವಿಶ್ವ ವಿದ್ಯಾಲಯಗಳು ಉನ್ನತ ಶಿಕ್ಷಣವನ್ನು, ಜ್ಞಾನವನ್ನು ವಿದ್ಯಾರ್ಥಿಗಳಿಗೆ ಒದಗಿಸುವ ಜೊತೆಗೆ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಮೂಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ (Siddaramaiah) ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿ, ಗುಣಮಟ್ಟದ ಶಿಕ್ಷಣ ಕೊಡುವುದರಲ್ಲಿ ಲೋಪವಾಗಬಾರದು ಎಂದು ವಿವಿಯ ಕುಲಪತಿಗಳಿಗೆ ಸೂಚನೆ ನೀಡಿದರು. ಪದವೀಧರ ಯುವಕ-ಯುವತಿಯರು ಯಾವುದೇ ಜಾತಿ, ಧರ್ಮ, ಭಾಷೆಗಳಿಂದ ಪ್ರಭಾವಿತರಾಗಬಾರದು‌. ಅದಕ್ಕೆ ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಪುನರ್‌ ವಿಮರ್ಶೆ ಮಾಡುವ ಪ್ರಯತ್ನ ಮಾಡುತ್ತಿದ್ದೇವೆ. ಬೇರೆ ಬೇರೆ ಭಾಷೆ, ಸಂಸ್ಕೃತಿ ಮತ್ತಿತರ ಅಂಶಗಳ ಕಾರಣದಿಂದ ನಮ್ಮ ದೇಶದಲ್ಲಿ ಏಕ ಶಿಕ್ಷಣ ಪದ್ಧತಿ ಸಾಧ್ಯವಿಲ್ಲ ಎಂದು ತಿಳಿಸಿದರು.

ಅಧ್ಯಯನ ಮತ್ತು ಸಂಶೋಧನೆಗಳು ಗ್ರಂಥಾಲಯಗಳಲ್ಲಿ ಕೊಳೆಯಬಾರದು. ಸ್ವಾತಂತ್ರ್ಯ ಪೂರ್ವದಲ್ಲಿದ್ದ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯ ಜೊತೆ ರಾಜಿ ಮಾಡಿಕೊಂಡು ಹೋಗುವುದಾದರೆ ಅದು ಶಿಕ್ಷಣವೇ ಅಲ್ಲ. ಒಬ್ಬ ವ್ಯಕ್ತಿ ವಿವಿಯಿಂದ ಹೊರಗೆ ಬಂದ ಮೇಲೆ ಸಮಾಜದ ಜವಾಬ್ದಾರಿ ಹೊರುವ ಶಕ್ತಿ ಇರಬೇಕು. ಅಂತಹ ಜ್ಞಾನ ಬರಬೇಕು ಎಂದರು.

ಕುಲಪತಿಗಳು ನಮ್ಮ ಸಾಮಾಜಿಕ ಆರ್ಥಿಕ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ರಾಜಕೀಯ, ಪ್ರಜಾಪ್ರಭುತ್ವ, ಸಾಮಾಜಿಕ ಪ್ರಜಾಪ್ರಭುತ್ವದ ತಳಹದಿಯ ಮೇಲಿದ್ದಾಗ ಮಾತ್ರ ದೇಶದಲ್ಲಿ ಸಮಾನತೆ ಸಾಧ್ಯ ಎಂದು ಅಂಬೇಡ್ಕರ್‌ ಅವರು ಹೇಳಿದ್ದಾರೆ. ಈ ಸಮ ಸಮಾಜ ನಿರ್ಮಾಣ ಮಾಡುವ ಸಾಮರ್ಥ್ಯವನ್ನು ನಾವು ವಿವಿಗಳ ಮೂಲಕ ಕೊಡಬೇಕು.

ಇದನ್ನೂ ಓದಿ: ಎನ್ಇಪಿ ರದ್ದತಿ ಕುರಿತು ಸಿಎಂ ಸಿದ್ಧರಾಮಯ್ಯ ಹೇಳಿಕೆಗೆ ಉದ್ಯಮಿ ಮೋಹನ್‌ದಾಸ್ ಪೈ ಟೀಕೆ

ಸಂವಿಧಾನಕ್ಕೆ ವಿರುದ್ಧವಾದ ಚಟುವಟಿಕೆ ಮತ್ತು ಕ್ರಮಗಳು ವಿವಿಗಳಲ್ಲಿ ನಡೆಯಬಾರದು. ವಿವಿಗಳಿಂದ ಬಂದವರು ಮತ್ತೆ ಮೌಢ್ಯಗಳು, ಜಾತಿಯ ಜೊತೆಯಲ್ಲಿದ್ದರೆ ಅವರು ಪಡೆದಿರುವುದು ಶಿಕ್ಷಣ ಎಂದು ಕರೆಯಲಾಗದು. ವಿವಿಗಳಲ್ಲಿ ಧರ್ಮ ನಿರಪೇಕ್ಷತೆ, ಮೌಢ್ಯ ರಹಿತ, ಕಂದಾಚಾರ ರಹಿತ ಹಾಗೂ ವೈಜ್ಞಾನಿಕತೆ ಮತ್ತು ವೈಚಾರಿಕತೆ ಬೆಳೆಸುವ ಶಿಕ್ಷಣ ನೀಡಬೇಕು.

ಕೆಲವೊಮ್ಮೆ ಸ್ವಾತಂತ್ರ್ಯ ಹೋರಾಟಗಾರರು, ಸಂವಿಧಾನ ಕರ್ತೃಗಳು, ಸಾಮಾಜಿಕ ಚಿಂತಕರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಸಭೆ, ಸಮಾರಂಭಗಳನ್ನು ನಡೆಸಿರುವುದನ್ನು ಕೆಲವು ವಿವಿಗಳಲ್ಲಿ ನೋಡಿದ್ದೇನೆ. ಜಾತ್ಯತೀತ ವಿರೋಧಿ ಮನೋಭಾವವನ್ನು ಪುರಸ್ಕರಿಸಬಾರದು. ಹಾಗೆ ಮಾಡುವುದರಿಂದ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುತ್ತದೆ.

ಇದನ್ನೂ ಓದಿ: ಮಾತೃ ಭಾಷೆಯಲ್ಲಿ ಶಿಕ್ಷಣ ಒದಗಿಸುವುದು ತಪ್ಪಾ? ಎನ್​ಇಪಿ ರದ್ದತಿ ಕುರಿತ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ಪ್ರಶ್ನೆ

ಯಾವುದೇ ಕಾರಣಕ್ಕೆ ಅಂತಹ ಕಾರ್ಯಕ್ರಮಗಳನ್ನು ಆಯೋಜಿಸಬಾರದು. ಇಲ್ಲವಾದರೆ ಉನ್ನತ ಶಿಕ್ಷಣ ಸರಿದಾರಿಯಲ್ಲಿ ಸಾಗದೆ ಹೋದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿಲ್ಲ, ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸುವ ವಾತಾವರಣ ನಿರ್ಮಿಸಬೇಕು ಎಂದರು.

ವಿದ್ಯಾರ್ಥಿಗಳು ಮನುಷ್ಯತ್ವ ಇರುವ ವ್ಯಕ್ತಿಗಳಾಗಿ ಬೆಳೆಯಬೇಕು. ಈ ಹಿಂದೆ ಶೇಕಡಾ 3ಕ್ಕಿಂತ ಹೆಚ್ಚು ಅನುದಾನ ನೀಡಲಾಗಿತ್ತು. ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ಒದಗಿಸಲು ಪ್ರಯತ್ನ ಮಾಡಲಾಗುವುದು. ಒಂದೇ ಬಾರಿ ಎಲ್ಲಾ ಪರಿಹಾರ ಒದಗಿಸಲಾಗದು. ನಿಮ್ಮ ಸಮಸ್ಯೆ ಬಗೆಹರಿಸಲು ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:48 pm, Mon, 21 August 23

Sunil MH
Follow Us