ಕರ್ನಾಟಕ ರಾಜ್ಯದ ಶೇ 80ರಷ್ಟು ಮಂದಿ ಬಡವರೇ? ಸಿಎಂ ಸಿದ್ದರಾಮಯ್ಯ ಹೀಗೆ ಪ್ರಶ್ನಿಸಲು ಇದೆ ಕಾರಣ!

ಕರ್ನಾಟಕದಲ್ಲಿ 2021ರಿಂದಲೇ ಬೋಗಸ್ ಬಿಪಿಎಲ್ ಕಾರ್ಡ್​​ಗಳ ವಿರುದ್ಧ ಆಹಾರ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆದಾಗ್ಯೂ ಇನ್ನೂ ಶೇ 80ರಷ್ಟು ನಾಗರಿಕರು ಬಿಪಿಎಲ್ ಕಾರ್ಡ್​ ಹೊಂದಿದ್ದಾರೆ! ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿ ವ್ಯಕ್ತಪಡಿಸಿದ್ದು, ಅಧಿಕಾರಿಗಳಿಗೆ ಖಡನ್ ಸೂಚನೆ ನೀಡಿದ್ದಾರೆ. ಆ ಬಗ್ಗೆ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜ್ಯದ ಶೇ 80ರಷ್ಟು ಮಂದಿ ಬಡವರೇ? ಸಿಎಂ ಸಿದ್ದರಾಮಯ್ಯ ಹೀಗೆ ಪ್ರಶ್ನಿಸಲು ಇದೆ ಕಾರಣ!
ಸಿಎಂ ಸಿದ್ದರಾಮಯ್ಯ

Updated on: Jul 11, 2024 | 12:15 PM

ಬೆಂಗಳೂರು, ಜುಲೈ 11: ಕರ್ನಾಟಕದಲ್ಲಿ ಶೇ 80 ರಷ್ಟು ನಾಗರೀಕರು ಬಡತನ ರೇಖೆಗಿಂತ ಕೆಳಗಿರುವುದು ಹೇಗೆ? ಇದು ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಅಧಿಕಾರಿಗಳ ಜತೆ ಸಭೆ ನಡೆಸಿದಾಗ ಕೇಳಿದ ಪ್ರಶ್ನೆ. ರಾಜ್ಯದಲ್ಲಿ ಹೆಚ್ಚಾಗಿರುವ ಬೋಗಸ್ ಬಿಪಿಎಲ್ ಕಾರ್ಡ್​​​ಗಳ ಬಗ್ಗೆ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದ್ದು, ಅಧಿಕಾರಿಗಳ ಬಳಿ ಈ ರೀತಿ ಪ್ರಶ್ನೆ ಕೇಳುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ, ಬೋಗಸ್ ಬಿಪಿಎಲ್ ಕಾರ್ಡ್​​​ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ತಮಿಳುನಾಡಿನಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರ ಪ್ರಮಾಣ ಶೇಕಡಾ 40 ರಷ್ಟಿದೆ ಎಂದು ಉಲ್ಲೇಖಿಸಿದ ಸಿದ್ದರಾಮಯ್ಯ, ನೀತಿ ಆಯೋಗದ ಪ್ರಕಾರ ಕರ್ನಾಟಕದಲ್ಲಿ ಕೇವಲ ಶೇಕಡಾ 5.67 ರಷ್ಟು ನಾಗರಿಕರು ಬಿಪಿಎಲ್ ಆಗಿರಬೇಕು ಎಂದಿದ್ದಾರೆ. ಆದಾಗ್ಯೂ, 4.67 ಕೋಟಿ ಜನರನ್ನು ಹೊಂದಿರುವ 1.47 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್‌ಗಳನ್ನು ಹೊಂದಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ನಿಜವಾದ ಬಡವರಿಗೆ ಹೊಸ ಬಿಪಿಎಲ್ ಕಾರ್ಡ್‌ಗಳನ್ನು ನೀಡುವುದರ ಜತೆಗೆ ಎಲ್ಲಾ ಬೋಗಸ್ ಕಾರ್ಡ್‌ಗಳನ್ನು ತೊಡೆದುಹಾಕಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸಂದೇಶ ರವಾನಿಸಿದ್ದಾರೆ.

6.17 ಲಕ್ಷ ಬೋಗಸ್ ಬಿಪಿಎಲ್ ಕಾರ್ಡ್ ರದ್ದು

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಕಾರ, ರಾಜ್ಯದಲ್ಲಿ 2.95 ಲಕ್ಷ ಹೊಸ ಪಡಿತರ ಚೀಟಿ (ಬಿಪಿಎಲ್) ಅರ್ಜಿಗಳು ಬಾಕಿ ಉಳಿದಿವೆ. 2021 ಡಿಸೆಂಬರ್ ಮತ್ತು 2024 ರ ಫೆಬ್ರವರಿ ನಡುವೆ ಅಧಿಕಾರಿಗಳು 6.17 ಲಕ್ಷ ಬೋಗಸ್ ಬಿಪಿಎಲ್ ಕಾರ್ಡ್​​ಗಳನ್ನು ಪತ್ತೆ ಮಾಡಿ ಪಟ್ಟಿಯಿಂದ ತೆಗೆದುಹಾಕಿದ್ದಾರೆ.

ಬಿಪಿಎಲ್ ಅಂಕಿಅಂಶವನ್ನು ಸಮರ್ಪಕವಾಗಿ ಇಟ್ಟುಕೊಳ್ಳುವು ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅನಿವಾರ್ಯವಾಗಿದೆ. ಏಕೆಂದರೆ ಸರ್ಕಾರದ ಅನ್ನ ಭಾಗ್ಯ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಫಲಾನುಭವಿಗಳ ಗುರುತಿಸುವಿಕೆಗೆ ಇದುವೇ ಪ್ರಮುಖ ಆಧಾರವಾಗಿದೆ. ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳ ಪೈಕಿ ಈ ಎರಡು ಯೋಜನೆಗಳಿಗೇ 28,000 ಕೋಟಿ ರೂ.ಗಿಂತ ಹೆಚ್ಚು ವೆಚ್ಚವಾಗುತ್ತಿದೆ.

ಇದನ್ನೂ ಓದಿ: BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಕರ್ನಾಟಕದಲ್ಲಿ 76 ಲಕ್ಷ ಪಿಂಚಣಿದಾರರಿದ್ದಾರೆ ಎಂದ ಸಿದ್ದರಾಮಯ್ಯ, ಭಾರತದಲ್ಲಿ ಅತಿ ಹೆಚ್ಚು ಪಿಂಚಣಿ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಪಿಂಚಣಿ ಸ್ವೀಕರಿಸುವವರು ಮೃತಪಟ್ಟರೆ ಅಂಥವರ ಹೆಸರಿನಲ್ಲಿ ಆಗುತ್ತಿರುವ ಪಾವತಿಯನ್ನು ನಿಲ್ಲಿಸಲು ಅಧಿಕಾರಿಗಳು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us