ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ

|

Updated on: Aug 13, 2023 | 6:44 PM

Gruha Lakshmi Scheme Launch: ಆಗಸ್ಟ್ ತಿಂಗಳಾಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಅನ್ನ ಭಾಗ್ಯ ಯೋಜನೆಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿ
ಗೃಹಲಕ್ಷ್ಮೀ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ರಾಹುಲ್ ಗಾಂಧಿ
Follow us on

ಬೆಂಗಳೂರು, ಆಗಸ್ಟ್ 13: ಆಗಸ್ಟ್ ತಿಂಗಳಾಂತ್ಯಕ್ಕೆ ನಡೆಯಲಿರುವ ಗೃಹಲಕ್ಷ್ಮೀ ಯೋಜನೆಯ (Gruha Lakshmi Scheme) ಉದ್ಘಾಟನಾ ಕಾರ್ಯಕ್ರಮಕ್ಕೆ ವಯನಾಡು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಪ್ರಕಾರ, ಆಗಸ್ಟ್ 29 ಅಥವಾ 30 ರಂದು ಈ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ನೋಂದಣಿ ಆರಂಭಿಸಲಾಗಿದ್ದು, ಸುಮಾರು 1.2 ಕೋಟಿ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ. ಮೈಸೂರಿನಲ್ಲಿ ಶೀಘ್ರದಲ್ಲೇ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬರಗಾಲ ಘೋಷಣೆಗೆ ಷರತ್ತುಗಳು ಅಡ್ಡಿ: ನಿಯಮ ಸಡಿಲಿಕೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆ ಒಂದು. ಈ ಯೋಜನೆಯು ರಾಜ್ಯದ ಮಹಿಳಾ ಕುಟುಂಬದ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ. ನಗದು ನೀಡಲಾಗುತ್ತದೆ. ಸುಮಾರು 1.5 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈ ಯೋಜನೆಯ ನೋಂದಣಿ ಜುಲೈ 19 ರಂದು ಪ್ರಾರಂಭವಾಯಿತು.

ವಾಟ್ಸ್​ಆ್ಯಪ್ ಚಾಟ್‌ಬಾಟ್ ಸೇವೆ ಪರಿಚಯ

ಭೌತಿಕ ಅರ್ಜಿಗಳನ್ನು ಸ್ವೀಕರಿಸುವ ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಜನಸಂದಣಿಯನ್ನು ಕಡಿಮೆ ಮಾಡಲು, ಸರ್ಕಾರವು ವಾಟ್ಸ್​ಆ್ಯಪ್ ಚಾಟ್‌ಬಾಟ್ (WhatsApp chatbot) ಸೇವೆಯನ್ನು ಪರಿಚಯಿಸಿದೆ. ಇದರಲ್ಲಿ ಜನರು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಚಾಟ್‌ಬಾಟ್ ಲಿಂಕ್ ಆಗಿರುವ ವಾಟ್ಸಾಪ್ ಸಂಖ್ಯೆ 8147500500 ಅನ್ನು ಸರ್ಕಾರ ಒದಗಿಸಿದೆ. ಬಳಕೆದಾರರು ತಮ್ಮ ವಿವರಗಳನ್ನು WhatsApp ಸಂಖ್ಯೆಗೆ ಕಳುಹಿಸಿದ ನಂತರ, ಚಾಟ್‌ಬಾಟ್ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬಳಕೆದಾರರಿಗೆ ಸಹಾಯ ಮಾಡುತ್ತದೆ ಮತ್ತು ಮಾರ್ಗದರ್ಶನ ನೀಡುತ್ತದೆ.

ಚಾಟ್‌ಬಾಟ್ ನಂತರ ಅಪ್ಲಿಕೇಶನ್‌ಗಳನ್ನು ಬೆಂಗಳೂರುಒನ್, ಕರ್ನಾಟಕ ಒನ್ ಮತ್ತು ಗ್ರಾಮಒನ್ ಕಚೇರಿಗಳಿಗೆ ವರ್ಗಾಯಿಸುತ್ತದೆ. ಅಲ್ಲಿ ಅವುಗಳನ್ನು ಪರಿಶೀಲಿಸಲಾಗುತ್ತದೆ. ಮಾಧ್ಯಮ ವರದಿಗಳ ಪ್ರಕಾರ, ವಾಟ್ಸ್​​ಆ್ಯಪ್ ಚಾಟ್‌ಬಾಟ್ ಸೇವೆಗಳಿಂದ ಏಳು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ