ಸಚಿವ ಸಂಪುಟ ಪುನಾರಚನೆ ಇಲ್ಲ, ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕರ್ನಾಟಕದ ಸಚಿವ ಸಂಪುಟ ಪುನಾರಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿ. ನಾಗೇಂದ್ರ ಅವರ ಸಂಪುಟ ಸೇರ್ಪಡೆ ಬಗ್ಗೆ ಉಪಚುನಾವಣೆ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಅಬಕಾರಿ ಭ್ರಷ್ಟಾಚಾರ ಆರೋಪಗಳನ್ನು ನಿರಾಕರಿಸಿದರು. ಮುಸ್ಲಿಂ ಮೀಸಲಾತಿ ಕುರಿತು ಚರ್ಚೆ ಇಲ್ಲ ಎಂದೂ ಹೇಳಿದರು.

ಸಚಿವ ಸಂಪುಟ ಪುನಾರಚನೆ ಇಲ್ಲ, ನಾಗೇಂದ್ರಗೆ ಸಚಿವ ಸ್ಥಾನ ನೀಡುವ ಬಗ್ಗೆಯಷ್ಟೇ ಚರ್ಚೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಸಿದ್ದರಾಮಯ್ಯ
Edited By:

Updated on: Nov 13, 2024 | 12:35 PM

ಮೈಸೂರು, ನವೆಂಬರ್ 13: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ನೋಡೋಣ ಎಂದಿದ್ದೇನೆ. ಅದನ್ನೇ ಸಂಪುಟ ಪುನಾರಚನೆ ಎಂದು ಬಿಂಬಿಸಬೇಡಿ ಎಂದು ಹೇಳಿದರು.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂ. ಅವ್ಯವಹಾರದ ಆರೋಪದಲ್ಲಿ ಜೈಲುಪಾಲಾಗಿ ಬಿಡುಗಡೆಯಾಗಿರುವ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಸಿದ್ದರಾಮಯ್ಯ ಮಂಗಳವಾರ ಸುಳಿವು ನೀಡಿದ್ದರು. ಇದರ ಬೆನ್ನಲ್ಲೇ ಸಂಪುಟ ಪುನಾರಚನೆ ವದಂತಿ ಹಬ್ಬಿತ್ತು. ಇದೀಗ ಸಿದ್ದರಾಮಯ್ಯ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ರಾಜಕೀಯವನ್ನೇ ಬಿಡುತ್ತೇನೆ. ಒಂದೇ ಒಂದು ಪೈಸೆ ಭ್ರಷ್ಟಾಚಾರ ಮಾಡಿದ್ದರೆ ರಾಜಕೀಯ ಬಿಡುತ್ತೇನೆ. ನರೇಂದ್ರ ಮೋದಿ ಪ್ರಧಾನಿ ಸ್ಥಾನ ತ್ಯಜಿಸುತ್ತಾರಾ ಕೇಳಿ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಬಿಜೆಪಿಯವರು ಭ್ರಷ್ಟಾಚಾರ ಎಂದು ಬರೀ ಸುಳ್ಳು ಹೇಳುತ್ತಿದ್ದಾರೆ. ಕೋವಿಡ್ ವೇಳೆ ನಡೆದ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ಏನು ಹೇಳುತ್ತಾರೆ‌? ಪ್ರಧಾನಿ ಮೋದಿಗೆ ಕರ್ನಾಟಕ ಹಾಗೂ ಸಿದ್ದರಾಮಯ್ಯ ಟಾರ್ಗೆಟ್. ಕರ್ನಾಟಕ ಅತಿ ದೊಡ್ಡ ರಾಜ್ಯ, ಇಲ್ಲಿ ನಾವು 136 ಸ್ಥಾನ ಗೆದ್ದಿದ್ದೇವೆ. ಹೀಗಾಗಿ ನಮ್ಮನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದರು.

ಮುಸ್ಲಿಮರಿಗೆ ಮೀಸಲಾತಿ ಬಗ್ಗೆ ಚಿಂತನೆ ಮಾಡಿಲ್ಲ: ಸಿಎಂ

ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಚಾರವಾಗಿ ಕೆಲವರು ಮನವಿ ಸಲ್ಲಿಸಿದ್ದಾರೆ. ಆದರೆ ಮೀಸಲಾತಿ ನೀಡುವ ಬಗ್ಗೆ ಚಿಂತನೆ ಮಾಡಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಬಿಜೆಪಿ ಕೋಮುವಾದದ ಹಿನ್ನೆಲೆಯಲ್ಲಿ ವಿವಾದ ಮಾಡುತ್ತಿದೆ. ಬಿಜೆಪಿ ನಾಯಕರಿಗೆ ಶಾಂತಿ ಸೌಹಾರ್ದತೆ ಕೆಡಿಸುವುದೇ ಕೆಲಸ. ಹೀಗಾಗಿ ಇದು ವಿವಾದವಾಗುತ್ತಿದೆ ಅಷ್ಟೇ ಎಂದು ಸಿದ್ದರಾಮಯ್ಯ ದೂರಿದರು.

‘ಕರಿಯ’ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ‘ಕರಿಯ’ ಎಂದು ಸಚಿವ ಜಮೀರ್ ಹೇಳಿಕೆ ನೀಡಿರುವುದನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡರು. ನನ್ನ ಬಗ್ಗೆ ಹೆಚ್​ಡಿ ದೇವೇಗೌಡರು ಸೊಕ್ಕು ಮುರಿಯುತ್ತೇನೆ, ಗರ್ವಭಂಗ ಮಾಡುತ್ತೇನೆ ಎಂದು ಹೇಳಿದ್ದು ಸರಿಯೇ ಎಂದು ಅವರು ಪ್ರತಿ ಪ್ರಶ್ನೆ ಮಾಡಿದರು. ಜಮೀರ್ ಮತ್ತು ಕುಮಾರಸ್ವಾಮಿ ಹಿಂದಿನಿಂದಲೂ ಒಳ್ಳೆಯ ಸ್ನೇಹಿತರು. ಅವರವರ ನಡುವೆ ಏನೇನೋ ನಡೆಯುತ್ತಿರುತ್ತದೆ. ಆ ವಿಚಾರದ ಬಗ್ಗೆ ಜಮೀರ್ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಇದೆಲ್ಲವೂ ಉಪಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದರು.

ಇದನ್ನೂ ಓದಿ: ವಾಲ್ಮೀಕಿ ಹಗರಣದಲ್ಲಿ ಬಂಧನವಾಗಿದ್ದ ಶಾಸಕ ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ?

ಬಂಡೀಪುರದಲ್ಲಿ ರಾತ್ರಿ ಸಂಚಾರ ನಿಷೇಧ ಆದೇಶ ಹಿಂಪಡೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆ ರೀತಿಯ ಪ್ರಸ್ತಾವ ಇಲ್ಲ ಎಂದರು. ಸಂಪುಟದಲ್ಲಿ ಆ ವಿಚಾರದ ಬಗ್ಗೆ ಚರ್ಚೆಯೇ ನಡೆದಿಲ್ಲ. ಡಿಸಿಎಂ ಹೇಳಿದ್ದರೆ ಅವರ ಬಳಿಯೇ ಕೇಳಿ ಎಂದರು.

ಮುಂದಿನ ಅವಧಿಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂಬ ಶಾಸಕ ಅನಿಲ್ ಚಿಕ್ಕಮಾಧು ಹೇಳಿಕೆಗೆ ಪ್ರತಿಕ್ರಿಯಿಸಿ, ಅದು ಅವರ ವೈಯಕ್ತಿಕ ಹೇಳಿಕೆ, ಅದರ ಬಗ್ಗೆ ಏನೂ ಹೇಳಲ್ಲ ಎಂದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Follow Us