ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಜಮೀರ್ ಅಹ್ಮದ್​ಗೆ ಹೈಕೋರ್ಟ್​​ನಲ್ಲಿ ಹಿನ್ನಡೆ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಖಾನ್​​ಗೆ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ; ಜಮೀರ್ ಅಹ್ಮದ್​ಗೆ ಹೈಕೋರ್ಟ್​​ನಲ್ಲಿ ಹಿನ್ನಡೆ
ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಖಾನ್

Updated on: Apr 06, 2023 | 4:26 PM

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಖಾನ್​​ಗೆ (Zameer Ahmed Khan) ಹೈಕೋರ್ಟ್​ನಲ್ಲಿ (Karnataka High Court) ಹಿನ್ನಡೆಯಾಗಿದೆ. ಜಮೀರ್ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಗುರುವಾರ ವಜಾಗೊಳಿಸಿದೆ. 80.44 ಕೋಟಿ ರೂ. ಮೌಲ್ಯದ ಆದಾಯ ಮೀರಿ ಅಕ್ರಮ ಆಸ್ತಿ ಮಾಡಿದ ಆರೋಪ‌ ಜಮೀರ್ ಅಹ್ಮದ್ ಮೇಲಿದೆ. ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB) ಪ್ರಕರಣ ದಾಖಲಿಸಿತ್ತು. ಪ್ರಕರಣದ ತನಿಖೆಗೆ ತಡೆ ನೀಡುವಂತೆ ಜಮೀರ್ ಅಹ್ಮದ್​ ಕೋರಿದ್ದರು.

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಕೋರಿ ಜಮೀರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಏಪ್ರಿಲ್ 1ರಂದು ಪೂರ್ಣಗೊಳಿಸಿದ್ದ ಪೀಠ, ಆದೇಶವನ್ನು ಕಾಯ್ದಿರಿಸಿತ್ತು.

ವಿಚಾರಣೆ ನಡೆಸದೇ ಎಫ್​ಐಆರ್; ಜಮೀರ್ ವಕೀಲರ ಆರೋಪ

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವ ಮುನ್ನ ತನಿಖಾ ಸಂಸ್ಥೆಯು ಆರೋಪಿಯನ್ನು ಪ್ರಾಥಮಿಕ ವಿಚಾರಣೆ ನಡೆಸಬೇಕು. ಇದು ಕಡ್ಡಾಯವೂ ಹೌದು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ಜಮೀರ್ ಪರ ವಕೀಲ ಇಸ್ಮಾಯಿಲ್ ಜಬೀವುಲ್ಲಾ ವಾದ ಮಂಡಿಸಿದ್ದರು. ಜಾರಿ ನಿರ್ದೇಶನಾಲಯ (ಇಡಿ) ವರದಿ ಆಧರಿಸಿ ಎಸಿಬಿ ಎಫ್‌ಐಆರ್ ದಾಖಲಿಸಿದೆ. ಇದು ಕಾನೂನು ಬಾಹಿರ. ಹೀಗಾಗಿ ಎಸಿಬಿ ದಾಖಲಿಸಿರುವ ಎಫ್‌ಐಆರ್‌ಗೆ ತಡೆ ನೀಡಬೇಕು ಎಂದು ಅವರು ಮನವಿ ಮಾಡಿದ್ದರು.

ಇದನ್ನೂ ಓದಿ: ಜೆಡಿಎಸ್​ಗೆ ಮತ ಹಾಕಿದರೆ ನೀವು ಬಿಜೆಪಿಗೆ ಮತ ಹಾಕಿದಂತೆ: ಶಾಸಕ ಜಮೀರ್ ಅಹ್ಮದ್​

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಮೀರ್ ಅಹ್ಮದ್ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ, 2022ರ ಮೇ ತಿಂಗಳಲ್ಲಿ ಎಫ್‌ಐಆರ್ ದಾಖಲಿಸಿತ್ತು. ಜಮೀರ್, ಆದಾಯ ಮೀರಿ 80 ಕೋಟಿಗೂ ಹೆಚ್ಚು ಆಸ್ತಿ ಗಳಿಸಿರುವ ಅಂಶ ದಾಳಿ ವೇಳೆ ಪತ್ತೆಯಾಗಿದೆ ಎಂದು ಎಸಿಬಿ ಆರೋಪಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us