AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ; ರಾಜ್ಯ ಬಿಜೆಪಿ ಪ್ರಚಾರದ ಬಲೂನ್​ಗೆ ಕೇಂದ್ರ ಸೂಜಿ ಚುಚ್ಚಿದೆ ಎಂದ ಸಿದ್ದರಾಮಯ್ಯ

ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಸಿದ್ದರಾಮಯ್ಯ ಪ್ರಶ್ನೆ

ಎಸ್​​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ; ರಾಜ್ಯ ಬಿಜೆಪಿ ಪ್ರಚಾರದ ಬಲೂನ್​ಗೆ ಕೇಂದ್ರ ಸೂಜಿ ಚುಚ್ಚಿದೆ ಎಂದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us
TV9 Web
| Updated By: Ganapathi Sharma

Updated on:Dec 10, 2022 | 4:23 PM

ಬೆಂಗಳೂರು: ಮೀಸಲಾತಿ (Reservation) ಪ್ರಮಾಣವನ್ನು ಶೇಕಡಾ 50ಕ್ಕಿಂತ ಹೆಚ್ಚಿಸುವ ಪ್ರಸ್ತಾಪ ಇಲ್ಲವೆಂದು ಲೋಕಸಭೆಯಲ್ಲಿ ಕೇಂದ್ರ ಸಚಿವರೇ ಹೇಳಿದ್ದಾರೆ. ಆ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ (SC/ST Reservation) ಸಂಬಂಧಿಸಿ ರಾಜ್ಯ ಬಿಜೆಪಿ ನಾಯಕರ ಪ್ರಚಾರದ ಬಲೂನ್​ಗೆ ಕೇಂದ್ರ ಸರ್ಕಾರವೇ ಸೂಜಿ ಚುಚ್ಚಿದೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ (Siddaramaiah) ಟೀಕಿಸಿದ್ದಾರೆ. ಎಸ್​​ಸಿ, ಎಸ್​ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಸರಣಿ ಟ್ವೀಟ್ ಮಾಡಿರುವ ಅವರು, ಮೀಸಲಾತಿ ಮಿತಿಗೆ ಸಂಬಂಧಿಸಿ ಸಂಸತ್​ನಲ್ಲಿ ಕೇಂದ್ರ ಸಚಿವರು ನೀಡಿದ ಉತ್ತರದ ಪ್ರತಿಯನ್ನು ಲಗತ್ತಿಸಿದ್ದಾರೆ.

‘ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಿರ್ಧಾರ ಹಿಂದೆ ಇದ್ದದ್ದು ಆ ಸಮುದಾಯದ ಬಗೆಗಿನ ಕಾಳಜಿ ಅಲ್ಲ, ಅದು ರಾಜಕೀಯ ಲಾಭದ ದುರುದ್ದೇಶ ಮಾತ್ರ ಎನ್ನುವುದನ್ನು ನಾವು ಹೇಳುತ್ತಲೇ ಬಂದಿದ್ದೇವೆ. ಈಗ ಕೇಂದ್ರ ಬಿಜೆಪಿ ಸರ್ಕಾರವೇ ರಾಜ್ಯ ಬಿಜೆಪಿಯ ಬಣ್ಣ ಬಯಲು ಮಾಡಿದೆ. ಶೇಕಡಾ 50ರ ಒಟ್ಟು ಮೀಸಲಾತಿ ಪ್ರಮಾಣದ ಮಿತಿಯನ್ನು ಕಿತ್ತುಹಾಕದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಹೇಗೆ ಹೆಚ್ಚಿಸಲು ಸಾಧ್ಯ? ಕೆಲವರನ್ನು ಕೆಲವು ಕಾಲ ಮರುಳು ಮಾಡಬಹುದು, ಎಲ್ಲರನ್ನೂ ಎಲ್ಲ ಕಾಲದಲ್ಲಿಯೂ ಮರುಳು ಮಾಡಲು ಸಾಧ್ಯವಿಲ್ಲ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ನಾವು ಸುಮ್ಮನೇ ಕುಳಿತಿದ್ದರೂ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಹೆಚ್ಚಿಸುವ ಮತ್ತು ಕಡಿಮೆ ಮಾಡುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಮಾತ್ರ ಇರುವುದರಿಂದ ರಾಜ್ಯ ಬಿಜೆಪಿ ಸರ್ಕಾರ ಮೊದಲು ಇದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ಒಪ್ಪಿಸಬೇಕಿತ್ತು. ಈ ಕರ್ತವ್ಯದಲ್ಲಿ ರಾಜ್ಯ ಸರ್ಕಾರ ಸೋತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಬಗ್ಗೆ ರಾಜ್ಯ ಬಿಜೆಪಿಗೆ ಪ್ರಾಮಾಣಿಕ ಕಾಳಜಿ ಇದ್ದಿದ್ದರೆ ತಕ್ಷಣ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮೀಸಲಾತಿ ಹೆಚ್ಚಳಕ್ಕೆ ಕೈಗೊಳ್ಳಬೇಕಾಗಿರುವ ಉಪಕ್ರಮಗಳ ಪ್ರಕ್ರಿಯೆಯನ್ನು ಶುರುಮಾಡುವಂತೆ ಮನವರಿಕೆ ಮಾಡಿಕೊಡಬೇಕು. ಮತ್ತೆ ಯಾವ ಕರ್ಮಕ್ಕೆ ಡಬಲ್ ಎಂಜಿನ್ ಸರ್ಕಾರ ಇದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜತೆ ಮಾತನಾಡುವ ಧೈರ್ಯ ಇಲ್ಲದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲಿ. ಮೀಸಲಾತಿ ಹೆಚ್ಚಳದ ಅವಶ್ಯಕತೆ ಬಗ್ಗೆ ನಾವು ಪ್ರಧಾನಿಯವರಿಗೆ ಮನವರಿಕೆ ಮಾಡಿಕೊಡುತ್ತೇವೆ. ಇದನ್ನು ಬಿಟ್ಟು ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಾ ಬಣ್ಣ ಬಯಲು ಮಾಡಿಕೊಳ್ಳಬೇಡಿ ಎಂದು ರಾಜ್ಯ ಬಿಜೆಪಿ ನಾಯಕರನ್ನು ಉದ್ದೇಶಿಸಿ ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Sat, 10 December 22